ಜಮ್ಮು-ಕಾಶ್ಮೀರ: ಸುರಂಗ ನಿರ್ಮಾಣ ಕಾಮಗಾರಿಯಲ್ಲಿ ತೊಡಗಿದ್ದ ಕಾರ್ಮಿಕರ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದರಿಂದ ವೈದ್ಯ ಸೇರಿ 7 ಮಂದಿ ಸಾವನ್ನಪ್ಪಿದ್ದಾರೆ.
ಮಧ್ಯ ಕಾಶ್ಮೀರದ ಗಂದರ್ಬಾಲ್ ಜಿಲ್ಲೆಯ ಗುಂಡ್ ಪ್ರದೇಶದ ಗಗಂಗೀರ್ನಲ್ಲಿನ ಝಡ್-ಮೋಡ್ ಸುರಂಗದ ಕ್ಯಾಂಪ್ಸೈಟ್ ಬಳಿ ಘಟನೆ ನಡೆದಿದೆ. ಐವರು ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೃತರನ್ನು ಡಾ.ಶಹನವಾಜ್, ಫಹೀಮ್ ನಜೀರ್, ಕಲೀಂ, ಮೊಹಮ್ಮದ್ ಹನೀಫ್, ಶಶಿ ಅಬ್ರೋಲ್, ಅನಿಲ್ ಶುಕ್ಲಾ ಮತ್ತು ಗುರ್ಮೀತ್ ಸಿಂಗ್ ಎಂದು ಗುರುತಿಸಲಾಗಿದೆ. ತಕ್ಷಣವೇ ಪೊಲೀಸರು, ಭದ್ರತಾ ಪಡೆಗಳು ಸ್ಥಳಕ್ಕೆ ಆಗಮಿಸಿದ್ದು, ಸ್ಥಳದಲ್ಲಿದ್ದ ಉಳಿದ ಕಾರ್ಮಿಕರನ್ನು ರಕ್ಷಿಸಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಸಂತಾಪ ವ್ಯಕ್ತಪಡಿಸಿದ್ದು, ಅಮಾಯಕ ಕಾರ್ಮಿಕರ ಮೇಲೆ ಹೇಡಿತನದ ದಾಳಿ ಎಂದಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ಗಗಂಗೀರ್ನಲ್ಲಿ ನಾಗರಿಕರ ಮೇಲೆ ನಡೆದ ಭಯೋತ್ಪಾದಕ ದಾಳಿಯನ್ನು ಖಂಡಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, ಇದು ಹೇಡಿತನದ ಭೀಕರ ಕೃತ್ಯ ಎಂದು ಬಣ್ಣಿಸಿದ್ದಾರೆ. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ, ಈ ಘಟನೆಗೆ ಕಾರಣರಾದವರನ್ನು ಸುಮ್ಮನೆ ಬಿಡುವುದಿಲ್ಲ ಎಂದಿದ್ದಾರೆ..