ರಾಜಕೀಯ ಸುದ್ದಿ

ಸಿಎಂ ವಿರುದ್ಧ ಮುಡಾ ಕೇಸ್: ತನಿಖಾ ವರದಿ ಸಲ್ಲಿಸಲು ಕಾಲಾವಕಾಶ ಕೋರಿದ ಲೋಕಾಯುಕ್ತ ಪೊಲೀಸರು

Share It

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಬಿ.ಎಂ.ಪಾರ್ವತಿಯವರು ಕಾನೂನುಬಾಹಿರವಾಗಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ 14 ಸೈಟ್ ಹಂಚಿಕೆ ಪಡೆದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರ ಬಿ ರಿಪೋರ್ಟ್ ಪ್ರಶ್ನಿಸಿ ದೂರುದಾರ ಸ್ನೇಹಮಯಿ ಕೃಷ್ಣ ಸಲ್ಲಿಸಿರುವ ಅರ್ಜಿ ವಿಚಾರಣೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್​ನಲ್ಲಿ ನಡೆಯಿತು.

ಕೋರ್ಟ್ ಸೂಚನೆಯಂತೆ ಬುಧವಾರ (ಮೇ 7) ಅಂತಿಮ ತನಿಖಾ ವರದಿ ಸಲ್ಲಿಸಬೇಕಿದ್ದ ಲೋಕಾಯುಕ್ತ ಪೊಲೀಸರು ಕಾಲಾವಕಾಶ ಕೋರಿ ಮನವಿ ಸಲ್ಲಿಸಿದರು.

ಕೋರ್ಟ್​ಗೆ ಹಾಜರಾಗಿದ್ದ ಲೋಕಾಯುಕ್ತ ತನಿಖಾಧಿಕಾರಿ ಕೋರ್ಟ್​ಗೆ ಮನವಿ ಸಲ್ಲಿಸಿ ಕೆಲವು ಅಧಿಕಾರಿಗಳ ವಿರುದ್ಧ ತನಿಖೆಗೆ ಭ್ರಷ್ಟಾಚಾರ ತಡೆ ಕಾಯ್ದೆಯ ಸೆಪ್ಟಂಬರ್ 17ಎ ಅಡಿ ಅನುಮತಿ ಕೇಳಿದರು. ಅನುಮತಿ ಬರಬೇಕಾಗಿರುವುದರಿಂದ ತನಿಖೆ ಪೂರ್ಣಗೊಳಿಸಲು ಮತ್ತಷ್ಟು ಕಾಲಾವಕಾಶ ಬೇಕೆಂದು ಕೋರ್ಟ್​ಗೆ ಮನವಿ ಮಾಡಿದರು.

ಈ ಬಗ್ಗೆ ದಾಖಲೆಗಳನ್ನು ಮುಚ್ಚಿದ ಲಕೋಟೆಯಲ್ಲಿ ಲೋಕಾಯುಕ್ತ ಪರ ಎಸ್‌ಪಿಪಿ ವೆಂಕಟೇಶ್ ಅರಬಟ್ಟಿ ಕೋರ್ಟ್​ಗೆ ಸಲ್ಲಿಸಿದರು. ಇದಕ್ಕೆ ದೂರುದಾರ ಸ್ನೇಹಮಯಿ ಕೃಷ್ಣ ಆಕ್ಷೇಪಿಸಿ, ಡಿ.ಬಿ.ನಟೇಶ್ ವಿರುದ್ಧ ಈಗಾಗಲೇ ಅನುಮತಿ ಪಡೆದಿದ್ದಾರೆ. ತನಿಖೆ ವಿಳಂಬಗೊಳಿಸಲು ಅರ್ಜಿ ಸಲ್ಲಿಸುತ್ತಿದ್ದಾರೆಂದು ಆಕ್ಷೇಪ ವ್ಯಕ್ತಪಡಿಸಿದರು.
ಕೋರ್ಟ್ ತಾನೇ ಸ್ವತಃ ಪ್ರಕರಣದ ಕಾಗ್ನಿಜೆನ್ಸ್ ಪಡೆಯಬೇಕೆಂದು ಮನವಿ ಮಾಡಿದರು.

ಎರಡೂ ಕಡೆ ವಾದಮಂಡನೆ ಆಲಿಸಿದ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಅವರು ಅಂತಿಮ ವರದಿ ಸಲ್ಲಿಕೆ ಬಳಿಕವೇ ಕಾಗ್ನಿಜೆನ್ಸ್ ಬಗ್ಗೆ ತೀರ್ಮಾನಿಸುವುದು ಸೂಕ್ತವೆಂದು ಪುನರುಚ್ಚರಿಸಿದರು. ಅಲ್ಲದೇ ತನಿಖಾಧಿಕಾರಿ ತನಿಖೆಯ ಪ್ರಗತಿ ಬಗ್ಗೆ ಪ್ರಮಾಣಪತ್ರ ಸಲ್ಲಿಸಬೇಕೆಂದು ಸೂಚಿಸಿ ವಿಚಾರಣೆಯನ್ನು ಮೇ 29ಕ್ಕೆ ಮುಂದೂಡಿದರು.

ಸಿಎಂ ಸಿದ್ದರಾಮಯ್ಯ ಪತ್ನಿ ಬಿ.ಎಂ ಪಾರ್ವತಿ ಅವರ ಹೆಸರಿನಲ್ಲಿದ್ದ ಕೆಸರೆ ಗ್ರಾಮದ ಸರ್ವೆ ನಂಬರ್ 464ರಲ್ಲಿ 3.16 ಎಕರೆ ಜಮೀನನ್ನು ದೇವನೂರು ಬಡಾವಣೆ ನಿರ್ಮಾಣಕ್ಕೆ ಭೂಸ್ವಾಧೀನ ಮಾಡಿಕೊಳ್ಳಲಾಗಿತ್ತು. ಈ ಜಾಗವನ್ನು ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರಿಗೆ ದಾನ ಪತ್ರದ ಮೂಲಕ ಅವರ ಸಹೋದರ ಕೊಟ್ಟಿದ್ದರು. ಇದು ಒಟ್ಟು 1,48,104 ಚದರ ಅಡಿ ಜಾಗ ಇತ್ತು.

ಅದರ ಬದಲಿಗೆ ಮುಡಾ 2021ರಲ್ಲಿ ಪಾರ್ವತಿ ಅವರಿಗೆ ಮೈಸೂರಿನ ವಿಜಯನಗರ ಬಡಾವಣೆಯಲ್ಲಿ 38,284 ಚದರ ಅಡಿ ಜಾಗ ಅಂದರೆ 14 ನಿವೇಶನ ಕೊಟ್ಟಿದ್ದಾರೆ ಇದು ಚರ್ಚೆಗೆ ಕಾರಣವಾಗಿತ್ತು. ವಿಜಯನಗರ ಬಡಾವಣೆಯಲ್ಲಿ 14 ನಿವೇಶನ ಪತ್ನಿ ಪಾರ್ವತಿ ಅವರಿಗೆ ಮಂಜೂರು ಆಗಲು, ಸಿದ್ದರಾಮಯ್ಯ ಅವರು ಪ್ರಭಾವ ಬೀರಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು.


Share It

You cannot copy content of this page