ಬೆಂಗಳೂರು:ಸಾರ್ವಜನಿಕ ಗ್ರಂಥಾಲಯ ಇಲಾಖೆಯಲ್ಲಿ ಖಾಲಿ ಇರುವ ಮುಖ್ಯ ಗ್ರಂಥಪಾಲಕರ ಹುದ್ದೆಗಳನ್ನು ಶೀಘ್ರದಲ್ಲೇ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಮೂಲಕ ಭರ್ತಿ ಮಾಡಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಘೋಷಿಸಿದರು.
ಬೆಂಗಳೂರಿನ ಹಂಪಿನಗರದ ನಗರ ಕೇಂದ್ರ ಗ್ರಂಥಾಲಯದಲ್ಲಿ ಸೋಮವಾರ ಆಯೋಜಿಸಿದ್ದ ಗ್ರಂಥಪಾಲಕರ ದಿನಾಚರಣೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
ರಾಜ್ಯ ಸರ್ಕಾರವು 72 ಸಾವಿರಕ್ಕೂ ಹೆಚ್ಚು ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಕ್ರಮ ಕೈಗೊಂಡಿದೆ. ಶಿಕ್ಷಣ ಇಲಾಖೆಯಲ್ಲಿ ಪ್ರಸ್ತುತ 15 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದೆ. ಇದಲ್ಲದೆ, ಹೆಚ್ಚುವರಿಯಾಗಿ 2,500 ಹುದ್ದೆಗಳನ್ನು ಭರ್ತಿ ಮಾಡುವ ಕುರಿತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ಚರ್ಚಿಸಲಾಗಿದೆ. ಈ ಸಂಬಂಧ ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಅನುಮೋದನೆ ದೊರೆತರೆ ಶಿಕ್ಷಣ ಇಲಾಖೆಯಲ್ಲೇ ಸುಮಾರು 18ರಿಂದ 19 ಸಾವಿರ ಖಾಲಿ ಹುದ್ದೆಗಳ ಭರ್ತಿ ಆಗಲಿದೆ ಎಂದು ಸಚಿವರು ತಿಳಿಸಿದರು.
*ದಿನದ 24 ಗಂಟೆಯೂ ಕಾರ್ಯನಿರ್ವಹಿಸುವ ಗ್ರಂಥಾಲಯ ಸ್ಥಾಪನೆ*
ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸುವ ವಿದ್ಯಾರ್ಥಿಗಳ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಿದೆ. ವಿಶೇಷವಾಗಿ ಬೆಂಗಳೂರು, ಧಾರವಾಡ ಮತ್ತು ಮೈಸೂರು ನಗರಗಳಲ್ಲಿ ಹೆಚ್ಚಿನ ಸಂಖ್ಯೆಯ ಸ್ಪರ್ಧಾರ್ಥಿಗಳಿದ್ದಾರೆ. ವಿದ್ಯಾರ್ಥಿಗಳ ಅನುಕೂಲಕ್ಕಾಗಿ ದಿನದ 24 ಗಂಟೆಯೂ ಓದಲು ಸಾಧ್ಯವಾಗುವ ಗ್ರಂಥಾಲಯಗಳನ್ನು ಸ್ಥಾಪಿಸಲು ಇಲಾಖೆ ಕ್ರಮ ಕೈಗೊಳ್ಳಲಿದೆ ಎಂದು ಸಚಿವರು ಹೇಳಿದರು.
ಈ ಕುರಿತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ಚರ್ಚಿಸಿ ಶೀಘ್ರ ನಿರ್ಧಾರ ಕೈಗೊಳ್ಳಲಾಗುವುದು. ಸ್ಥಳ ಪರಿಶೀಲನೆ ನಡೆಸಿ 24 ಗಂಟೆಯ ಗ್ರಂಥಾಲಯ ಆರಂಭಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಸಚಿವರು ಸೂಚಿಸಿದರು.
ತಮಗೆ ಎರಡನೇ ಬಾರಿ ಸಚಿವ ಸ್ಥಾನ ದೊರೆತ ಸಂದರ್ಭದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕರೆ ಮಾಡಿ ಬೇರೆ ಖಾತೆ ಬೇಕೇ ಎಂದು ಕೇಳಿದ್ದರು. ಆದರೆ ತಾವು ಶಿಕ್ಷಣ ಇಲಾಖೆಯಲ್ಲೇ ಮುಂದುವರಿಯಲು ಬಯಸಿರುವುದಾಗಿ ತಿಳಿಸಿದ್ದೆ. ನಾರಾಯಣ ಗುರುಗಳ ಜಯಂತಿ ಸಂದರ್ಭದಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಉತ್ತಮ ಕೆಲಸ ಮಾಡುತ್ತಿರುವುದಾಗಿ ಮುಖ್ಯಮಂತ್ರಿಗಳು ಮೆಚ್ಚುಗೆ ವ್ಯಕ್ತಪಡಿಸಿ, ಮುಂದಿನ ಅಭಿವೃದ್ಧಿ ಕಾರ್ಯಗಳಿಗೆ ಸಂಪೂರ್ಣ ಸಹಕಾರ ನೀಡುವುದಾಗಿ ಭರವಸೆ ನೀಡಿದ್ದಾರೆ ಎಂದು ಮಧು ಬಂಗಾರಪ್ಪ ಹೇಳಿದರು.
*ಮುದ್ರಣ ಇಲಾಖೆಗೆ ಸಿಹಿ ಸುದ್ದಿ, ಪ್ರತಿ ಪುಟ ಮುದ್ರಣಕ್ಕೆ 50 ಪೈಸೆ ಹೆಚ್ಚಳ*
ಮುದ್ರಣ ಇಲಾಖೆಯ ಬೇಡಿಕೆಗಳನ್ನು ಈಡೇರಿಸಲು ಸರ್ಕಾರ ಬದ್ಧವಾಗಿದೆ. ಕಳೆದ 10 ವರ್ಷಗಳಿಂದ ಪುಸ್ತಕಗಳ ಪುಟಗಳ ಮುದ್ರಣ ದರದಲ್ಲಿ ಯಾವುದೇ ಹೆಚ್ಚಳ ಮಾಡಿಲ್ಲ. ಇದೀಗ ಪ್ರತಿ ಪುಟದ ಮುದ್ರಣ ದರವನ್ನು 50 ಪೈಸೆ ಹೆಚ್ಚಿಸಲಾಗುವುದು ಎಂದು ಸಚಿವರು ಘೋಷಿಸಿದರು.
*ಗ್ರಂಥಾಲಯ ಇಲಾಖೆಯನ್ನು ಮುನ್ನೆಲೆಗೆ ತರಲು ಸಮಿತಿ*
ಶಾಲಾ ಶಿಕ್ಷಣ ಇಲಾಖೆಯ ಭಾಗವಾಗಿರುವ ಸಾರ್ವಜನಿಕ ಗ್ರಂಥಾಲಯ ಇಲಾಖೆ ಹಿಂದುಳಿದಿರುವುದು ಗಮನಕ್ಕೆ ಬಂದಿದೆ. ಇಲಾಖೆಯನ್ನು ಎಲ್ಲ ರೀತಿಯಿಂದಲೂ ಬಲಪಡಿಸಿ ಮುನ್ನೆಲೆಗೆ ತರಬೇಕಾಗಿದೆ. ಈ ನಿಟ್ಟಿನಲ್ಲಿ ಸಮಿತಿ ರಚಿಸಿ, ಗ್ರಂಥಾಲಯ ಇಲಾಖೆಯನ್ನು ಮತ್ತಷ್ಟು ಅಭಿವೃದ್ಧಿಪಡಿಸುವ ಕುರಿತು ಚರ್ಚಿಸಲಾಗುವುದು. ಈ ಸಂಬಂಧ ಎಲ್ಲರ ಸಲಹೆಗಳಿಗೆ ಮುಕ್ತ ಸ್ವಾಗತವಿದೆ ಎಂದು ಸಚಿವರು ಹೇಳಿದರು.
ಸಾರ್ವಜನಿಕ ಗ್ರಂಥಾಲಯ ಇಲಾಖೆಯ ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಸಮಿತಿ ಅಧ್ಯಕ್ಷ ಪ್ರೊ. ರಾಜಪ್ಪ ದಳವಾಯಿ ಅವರು ಈ ಕಾರ್ಯದಲ್ಲಿ ಇಲಾಖೆಗೆ ಅಗತ್ಯ ಸಹಕಾರ ನೀಡಬೇಕು ಎಂದು ಸಚಿವರು ಮನವಿ ಮಾಡಿದರು.
*ಕೆಪಿಎಸ್ ಮೂಲಕ ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿ*
ರಾಜ್ಯದಲ್ಲಿ ಕರ್ನಾಟಕ ಪಬ್ಲಿಕ್ ಸ್ಕೂಲ್ಗಳ ಮೂಲಕ ಪೂರ್ವ ಪ್ರಾಥಮಿಕದಿಂದ ಪಿಯುಸಿ ವರೆಗೆ ಒಂದೇ ಸೂರಿನಡಿ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುವ ವ್ಯವಸ್ಥೆ ರೂಪಿಸಲಾಗುತ್ತಿದೆ. ಕೆಪಿಎಸ್ ಶಾಲೆಗಳ ನಿರ್ಮಾಣಕ್ಕೆ ಏಷ್ಯನ್ ಅಭಿವೃದ್ಧಿ ಬ್ಯಾಂಕ್ ಸಾಲ ನೀಡಲು ಮುಂದೆ ಬಂದಿದೆ. ಇದರ ಜೊತೆಗೆ ಎಜಾಕ್ ಸಂಸ್ಥೆಯು ಪ್ರತಿ ಜಿಲ್ಲೆಯಲ್ಲಿ ಸುಮಾರು ₹14 ಕೋಟಿ ವೆಚ್ಚದಲ್ಲಿ ತಲಾ ಒಂದು ಕೆಪಿಎಸ್ ಶಾಲೆ ನಿರ್ಮಿಸಲು ಮುಂದೆ ಬಂದಿದೆ. ಈಗಾಗಲೇ ಶಿವಮೊಗ್ಗ ನಗರದಲ್ಲಿ ಕೆಪಿಎಸ್ ಶಾಲಾ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಲಾಗಿದೆ ಎಂದು ಸಚಿವರು ತಿಳಿಸಿದರು.
ಕಾರ್ಯಕ್ರಮದಲ್ಲಿ ಗ್ರಂಥಾಲಯ ಇಲಾಖೆಯಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳು ಹಾಗೂ ಗ್ರಂಥಪಾಲಕರನ್ನು ಸಚಿವರು ಸನ್ಮಾನಿಸಿದರು. ಎಸ್ಎಸ್ಎಲ್ಸಿ ಮತ್ತು ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ಗ್ರಂಥಾಲಯ ಇಲಾಖೆಯ ಸಿಬ್ಬಂದಿಯ ಮಕ್ಕಳನ್ನೂ ಸನ್ಮಾನಿಸಲಾಯಿತು.
ಸಾರ್ವಜನಿಕ ಗ್ರಂಥಾಲಯ ಇಲಾಖೆಯ ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಸಮಿತಿ ಅಧ್ಯಕ್ಷ ಪ್ರೊ. ರಾಜಪ್ಪ ದಳವಾಯಿ ಅವರು ‘ಪುಸ್ತಕ ಸಂಸ್ಕೃತಿ’ ಕುರಿತು ಉಪನ್ಯಾಸ ನೀಡಿದರು. ಮೈಸೂರು ವಿಶ್ವವಿದ್ಯಾನಿಲಯದ ವಿಶ್ರಾಂತ ಗ್ರಂಥಪಾಲಕ ಡಾ. ಸಿ.ಪಿ. ರಾಮಶೇಷ ಅವರು ‘ಗ್ರಂಥಪಾಲಕರ ದಿನಾಚರಣೆ’ ಕುರಿತು ಉಪನ್ಯಾಸ ನೀಡಿದರು.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಶ್ರೀಮತಿ ವಿ. ರಶ್ಮಿ ಮಹೇಶ್, ಸಾರ್ವಜನಿಕ ಗ್ರಂಥಾಲಯ ಇಲಾಖೆಯ ಆಯುಕ್ತೆ ಶ್ರೀಮತಿ ವಿದ್ಯಾಕುಮಾರಿ ಕೆ., ಸಚಿವರ ಆಪ್ತ ಕಾರ್ಯದರ್ಶಿ ಕಿಶೋರ್ ಕುಮಾರ್ ಸೇರಿದಂತೆ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

