ಗುತ್ತಿಗೆದಾರನಿಗೆ ಜೀವಬೆದರಿಕೆ ಪ್ರಕರಣ: ಮುನಿರತ್ನ ಅರ್ಜಿ ವಜಾಗೊಳಿಸಿದ ಹೈಕೋರ್ಟ್!
ಬೆಂಗಳೂರು: ರಾಜರಾಜೇಶ್ವರಿನಗರದ ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ಎಂ.ಮುನಿರತ್ನಂ ನಾಯ್ಡು ವಿರುದ್ಧದ ಸುಲಿಗೆ, ವಂಚನೆ ಕೇಸ್ ರದ್ದುಪಡಿಸಲು ಹೈಕೋರ್ಟ್ ನಿರಾಕರಿಸಿದೆ.
ಈ ಮೂಲಕ ತಮ್ಮ ವಿರುದ್ಧ ಪ್ರಕರಣ ರದ್ದುಗೊಳಿಸಬೇಕೆಂದು ಶಾಸಕ ಮುನಿರತ್ನ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ಬಿಬಿಎಂಪಿ ತ್ಯಾಜ್ಯ ವಿಲೇವಾರಿ ಗುತ್ತಿಗೆದಾರ ಚಲುವರಾಜು ಸಲ್ಲಿಸಿದ್ದ ದೂರನ್ನು ರದ್ದುಪಡಿಸಲು ಹೈಕೋರ್ಟ್ ನಿರಾಕರಿಸಿದೆ. ಶಾಸಕ ಮುನಿರತ್ನ ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿ ವಿಚಾರಣೆಯನ್ನು ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಪೀಠ, ಅರ್ಜಿ ವಜಾಗೊಳಿಸಿ ಶುಕ್ರವಾರ ಆದೇಶ ಹೊರಡಿಸಿದೆ.
ಏನಿದು ಮುನಿರತ್ನ ಪ್ರಕರಣ?: ಗುತ್ತಿಗೆದಾರ ಚಲುವರಾಜು ಶಾಸಕ ಮುನಿರತ್ನ ನನಗೆ ಕೊಲೆ ಬೆದರಿಕೆ, ಜಾತಿ ನಿಂದನೆ ಮಾಡಿದ್ದಾರೆ ಎಂದು ಆರೋಪಿಸಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದಗೆ ದೂರು ನೀಡಿದ್ದರು. ಜೊತೆಗೆ ರಕ್ಷಣಗೂ ಮನವಿ ಮಾಡಿದ್ದರು. ಜೀವ ಬೆದರಿಕೆ ಪ್ರಕರಣದಲ್ಲಿ ಪ್ರಮುಖ ಆರೋಪಿ ಶಾಸಕ ಮುನಿರತ್ನ ಸೇರಿ ಎ2 ಮುನಿರತ್ನರ ಆಪ್ತ ಸಹಾಯಕ ವಿಜಯ್ ಕುಮಾರ್, ಎ3 ಸೆಕ್ಯೂರಿಟಿ ಅಭಿಷೇಕ್ ಮತ್ತು ಎ4 ವಸಂತ್ ಕುಮಾರ್.
ಬಿಬಿಎಂಪಿ ಗುತ್ತಿಗೆದಾರ ಚಲುವರಾಜುಗೆ ಜೀವ ಬೆದರಿಕೆ ಹಾಕಿರುವ ಕೇಸ್ನಲ್ಲಿ ಶಾಸಕ ಮುನಿರತ್ನರನ್ನ ಬಂಧಿಸಲಾಗಿತ್ತು. ಮುನಿರತ್ನ ನನ್ನನ್ನ ಅವಾಚ್ಯವಾಗಿ ನಿಂದಿಸಿ, ಜಾತಿ ನಿಂದನೆ ಜೊತೆಗೆ ಜೀವ ಬೆದರಿಕೆ ಹಾಕಿದ್ದಾರೆಂದು ಗುತ್ತಿಗೆದಾರ ಚಲುವರಾಜು ಆರೋಪ ಮಾಡಿದ್ದರು.
ಅಷ್ಟೇ ಅಲ್ಲದೇ, ವೈಯ್ಯಾಲಿಕಾವಲ್ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಚಲುವರಾಜು ದೂರು ನೀಡಿದ್ದರು. 2 ಎಫ್ಐಆರ್ ದಾಖಲಾಗ್ತಿದ್ದಂತೆ ಅಲರ್ಟ್ ಆಗಿದ್ದ ಪೊಲೀಸರು, ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ನಂಗಲಿ ಗ್ರಾಮದ ಬಳಿ ಶಾಸಕ ಮುನಿರತ್ನರನ್ನ ಅರೆಸ್ಟ್ ಮಾಡಿದ್ದರು.
ಬಿಜೆಪಿ ಶಾಸಕ ಮುನಿರತ್ನಗೆ ಸಾಲು ಸಾಲು ಕೇಸ್ಗಳೇ ಇದೀಗ ಸಂಕಷ್ಟ ತಂದೊಡ್ಡಿತ್ತು. ಜಾತಿ ನಿಂದನೆ, ಜೀವ ಬೆದರಿಕೆ ಕೇಸ್ನಲ್ಲಿ ಜೈಲುಪಾಲಾಗಿದ್ದ ಮುನಿರತ್ನಗೆ ಜಾಮೀನು ಸಿಕ್ಕಿತ್ತು. ಇನ್ನೇನು ಪರಪ್ಪನ ಅಗ್ರಹಾರ ಜೈಲಿನಿಂದ ಮೈ ಮುರಿದು ಹೊರಗೆ ಬರಬೇಕು ಅನ್ನೋವಷ್ಟರಲ್ಲೇ ಪೊಲೀಸರು ಮತ್ತೆ ಅರೆಸ್ಟ್ ಮಾಡಿದ್ದರು. ಆಗ ಅತ್ಯಾಚಾರ ಪ್ರಕರಣ ಶಾಸಕ ಮುನಿರತ್ನಗೆ ಸಂಕಷ್ಟ ತಂದಿತ್ತು.


