ರಾಜಕೀಯ ಸುದ್ದಿ

ಪಂಚ ಗ್ಯಾರಂಟಿಗಳ ಭ್ರಮೆಯಲ್ಲಿ ತೇಲುತ್ತಿರುವ ಕಾಂಗ್ರೆಸ್ ಸರ್ಕಾರ; ಕಡುಬಡವರ ಬದುಕು ಮರೆತಿದೆ – ಬಿ.ವೈ. ವಿಜಯೇಂದ್ರ

Share It

ಸಿಂಧನೂರು: ಡಿಕೆ ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರ ನಾಡಿನ ಬಡವರು, ಕೂಲಿ ಕಾರ್ಮಿಕರು, ರೈತರು ಹಾಗೂ ದುರ್ಬಲ ವರ್ಗಗಳಿಂದ ದೂರ ಸಾಗುತ್ತಿದೆ. ರಾಜ್ಯದ ಕಡುಬಡವರು ಸರ್ಕಾರಕ್ಕೆ ಶಾಪ ಹಾಕುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವಾಗ್ದಾಳಿ ನಡೆಸಿದರು.

ಸಿಂಧನೂರಿನಲ್ಲಿ ಬಿಜೆಪಿ 4 ನೇ ದಿನದ ಪಾದಯಾತ್ರೆಗೆ ಚಾಲನೆ ನೀಡಿದ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪಂಚ ಗ್ಯಾರಂಟಿಗಳ ಭ್ರಮೆಯಲ್ಲಿ ತೇಲುತ್ತಿರುವ ಕಾಂಗ್ರೆಸ್ ಸರ್ಕಾರ ವಾಸ್ತವಿಕ ಸತ್ಯದಿಂದ ದೂರವಾಗಿದೆ ಎಂದು ಟೀಕಿಸಿದರು.

ವೃದ್ಧಾಪ್ಯ ವೇತನ, ಅಂಗವಿಕಲರ ಮಾಸಾಶನ ಸೇರಿದಂತೆ ಸಾಮಾಜಿಕ ಭದ್ರತಾ ಪಿಂಚಣಿಗಳು ಹಲವು ತಿಂಗಳುಗಳಿಂದ ಫಲಾನುಭವಿಗಳಿಗೆ ತಲುಪುತ್ತಿಲ್ಲ. ಕಳೆದ ಆರು ತಿಂಗಳಿಂದ ಮಾಸಾಶನ ಬಂದಿಲ್ಲ ಎಂದು ಫಲಾನುಭವಿಗಳೇ ಅಳಲು ತೋಡಿಕೊಳ್ಳುತ್ತಿದ್ದಾರೆ. ಕಡುಬಡವರ ಬದುಕಿಗೆ ಆಸರೆಯಾಗಬೇಕಾದ ಸರ್ಕಾರ ಅವರ ಸಂಕಷ್ಟಕ್ಕೆ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿದರು.

ಗಂಗಾ ಕಲ್ಯಾಣ ಯೋಜನೆಯ ಪ್ರಯೋಜನವೂ ಅರ್ಹ ಫಲಾನುಭವಿಗಳಿಗೆ ಸಮರ್ಪಕವಾಗಿ ದೊರೆಯುತ್ತಿಲ್ಲ. ಮನೆ ಇಲ್ಲದ ಬಡವರಿಗೆ ಮನೆಗಳನ್ನು ನಿರ್ಮಿಸಿಕೊಡುವಲ್ಲಿಯೂ ಸರ್ಕಾರ ವಿಫಲವಾಗಿದೆ. ಬಡವರ ಕಲ್ಯಾಣಕ್ಕಾಗಿ ನೀಡಬೇಕಾದ ಹಣವನ್ನೇ ಸಮಯಕ್ಕೆ ನೀಡಲು ಸಾಧ್ಯವಾಗದ ಸ್ಥಿತಿಗೆ ಕಾಂಗ್ರೆಸ್ ಸರ್ಕಾರ ತಲುಪಿದೆ ಎಂದು ವಿಜಯೇಂದ್ರ ಹೇಳಿದರು.

ರೈತರು, ಕೂಲಿ ಕಾರ್ಮಿಕರು, ವೃದ್ಧರು, ಅಂಗವಿಕಲರು ಸೇರಿದಂತೆ ಸಮಾಜದ ಎಲ್ಲ ವರ್ಗದ ಜನರನ್ನು ಸರ್ಕಾರ ನಿರ್ಲಕ್ಷ್ಯದಿಂದ ನೋಡುತ್ತಿದೆ. ಒಂದು ಕಡೆ ಗ್ಯಾರಂಟಿಗಳ ಪ್ರಚಾರದಲ್ಲಿ ಸರ್ಕಾರ ಮುಳುಗಿದ್ದರೆ, ಮತ್ತೊಂದೆಡೆ ನಾಡಿನ ಕಡುಬಡವರ ನೈಜ ಸಮಸ್ಯೆಗಳು ಕಡೆಗಣನೆಯಾಗಿವೆ ಎಂದು ದೂರಿದರು.

ಕಾಂಗ್ರೆಸ್ ಸರ್ಕಾರ ನಾಡಿನ ಕಡುಬಡವರಿಗೆ ಶಾಪವಾಗಿ ಪರಿಣಮಿಸಿದೆ. ರಾಜ್ಯದ ಜನತೆ ಸರ್ಕಾರದ ಆಡಳಿತದಿಂದ ಬೇಸತ್ತಿದ್ದಾರೆ. ಗ್ಯಾರಂಟಿಗಳ ಭ್ರಮೆಯಿಂದ ಹೊರಬಂದು ಜನರ ವಾಸ್ತವಿಕ ಸಮಸ್ಯೆಗಳಿಗೆ ಸರ್ಕಾರ ತಕ್ಷಣ ಸ್ಪಂದಿಸಬೇಕು ಎಂದು ಬಿ.ವೈ. ವಿಜಯೇಂದ್ರ ಆಗ್ರಹಿಸಿದರು.


Share It

You cannot copy content of this page