ಬೆಂಗಳೂರು: ಕರ್ನಾಟಕ ಮೂರು ವಿಧಾನಸಭ ಕ್ಷೇತ್ರಗಳ ಉಪಚುನಾವಣೆಯ ದಿನಾಂಕ ಘೋಷಣೆಯಾಗಿದ್ದು, ನವೆಂಬರ್ 13ರಂದು ಚನ್ನಪಟ್ಟಣ, ಸಂಡೂರು, ಶಿಗ್ಗಾಂವಿ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ.
ದೆಹಲಿಯ ವಿಜ್ಞಾನ ಭವನದಲ್ಲಿ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಸುದ್ದಿಗೋಷ್ಠಿ ನಡೆಸಿ ಶಿಗ್ಗಾಂವಿ(ಹಾವೇರಿ), ಚನ್ನಪಟ್ಟಣ (ರಾಮನಗರ) ಮತ್ತು ಸಂಡೂರು(ಬಳ್ಳಾರಿ ಜಿಲ್ಲೆ) ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆಗೆ ದಿನಾಂಕ ಪ್ರಕಟಿಸಿದ್ದಾರೆ. ನವೆಂಬರ್ 23ರಂದು ಈ ಮೂರು ಕ್ಷೇತ್ರಗಳ ಮತ ಎಣಿಕೆ ನಡೆಯಲಿದೆ.
ಬಸವರಾಜ ಬೊಮ್ಮಾಯಿ ರಾಜೀನಾಮೆಯಿಂದ ಶಿಗ್ಗಾಂವಿ (ಹಾವೇರಿ ಜಿಲ್ಲೆ) ವಿಧಾನಸಭಾ ಕ್ಷೇತ್ರ ತೆರವಾಗಿದ್ದರೆ, ಸಂಸದರಾಗಿ ಆಯ್ಕೆಯಾಗಿರುವ ಎಚ್ಡಿ ಕುಮಾರಸ್ವಾಮಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರಿಂದ ಚನ್ನಪಟ್ಟಣ ಕ್ಷೇತ್ರಕ್ಕೆ ಚುನಾವಣೆ ನಡೆಯಿದೆ. ಅದೇ ರೀತಿ ಇ.ತುಕಾರಾಂ ರಾಜೀನಾಮೆಯಿಂದ ತೆರವಾಗಿರುವ ಸಂಡೂರು ಕ್ಷೇತ್ರದಲ್ಲಿ ಉಪಚುನಾವಣೆ ನಡೆಯಿದೆ.

