ರಾಜಕೀಯ ಸುದ್ದಿ

ಕಲ್ಯಾಣ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಮುಖ್ಯಮಂತ್ರಿ ಸಿದ್ದರಾಮಯ್ಯ

Share It

ಕಲಬುರಗಿ: ರಾಜ್ಯ ಸರ್ಕಾರದಿಂದ 1.685 ಕೋಟಿ ರೂ ವೆಚ್ಚದಲ್ಲಿ ಕಲಬುರಗಿಯನ್ನು ಸ್ಮಾರ್ಟ್ ಸಿಟಿಯನ್ನಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ನಗರದ ಪೊಲೀಸ್‌ ಪರೇಡ್ ಮೈದಾನದಲ್ಲಿ ಕಲ್ಯಾಣ ಕರ್ನಾಟಕ ಉತ್ಸವದ ಅಂಗವಾಗಿ ರಾಷ್ಟ್ರಧ್ವಜಾರೋಹಣ ನೆರವೇರಿಸಿ ಮಾತನಾಡಿದರು.
ಕಲ್ಯಾಣ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ತಮ್ಮ ಸರ್ಕಾರ ಬದ್ಧವಾಗಿರುವುದಾಗಿ ಘೋಷಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಲಬುರಗಿ ನಗರವನ್ನು ರಾಜ್ಯ ಸರ್ಕಾರದ ವತಿಯಿಂದಲೇ 1.685 ಕೋಟಿ ವೆಚ್ಚದಲ್ಲಿ ಸ್ಮಾರ್ಟ್ ಸಿಟಿಯನ್ನಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ಘೋಷಿಸಿದರು.

ರಾಜ್ಯ ಸರ್ಕಾರ ಈ ಭಾಗದ ಅಭಿವೃದ್ಧಿಗಾಗಿ ಅನುಷ್ಠಾನಗೊಳಿಸಿದ ಹಲವು ಯೋಜನೆಗಳನ್ನು ವಿವರಿಸಿದರು.

ಹೈದರಾಬಾದ್ ನಿಜಾಮರ ಆಡಳಿತದಿಂದ ಈ ಭಾಗದ ಜನತೆಗೆ ಒಂದು ವರ್ಷ ತಡವಾಗಿ ವಿಮೋಚನೆ ದೊರಕಿತು. ಆಗಿನಿಂದಲೂ ಆರ್ಥಿಕವಾಗಿ ಹಿಂದುಳಿದ ಈ ಭಾಗಕ್ಕೆ ಮಲ್ಲಿಕಾರ್ಜುನ ಖರ್ಗೆ, ಎನ್. ಧರಂಸಿಂಗ್ ಅವರ ಪ್ರಯತ್ನದ ಫಲವಾಗಿ 371 (ಜೆ) ಸಂವಿಧಾನ ತಿದ್ದುಪಡಿ ಮೂಲಕ ಕೇಂದ್ರ ಸರ್ಕಾರ ಮೀಸಲಾತಿ ಕಲ್ಪಿಸಿದೆ. ಅದರ ಭಾಗವಾಗಿ ರಚನೆಯಾದ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಗೆ ನಮ್ಮ ಸರ್ಕಾರ ಪ್ರತಿವರ್ಷ 5000 ಕೋಟಿ ಅನುದಾನ ನೀಡುತ್ತಿದೆ ಎಂದರು.

ಮಂಡಳಿಯ 262 ಕೋಟಿ ನೆರವಿನೊಂದಿಗೆ ಕಲಬುರಗಿಯಲ್ಲಿ ಸುಸಜ್ಜಿತ ಜಯದೇವ ಹೃದ್ರೋಗ ವಿಜ್ಞಾನ ಸಂಸ್ಥೆಯ ಕಟ್ಟಡದ ನಿರ್ಮಾಣ ಪೂರ್ಣಗೊಳ್ಳುವ ಹಂತದಲ್ಲಿದೆ. ಕೆಕೆಆ‌ರ್ ಡಿಬಿಗೆ ಹತ್ತು ವರ್ಷಗಳಲ್ಲಿ 19,778 ಕೋಟಿ ಹಂಚಿಕೆ ಮಾಡಿ, 13.229 ಕೋಟಿ ಬಿಡುಗಡೆ ಮಾಡಿದ್ದು, ಇದರಲ್ಲಿ ಇದುವರೆಗೆ 11.174 ಕೋಟಿ ಖರ್ಚು ಮಾಡಲಾಗಿದೆ. ಶೇ. 85ರಷ್ಟು ಆರ್ಥಿಕ ಪ್ರಗತಿ ಸಾಧಿಸಲಾಗಿದೆ ಎಂದರು.

ಕಲಬುರಗಿ ಹೊರವಲಯದ ನದಿಸಿನ್ನೂರು ಬಳಿ ಕೇಂದ್ರ ರಾಜ್ಯದ ಸಹಭಾಗಿತ್ವದಲ್ಲಿ ಮೆಗಾ ಟೆಕ್ಸ್ ಟೈಲ್ ಪಾರ್ಕ್ ನಿರ್ಮಿಸಲಾಗುತ್ತಿದ್ದು, ಇದಕ್ಕಾಗಿ ಬಜೆಟ್ ನಲ್ಲಿ 50 ಕೋಟಿ ರೂ ಒದಗಿಸಲಾಗಿದೆ. ರಾಯಚೂರಿನಲ್ಲಿ ಸಾರ್ವಜನಿಕ- ಖಾಸಗಿ ಸಹಭಾಗಿತ್ವದಲ್ಲಿ ನೂತನ ಟೆಕ್ಸ್ ಟೈಲ್ ಪಾರ್ಕ್ ನಿರ್ಮಿಸಲಾಗುವುದು ಎಂದರು.

ಬಸವ ಕಲ್ಯಾಣದಲ್ಲಿ ಅನುಭವ ಮಂಟಪ ನಿರ್ಮಾಣಕ್ಕೆ ಅಗತ್ಯ ಅನುದಾನ ಒದಗಿಸಿದ್ದೇವೆ. ರಾಯಚೂರಿನಲ್ಲಿ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಯನ್ನು ಸ್ಥಾಪಿಸಲು ರಾಜ್ಯ ಸರ್ಕಾರ ಅಗತ್ಯವಿರುವ ಎಲ್ಲ ನೆರವನ್ನು ಒದಗಿಸಲು ಸಿದ್ಧವಿದೆ. ಕೇಂದ್ರ ಸರ್ಕಾರ ಕೂಡಲೇ ಏಮ್ಸ್ ಸಂಸ್ಥೆ ಆರಂಭಿಸಲು ಅನುಮೋದನೆ ನೀಡಬೇಕು ಎಂದು ಸಿದ್ದರಾಮಯ್ಯ ಅವರು ಇದೇ ಸಂದರ್ಭದಲ್ಲಿ ಒತ್ತಾಯಿಸಿದರು.


Share It

You cannot copy content of this page