ಸುದ್ದಿ

ವಿದ್ಯಾರ್ಥಿಗಳಲ್ಲಿ ಶಿಸ್ತು, ಸಂಯಮ ಅತ್ಯಾವಶ್ಯಕ: ನಾ.ಸೋಮೇಶ್ವರ

Share It

ಕೆ.ಆರ್.ಪುರ: ವಿದ್ಯಾರ್ಥಿಗಳು ಹದಿಹರೆಯದಲ್ಲಿ ಶಿಸ್ತು, ಸಂಯಮ, ತಾಳ್ಮೆ ಬೆಳೆಸಿಕೊಂಡು ಏಕಾಗ್ರತೆಯಿಂದ ಅಭ್ಯಾಸ ಮಾಡಿದಲ್ಲಿ ಉನ್ನತ ವ್ಯಕ್ತಿತ್ವ ಹೊಂದಲು ಸಾಧ್ಯ ಎಂದು ಕ್ವಿಜ್ ಮಾಸ್ಟರ್ ಖ್ಯಾತಿಯ ಡಾ.ಎನ್. ಸೋಮೇಶ್ವರ ಅವರು ಹೇಳಿದರು.

ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ 2024-25ನೇ ಶೈಕ್ಷಣಿಕ ಸಾಲಿನ ಸಾಂಸ್ಕೃತಿಕ ಕ್ರೀಡಾ ಎನ್.ಎಸ್.ಎಸ್, ಎನ್.ಸಿ.ಸಿ, ರೆಡ್ ಕ್ರಾಸ್, ಭಾರತ್ ಅಂಡ್ ಗೈಡ್ಸ್ ಮತ್ತು ಮಹಿಳಾ ಸಬಲೀಕರಣ ಕೋಶ ಮತ್ತು ಇತೆರೆ ಚಟುವಟಿಕೆಗಳ ಸಮಾರೋಪ ಸಮಾರಂಭದಲ್ಲಿ ಸಿರಿ ವಾರ್ಷಿಕ ಸಂಚಿಕೆ ಬಿಡುಗಡೆ ಮಾಡಿ ಮಾತನಾಡಿದರು.

ಶಿಕ್ಷಣ ಎಂಬುದು ಕೇವಲ ಪಠ್ಯಕ್ಕೆ ಸೀಮಿತವಾಗಿರದೆ, ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಸಹಕಾರಿಯಾಗುವಂತಿರಬೇಕು. ಶಿಕ್ಷಕರು ಪಠ್ಯದ ಜೊತೆಗೆ ವಿದ್ಯಾರ್ಥಿಗಳಿಗೆ ಕ್ರೀಡೆ, ಕಲೆ, ಸಾಹಿತ್ಯ, ಸಂಗೀತ ಹೀಗೆ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸುವಂತೆ ಪ್ರೋತ್ಸಾಹಸಬೇಕು ಎಂದು ತಿಳಿಸಿದರು.

ವಿದ್ಯಾರ್ಥಿಗಳು ತಮ್ಮ ಪ್ರತಿಭೆಯನ್ನು ಒರೆಗೆ ಹಚ್ಚುವುದರೊಂದಿಗೆ ದೇಶ ಪ್ರೇಮದ ಕಿಚ್ಚು ಹಚ್ಚಿಕೊಂಡು ಸದೃಢ ಭಾರತ ನಿರ್ಮಾಣಕ್ಕೆ ಕಟಿಬದ್ದರಾಗಬೇಕು ಎಂದು ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ಪ್ರಾದೇಶಿಕ ಕಚೇರಿ ಜಂಟಿ ಆಯುಕ್ತರಾದ ಡಾ. ರಾಮಕೃಷ್ಣರೆಡ್ಡಿ ಕೆ. ಅಭಿಪ್ರಾಯಪಟ್ಟರು.

ಸುಸಂಸ್ಕೃತ ಸಮಾಜ ನಿರ್ಮಾಣಕ್ಕೆ ಯುವಜನತೆಯಲ್ಲಿ ಸಂಸ್ಕಾರಯುತ ಶಿಕ್ಷಣ ಅಗತ್ಯವಿದೆ. ಗುರುವಿನ ಮಾರ್ಗದರ್ಶನದಿಂದ ಭವಿಷ್ಯ ಉಜ್ವಲಗೊಳ್ಳುತ್ತದೆ ಆದರ್ಶ ಬದುಕು ರೂಪಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂದು ಪ್ರಾಂಶುಪಾಲರಾದಾ ಡಾ. ಪ್ರತಿಭಾ ಪಾರ್ಶ್ವಾನಾಥ್ ಅವರು ಹೇಳಿದರು.

ಈ ಸಂದರ್ಭದಲ್ಲಿ ಕಾಲೇಜಿನ ಬೋಧಕ ಬೋಧಕೇತರ ಸಿಬ್ಬಂದಿ ಭಾಗವಹಿಸಿದ್ದರು.


Share It

You cannot copy content of this page