Ilಬೆಂಗಳೂರು: ಮುಖ್ಯಮಂತ್ರಿ ಅವರ ಕಟ್ಟುನಿಟ್ಟಿನ ನಿರ್ದೇಶನದಂತೆ, ಸರ್ಕಾರದ ವಿವಿಧ ಮಂಡಳಿಗಳು, ನಿಗಮಗಳು ಹಾಗೂ ಸಾರ್ವಜನಿಕ ವಲಯದ ಉದ್ದಿಮೆಗಳ ವ್ಯವಸ್ಥಾಪಕ ನಿರ್ದೇಶಕರು ತಮ್ಮ ತಮ್ಮ ಕೇಂದ್ರ ಸ್ಥಾನಗಳಲ್ಲಿ ಕಡ್ಡಾಯವಾಗಿ ವಾಸ್ತವ್ಯ ಹೂಡಬೇಕೆಂದು ಸೂಚಿಸಲಾಗಿದೆ. ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಲಭ್ಯವಿರುವುದರಿಂದ ಆಡಳಿತಾತ್ಮಕ ಕಾರ್ಯಗಳು ಸುಗಮವಾಗಿ ನಡೆಯಲು ಹಾಗೂ ಸಾರ್ವಜನಿಕ ಕಾರ್ಯಕ್ರಮಗಳ ಅನುಷ್ಠಾನವು ತ್ವರಿತಗೊಳ್ಳಲು ಸಹಕಾರಿಯಾಗಲಿದೆ ಎಂಬ ಕಾರಣದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ.
ಆರ್ಥಿಕ ಇಲಾಖೆಯಿಂದ ಪಡೆಯಲಾದ ಮಂಡಳಿ, ನಿಗಮ ಮತ್ತು ಸಾರ್ವಜನಿಕ ವಲಯದ ಉದ್ದಿಮೆಗಳ ಪಟ್ಟಿಯನ್ನು ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಅವರು ಸಂಬಂಧಪಟ್ಟ ಎಲ್ಲಾ ಇಲಾಖೆಗಳ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು ಹಾಗೂ ಕಾರ್ಯದರ್ಶಿಗಳಿಗೆ ಕಳುಹಿಸಿದ್ದಾರೆ.
ಅವರು ನೀಡಿರುವ ಸೂಚನೆಯಂತೆ, ತಮ್ಮ ಆಡಳಿತ ವ್ಯಾಪ್ತಿಗೆ ಒಳಪಡುವ ಎಲ್ಲಾ ಮಂಡಳಿ, ನಿಗಮ ಮತ್ತು ಸಾರ್ವಜನಿಕ ವಲಯದ ಉದ್ದಿಮೆಗಳ ಮುಖ್ಯಸ್ಥರು ಮಾನ್ಯ ಮುಖ್ಯಮಂತ್ರಿಯವರ ನಿರ್ದೇಶನವನ್ನು ಪಾಲಿಸುವಂತೆ ತಕ್ಷಣವೇ ಸೂಚನೆಗಳನ್ನು ನೀಡಬೇಕು. ಜೊತೆಗೆ, ಅಧಿಕಾರಿಗಳಿಂದ ನಿಗದಿತ ನಮೂನೆಯಲ್ಲಿ ಕೇಂದ್ರ ಸ್ಥಾನದಲ್ಲಿಯೇ ವಾಸ್ತವ್ಯ ಹೂಡುತ್ತಿರುವ ಬಗ್ಗೆ ಸ್ವಯಂ-ದೃಢೀಕರಣ ಪತ್ರವನ್ನು ಪಡೆದು, ಎಲ್ಲಾ ದೃಢೀಕರಣ ಪತ್ರಗಳನ್ನು ಕ್ರೋಢೀಕರಿಸಿ ತುರ್ತಾಗಿ ಮುಖ್ಯ ಕಾರ್ಯದರ್ಶಿಗಳ ಕಚೇರಿಗೆ ಸಲ್ಲಿಸುವಂತೆ ಸೂಚಿಸಲಾಗಿದೆ.

