ದಾವಣಗೆರೆ: ಚನ್ನಗಿರಿ ಭಾಗದ ಜನರ ಬಹು ದಿನಗಳ ಬೇಡಿಕೆಯಾಗಿದ್ದ ಬಸ್ ಘಟಕವನ್ನು ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವರಾದ ರಾಮಲಿಂಗಾ ರೆಡ್ಡಿ ಅವರು ಉದ್ಘಾಟನೆ ಮಾಡಿದರು.
ಉದ್ಘಾಟನೆ ಮಾಡಿ ಮಾತನಾಡಿದ ಸಚಿವ ರಾಮಲಿಂಗಾ ರೆಡ್ಡಿ, 4 ಎಕರೆ ಜಮೀನಿನಲ್ಲಿ 8 ಕೋಟಿ ರೂ ವೆಚ್ಚದಲ್ಲಿ ಚನ್ನಗಿರಿ ತಾಲೂಕು ಬಸ್ ಘಟಕ ನಿರ್ಮಾಣ ಮಾಡಲಾಗಿದ್ದು, ಈಗಾಗಲೇ ಸಿಬ್ಬಂದಿ ಮತ್ತು ಬಸ್ಸುಗಳನ್ನು ನಿಯೋಜಿಸಲಾಗಿದೆ ಎಂದರು.
ಚನ್ನಗಿರಿಯಲ್ಲಿ ಬಸ್ ಘಟಕ ಆರಂಭದಿಂದ ಜನರ ಬೇಡಿಕೆ ಈಡೇರಿದ್ದು ಇದರ ಪ್ರಯೋಜನ ಪಡೆದು ಕೊಳ್ಳುವಂತೆ ಮಾನ್ಯ ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್ ಮಲ್ಲಿಕಾರ್ಜುನ್ ತಿಳಿಸಿದರು.

ಶಾಸಕ ಬಸವರಾಜ ವಿ. ಶಿವಗಂಗಾ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ಬಸ್ ಘಟಕ ನಿರ್ಮಾಣಕ್ಕೆ ನಿವೇಶನ ಸಮಸ್ಯೆ ಇತ್ತು, ಅದನ್ನು ಬಗೆ ಹರಿಸಲಾಗಿದೆ. ಹೊಸ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವರಲ್ಲಿ ಬೇಡಿಕೆ ಇಟ್ಟು, ಎರಡು ಎಕರೆ ನಿವೇಶನ ಗುರುತಿಸಲಾಗಿದೆ ಎಂದು ತಿಳಿಸಿದ ಶಾಸಕರು, ಸಾರಿಗೆ ಸಚಿವರು ಶೀಘ್ರದಲ್ಲಿ ಅನುಮತಿ ನೀಡುವುದಾಗಿ ತಿಳಿಸಿದರು.
ಅದೇ ರೀತಿ ಮಾಯಕೊಂಡ ವಿಧಾನಸಭಾ ಕ್ಷೇತ್ರದ ಶಾಸಕರಾದ ಕೆ.ಎಸ್. ಬಸವಂತಪ್ಪ,ರವರು ಸಹ ಬಸ್ ನಿಲ್ದಾಣಕ್ಕೆ ಬೇಡಿಕೆ ಇಟ್ಟರು. ಸಚಿವರು ಜಾಗ ಒದಗಿಸಿದ್ದಲ್ಲಿ ಬಸ್ ನಿಲ್ದಾಣ ನಿರ್ಮಿಸಲು ಒಪ್ಪಿಗೆ ಸೂಚಿಸಿದರು.
ಇದೇ ಸಂಧರ್ಭದಲ್ಲಿ ಹೊಳಲ್ಕೆರೆ ತರಬೇತಿ ಕೇಂದ್ರಕ್ಕೆ ಭೇಟಿ ನೀಡಿ, ತರಬೇತಿ ಕೇಂದ್ರವನ್ನು ಸರ್ಕಾರದ ಕೌಶಲ್ಯಅಭಿವೃದ್ಧಿ ಇಲಾಖೆಯೊಡನೆ ಮಾತುಕತೆ ನಡೆಸಿ ಮತ್ತಷ್ಟು ಸಾರ್ವಜನಿಕರಿಗೆ ಸದುಪಯೋಗವಾಗುವ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಸಭೆ ನಡೆಸುವ ಬಗ್ಗೆ ಮಾತುತೆ ನಡೆಸಲು ಸೂಚಿಸಿದರು.
ಬಸ್ ಘಟಕದ ಉದ್ಘಾಟನಾ ಸಮಾರಂಭದಲ್ಲಿ ಕರ್ನಾಟಕ ಜೀವ ವೈವಿಧ್ಯ ನಿಗಮ ಮಂಡಳಿ ಅಧ್ಯಕ್ಷರಾದ ವಡ್ನಾಳ್ ಜಗದೀಶ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಶಾಮನೂರು ಟಿ. ಬಸವರಾಜ್, ಅಜ್ಜಿಹಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷ ಗೋವಿಂದರಾಜ್, ನಿಗಮದ ವ್ಯವಸ್ಥಾಪಕ ನಿರ್ದೇಶಕ ಅಕ್ರಂ ಪಾಶ, ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ ಉಪಸ್ಥಿತರಿದ್ದರು.