ಉಪಯುಕ್ತ ರಾಜಕೀಯ ಸುದ್ದಿ

PM E-ಡ್ರೈವ್; ವಿದ್ಯುತ್‌ ಚಾಲಿತ ಬಸ್ಸುಗಳಿಗೆ ಬೇಡಿಕೆ ಇಟ್ಟ ಕರ್ನಾಟಕ:ಕೇಂದ್ರ ಸಚಿವ ಹೆಚ್.ಡಿ.ಕೆ ಭೇಟಿ ಮಾಡಿದ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ

Share It

ನವದೆಹಲಿ: ಕೇಂದ್ರ ಸರಕಾರ ಪ್ರಾಯೋಜಿತ PM E-ಡ್ರೈವ್ ಉಪಕ್ರಮದ ಅಡಿಯಲ್ಲಿ ಎಲೆಕ್ಟ್ರಿಕ್ ಬಸ್‌ಗಳನ್ನು ಹಂಚಿಕೆ ಮಾಡುವಂತೆ ಕೋರಿ ಕರ್ನಾಟಕ ಸರಕಾರ ಸಲ್ಲಿಸಿದ ಮನವಿಯನ್ನು ಕೇಂದ್ರದ ಬೃಹತ್ ಕೈಗಾರಿಕಾ ಸಚಿವಾಲಯವು ಸ್ವೀಕರಿಸಿದೆ.

ಬೆಂಗಳೂರು ಸೇರಿ ರಾಜ್ಯದ ಪ್ರಮುಖ ನಗರಗಳಲ್ಲಿ ನಗರ ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನು ಮತ್ತಷ್ಟು ಉತ್ತಮಪಡಿಸುವ ಅಗತ್ಯವನ್ನು ಉಲ್ಲೇಖಿಸಿ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಸಲ್ಲಿರುವ ಮನವಿಗೆ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ.

ನವದೆಹಲಿಯ ಸಚಿವಲಾಯದಲ್ಲಿ ಸಚಿವ ರಾಮಲಿಂಗಾರೆಡ್ಡಿ ಅವರ ಜತೆ ಕುಮಾರಸ್ವಾಮಿ ಅವರು ರಾಜ್ಯದ ನಗರ ಸಾರಿಗೆ ವ್ಯವಸ್ಥೆಯನ್ನು ಮತ್ತಷ್ಟು ಸುಧಾರಿಸುವ ನಿಟ್ಟಿನಲ್ಲಿ ಮಹತ್ವದ ಮಾತುಕತೆ ನಡೆಸಿದರು.ಬಅಲ್ಲದೆ; ಕರ್ನಾಟಕ ಸರಕಾರಕ್ಕೆ ಕೇಂದ್ರದಿಂದ ಸಂಪೂರ್ಣ ಬೆಂಬಲ ನೀಡುವುದಾಗಿ ಭರವಸೆ ನೀಡಿದರು.

ವಿದ್ಯುತ್‌ ಚಾಲಿತ ಬಸ್ಸುಗಳ ಹಂಚಿಕೆ ಪ್ರಕ್ರಿಯೆ ಈಗಾಗಲೇ ನಡೆಯುತ್ತಿದೆ ಮತ್ತು ಕರ್ನಾಟಕಕ್ಕೆ ಹಂತಹಂತವಾಗಿ ಮತ್ತು ಆದ್ಯತೆಯ ಮೇರೆಗೆ ವಿದ್ಯುತ್ ಚಾಲಿತ ಬಸ್ಸುಗಳನ್ನು ಹಂಚಿಕೆ ಮಾಡಲಾಗುವುದು ಎಂದು ಭರವಸೆ ನೀಡಿದರು.

“ಕರ್ನಾಟಕಕ್ಕೆ ಕೇಂದ್ರ ಸರಕಾರದಿಂದ ಸೂಕ್ತ ಬೆಂಬಲ ಸಿಗುತ್ತದೆ ಎಂದು ನಾನು ಖಚಿತಪಡಿಸುತ್ತೇನೆ” ಎಂದು ರಾಮಲಿಂಗಾರೆಡ್ಡಿ ಅವರಿಗೆ ಸ್ಪಷ್ಟವಾಗಿ ತಿಳಿಸಿದ  ಕುಮಾರಸ್ವಾಮಿ ಅವರು; “ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿಯಿಂದ PM E-ಡ್ರೈವ್ ಯೋಜನೆ ಅತ್ಯಂತ ಯಶಸ್ವಿಯಾಗಿ ಮುಂದುವರಿಯುತ್ತಿದೆ. ಸಾರಿಗೆ ವ್ಯವಸ್ಥೆಯಲ್ಲಿ, ಅದರಲ್ಲಿಯೂ ನಗರ ಪ್ರದೇಶಗಳಲ್ಲಿ ವಾಹನಗಳು ಹೊರಸೂಸುವ ಮಾಲಿನ್ಯವನ್ನು ಶೂನ್ಯಮಟ್ಟಕ್ಕೆ ಇಳಿಸುವ ನಿಟ್ಟಿನಲ್ಲಿ ಕರ್ನಾಟಕವೂ ಸೇರಿ ಭಾರತದಾದ್ಯಂತ ವಿದ್ಯುತ್‌ ಚಾಲಿತ ಬಸ್ಸುಗಳ ಅಳವಡಿಕೆಗೆ ಕೇಂದ್ರ ಸರಕಾರವು ದೊಡ್ಡ ಪ್ರಮಾಣದಲ್ಲಿ ಪ್ರಯತ್ನ ಮಾಡುತ್ತಿದೆ . ಕರ್ನಾಟಕವು ಪಿಎಂ ಇ-ಡ್ರೈವ್ ಯೋಜನೆ ಅಡಿಯಲ್ಲಿ ಖಂಡಿತವಾಗಿಯೂ ಹೆಚ್ಚು ಬಸ್ಸುಗಳನ್ನು ಪಡೆಯುತ್ತದೆ” ಎಂದು ತಿಳಿಸಿದರು.

PM E-ಡ್ರೈವ್ ಉಪಕ್ರಮದಡಿಯಲ್ಲಿ 9 ಪ್ರಮುಖ ನಗರಗಳಿಗೆ 14,000 ವಿದ್ಯುತ್‌ ಚಾಲಿತ ಬಸ್‌ಗಳನ್ನು ಹಂಚಿಕೆ ಮಾಡಲಾಗುವುದು. ಚಾರ್ಜಿಂಗ್ ಸ್ಟೇಷನ್‌ಗಳು, ಬಸ್ ಡಿಪೋಗಳು ಮತ್ತು ವಾಹನ ನಿರ್ವಹಣಾ ವ್ಯವಸ್ಥೆ ಸೇರಿ ಸಂಬಂಧಿತ ಮೂಲಸೌಕರ್ಯಗಳನ್ನು ಕಲ್ಪಿಸುವ ನಿಟ್ಟಿನಲ್ಲಿ  ಕೇಂದ್ರ ಮತ್ತು ರಾಜ್ಯ ಸರಕಾರಗಳ ನಡುವಿನ ಚರ್ಚೆ ನಡೆಸುತ್ತಿವೆ. ಈಗಾಗಲೇ ಗುರುತಿಸಲಾದ ನಗರ ಸಮೂಹಗಳಲ್ಲಿ ಈ ಯೋಜನೆಯ ತ್ವರಿತ ಅನುಷ್ಠಾನವನ್ನು ಖಚಿತಪಡಿಸಿಕೊಳ್ಳಲು ಸಚಿವಾಲಾಯದ ಹಿರಿಯ ಅಧಿಕಾರಿಗಳಿಗೆ ಸ್ಪಷ್ಟ ನಿರ್ದೇಶನ ನೀಡಲಾಗಿದೆ ಎಂದು ಸಚಿವ ಕುಮಾರಸ್ವಾಮಿ ಹೇಳಿದರು.

“ನಾವು ವಿದ್ಯುತ್‌ ಚಾಲಿತ ಬಸ್ಸುಗಳನ್ನು ವಿತರಿಸುತ್ತಿದ್ದೇವೆ ಎನ್ನುವುದಕ್ಕಿಂತ, ನಾವು ಭಾರತದ ಜನತೆಗೆ ಸ್ವಚ್ಛ, ಚುರುಕಾದ ಮತ್ತು ಹೆಚ್ಚು ಉತ್ತಮವಾದ ಸಾರಿಗೆ ವ್ಯವಸ್ಥೆಯನ್ನು ಕಲ್ಪಿಸುತ್ತಿದ್ದೇವೆ” ಎಂದು ತಿಳಿಸಿದ ಕೇಂದ್ರ ಸಚಿವರು; ಬೆಂಗಳೂರು ನಗರ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ನಗರವಾಗಿದೆ. ಈ ನಿಟ್ಟಿನಲ್ಲಿ ನಗರದಲ್ಲಿ ಮಾಲಿನ್ಯರಹಿತ ಸಾರಿಗೆ ವ್ಯವಸ್ಥೆ ಕಲ್ಪಿಸುವುದು ನಮ್ಮ ಪ್ರಮುಖ ಆದ್ಯತೆಯಾಗಿದೆ ಎಂದರು.

ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಪ್ರಾರಂಭಿಸಲಾದ PM E-ಡ್ರೈವ್ ಉಪಕ್ರಮವು 14,028 ವಿದ್ಯುತ್‌ ಚಾಲಿತ ಬಸ್ಸುಗಳೊಂದಿಗೆ ನಗರಗಳಲ್ಲಿ ವಾಯುಮಾಲಿನ್ಯ ರಹಿತ ಸಾರಿಗೆ ವ್ಯವಸ್ಥೆ ಕಲ್ಪಿಸುವ ಗುರಿಯನ್ನು ಹೊಂದಿದೆ. ಈ ಯೋಜನೆಗೆ ಕೇಂದ್ರ ಸರಕಾರದಿಂದ ಎರಡು ವರ್ಷಗಳ ಅವಧಿಯಲ್ಲಿ ₹10,900 ಕೋಟಿ ಮೊತ್ತವನ್ನು ವೆಚ್ಚ ಮಾಡಲಾಗುತ್ತಿದೆ. ಎಲ್ಲಾ ರಾಜ್ಯ ಸರಕಾರಗಳು ಮತ್ತು ಪಾಲುದಾರರ ಸಹಯೋಗದೊಂದಿಗೆ ಈ ಪರಿವರ್ತನಾಶೀಲ ಗುರಿಯನ್ನು ಪೂರೈಸಲು ಬೃಹತ್‌ ಕೈಗಾರಿಕಾ ಸಚಿವಾಲಯವು ಕ್ರಿಯಾಶೀಲವಾಗಿ ಕೆಲಸ ಮಾಡುತ್ತಿದೆ ಎಂದು ಕೇಂದ್ರ ಸಚಿವರು ಹೇಳಿದ್ದಾರೆ.

ರಾಜ್ಯದ ಸಾರಿಗೆ ಸಂಸ್ಥೆಗಳು ದೇಶದ ನಂ. ಸಾರಿಗೆ ವ್ಯವಸ್ಥೆ ಒದಗಿಸುತ್ತಿದ್ದು, ಮತ್ತಷ್ಟು ಪರಿಣಾಮಕಾರಿ ಸಾರಿಗೆ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ಹೆಚ್ಚಿನ ಎಲೆಕ್ಟ್ರಿಕ್ ಬಸ್ ಗಳಿಗೆ ಬೇಡಿಕೆ ಇಡಲಾಗಿದೆ. ಈ ಸಂಬಂಧ ಕೇಂದ್ರ ಸಚಿವ ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಲಾಗಿದೆ. ಅವರಿಂದ ಸಕಾರಾತ್ಮಕ ಸ್ಪಂದನೆ ಸಿಕ್ಕಿದೆ.


– ರಾಮಲಿಂಗಾ ರೆಡ್ಡಿ,
ಸಾರಿಗೆ ಮತ್ತು ಮುಜರಾಯಿ ಸಚಿವರು.


Share It

You cannot copy content of this page