ಬೆಂಗಳೂರು: ಆರ್ಸಿಬಿ ಗೆಲುವಿನ ಸಂಭ್ರಮಾಚರಣೆ ವೇಳೆ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ತನಿಖೆಗೆ ಆದೇಶಿಸಿರುವ ಸರಕಾರ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕೆ.ದಯಾನಂದ್ ಅವರನ್ನು ಅಮಾನತುಗೊಳಿಸಿದೆ.
ಈ ಕುರಿತು ಸಿಎಂ ಸಿದ್ದರಾಮಯ್ಯ ತುರ್ತು ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಪ್ರಕರಣದ ಗಂಭೀರತೆ ಕುರಿತು ಮಾಹಿತಿ ಪಡೆಯಲಾಗಿದೆ. ಇದರ ಭಾಗವಾಗಿ ಆರ್ ಸಿಬಿ, ಈವೆಂಟ್ ಮ್ಯಾನೇಜ್ಮೆಂಟ್ ಕಂಪನಿ, ಕೆಎಸಿಎ ವಿರುದ್ಧ ಎಫ್ ಐಆರ್ ದಾಖಲಾಗಿದೆ. ಈ ಸಂಸ್ಥೆಗಳ ಪ್ರತಿನಿಧಿಗಳನ್ನು ಬಂಧಿಸುವಂತೆ ಸೂಚಿಸಲಾಗಿದೆ ಎಂದಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿ ಬೆಂಗಳೂರು ನಗರ ಪೊಲೀಸ್ ಆಯುಕ್ತರು, ಕೇಂದ್ರ ವಿಭಾಗದ ಎಸಿಪಿ, ಡಿಸಿಪಿ, ಕಬ್ಬನ್ ಪಾರ್ಕ್ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಹಾಗೂ ಇತರೆ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.
ನ್ಯಾಯಾಂಗ ತನಿಖೆಗೂ ಆದೇಶ: ಈ ನಡುವೆ ಪ್ರಕರಣದ ಸಂಪೂರ್ಣ ತನಿಖೆ ನಡೆಸುವಂತೆ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಜಸ್ಟೀಸ್ ಮೈಕೆಲ್ ಡಿ. ಖುನ್ಹಾ ಅವರ ನೇತೃತ್ವದ ಏಕಸದಸ್ಯ ತನಿಖಾ ಆಯೋಗದ ರಚನೆ ಮಾಡಲಾಗಿದೆ. ಮೂವತ್ತು ದಿನಗಳಲ್ಲಿ ಸಂಪೂರ್ಣ ವರದಿ ನೀಡುವಂತೆಯೂ ಸೂಚನೆ ನೀಡಲಾಗಿದೆ.