ಬೆಂಗಳೂರು: ರಾಜ್ಯದಲ್ಲಿ ಶಾಲಾ ಮಕ್ಕಳಿಗೆ ಪರೀಕ್ಷೆಗಳು ಆರಂಭವಾಗಿರುವ ಬೆನ್ನಲ್ಲೇ, ಬಿರು ಬೇಸಿಗೆಯಿಂದ ತಾಪಮಾನ ದಿನದಿಂದ ದಿನಕ್ಕೆ ಏರಿಕೆ ಆಗುತ್ತಲಿದ್ದು, ಈ ಹಿನ್ನೆಲೆ ವಿದ್ಯಾರ್ಥಿಗಳ ಹಿತ ದೃಷ್ಟಿಯಿಂದ ಪರೀಕ್ಷೆಗಳನ್ನು ಬೇಗ ಮುಗಿಸಿ ಶಾಲೆಗಳಿಗೆ ಅವಧಿಗೂ ಮುನ್ನ ಬೇಸಿಗೆ ರಜೆ ಘೋಷಣೆ ಮಾಡುವ ಸಾಧ್ಯತೆಯಿದೆ ಎಂದು ಎನ್ನಲಾಗಿದೆ.
ಈಗಾಗಲೇ ಹವಾಮಾನ ಇಲಾಖೆ ಕೂಡ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಬಿರು ಬೇಸಿಗೆಯಿಂದ ತಾಪಮಾನದಲ್ಲಿ ಏರಿಕೆಯಾಗುತ್ತಿದೆ ಎಂದು ಎಚ್ಚರಿಕೆ ಸಂದೇಶವನ್ನು ರವಾನಿಸಿದೆ. ಈ ಹಿನ್ನೆಲೆ ಪೋಷಕರು ತಮ್ಮ ಶಾಲಾ ಮಕ್ಕಳಿಗೆ ಬೇಸಿಗೆ ರಜೆ ಯಾವಾಗ ಸಿಗುತ್ತದೆ? ಎಂದು ಕಾಯುತ್ತಿದ್ದಾರೆ.
ಸಾಮಾನ್ಯವಾಗಿ ರಾಜ್ಯದಲ್ಲಿ ಏಪ್ರಿಲ್ನಿಂದ ಶಾಲಾ ಮಕ್ಕಳಿಗೆ ಬೇಸಿಗೆ ರಜೆ ನೀಡಲಾಗುತ್ತದೆ. ಆದರೆ ಈ ಬಾರಿ ರಾಜ್ಯಾದ್ಯಂತ ಬೇಸಿಗೆಗೂ ಮುನ್ನ ತಾಪಮಾನ ಪ್ರಮಾಣ ಏರಿಕೆಯಾಗುತ್ತಲೇ ಇದೆ. ಆದ್ದರಿಂದ ಈ ಬಾರಿ ಅವಧಿಗೂ ಮುನ್ನ ಬೇಸಿಗೆ ರಜೆ ಘೋಷಣೆ ಮಾಡುವ ಸಾಧ್ಯತೆಯಿದೆ. ಮಾರ್ಚ್ನಲ್ಲಿಯೇ ಶಾಲಾ ಮಕ್ಕಳಿಗೆ ಬೇಗ ಪರೀಕ್ಷೆಗಳನ್ನು ಮುಗಿಸಿ ಬಳಿಕ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಬೇಗ ಅಂದ್ರೆ ಏಪ್ರಿಲ್ಗೂ ಮುನ್ನ ರಜೆ ಘೋಷಿಸುವ ಸಾಧ್ಯತೆಯಿದೆ.
ಕಳೆದ ಬಾರಿಗೆ ಹೋಲಿಕೆ ಮಾಡಿದ್ರೆ ಈ ಬಾರಿ 2025ರಲ್ಲೂ ಬೇಸಿಗೆಗೂ ಮುನ್ನವೇ ರಣಭೀಕರ ಬಿಸಿಲು ಮುಂದುವರೆದಿದೆ. ಪರಿಣಾಮ ಜನರು ಮನೆಯಿಂದ ಹೊರಬರಲು ಹೆದರುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಇಂತಹ ಪರಿಸ್ಥಿತಿಯಲ್ಲೂ ಶಾಲೆಗೆ ಹೋಗುತ್ತಿರುವ ವಿದ್ಯಾರ್ಥಿಗಳ ಆರೋಗ್ಯದ ಮೇಲೆ ಅವರ ಪೋಷಕರು ಗಮನಹರಿಸಿ ಬೇಸಿಗೆ ರಜೆ ಅವಧಿಗೂ ಮುನ್ನ ಘೋಷಣೆ ನಿರೀಕ್ಷೆಯಲ್ಲಿದ್ದಾರೆ.
ರಾಜ್ಯದಲ್ಲಿ ಹೆಚ್ಚುತ್ತಿರುವ ತಾಪಮಾನದಲ್ಲಿ ಮುಂಬರುವ ದಿನಗಳಲ್ಲಿ ಬಿಸಿ ಗಾಳಿ ಬೀಸುವ ಸಾಧ್ಯತೆ ಇದೆ. ಹಾಗಾಗಿ, ಶಾಲಾಮಕ್ಕಳು ಸೇರಿದಂತೆ ಜನ-ಜಾನುವಾರುಗಳನ್ನು ಬಿಸಿಲಿನಿಂದ ರಕ್ಷಿಸಿಕೊಳ್ಳಲು ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಟ್ಟುನಿಟ್ಟಿನ ಸೂಚನೆ ನೀಡಿದೆ.
ಮಧ್ಯಾಹ್ನ 12 ಗಂಟೆಯಿಂದ 3 ಗಂಟೆಯವರೆಗೆ ಎಲ್ಲರೂ ಬಿಸಿಲಿನಲ್ಲಿ ಹೋಗುವುದನ್ನು ತಪ್ಪಿಸಬೇಕು. ಹೆಚ್ಚಾಗಿ ಬಾಯಾರಿಕೆ ಇಲ್ಲದಿದ್ದರೂ ಸಹ ಸಾಕಷ್ಟು ನೀರು ಕುಡಿಯಬೇಕು. ಸಾಧ್ಯವಾದಷ್ಟು ಹಗುರವಾದ, ತಿಳಿ ಬಣ್ಣದ, ಸಡಿಲವಾದ ಮತ್ತು ರಂಧ್ರವಿರುವ ಹತ್ತಿ ಬಟ್ಟೆಗಳನ್ನು ಧರಿಸಬೇಕು. ಬಿಸಿಲಿನಲ್ಲಿ ಹೋಗುವಾಗ ರಕ್ಷಣಾತ್ಮಕ ಕನ್ನಡಕಗಳು, ಛತ್ರಿ, ಟೋಪಿ, ಬೂಟುಗಳು ಅಥವಾ ಚಪ್ಪಲಿ ಬಳಸಬೇಕು. ತಾಪಮಾನ ಹೆಚ್ಚಿರುವಾಗ ಶ್ರಮದಾಯಕ ಚಟುವಟಿಕೆಗಳನ್ನು, ಮಧ್ಯಾಹ್ನ 12 ಗಂಟೆಯಿಂದ 3 ಗಂಟೆಯವರೆಗೆ ಹೊರಗೆ ಕೆಲಸ ಮಾಡುವುದನ್ನು ತಪ್ಪಿಸಬೇಕು ಎಂದು ಸಲಹೆ ನೀಡಿದೆ. ದೇಹವನ್ನು ನಿರ್ಜಲೀಕರಣಗೊಳಿಸುವ ಆಲೋಹಾಲ್, ಚಹಾ, ಕಾಫಿ ಬೇಡ. ಹೊರಗೆ ಕೆಲಸ ಮಾಡುತ್ತಿದ್ದರೆ, ರಕ್ಷಣಾತ್ಮಕ ವಿಧಾನಗಳನ್ನು ಅನುಸರಿಸಬೇಕು. ನಿಲ್ಲಿಸಿದ ವಾಹನಗಳಲ್ಲಿ ಮಕ್ಕಳನ್ನು ಅಥವಾ ಸಾಕುಪ್ರಾಣಿಗಳನ್ನು ಬಿಡಬಾರದು.
ಮೂರ್ಛೆ ಅಥವಾ ಆನಾರೋಗ್ಯ ಅನಿಸಿದರೆ, ತಕ್ಷಣ ವೈದ್ಯರನ್ನು ಭೇಟಿ ಮಾಡಬೇಕು. ಮನೆಯಲ್ಲಿ ತಯಾರಿಸಿದ ಪಾನೀಯಗಳಾದ ಲಸ್ಸಿ, ತೋರಣಿ (ಅಕ್ಕಿ ನೀರು), ನಿಂಬೆ ನೀರು, ಮಜ್ಜಿಗೆ ಮತ್ತಿತರನ್ನು ಬಳಸಬೇಕು. ಇದು ದೇಹವನ್ನು ಮರು-ಜಲೀಕರಣ ಮಾಡಲು ಸಹಾಯ ಮಾಡುತ್ತದೆ. ಪ್ರಾಣಿಗಳನ್ನು ನೆರಳಿನಲ್ಲಿ ಇರಿಸಬೇಕು. ಅವುಗಳಿಗೆ ಕುಡಿಯಲು ಸಾಕಷ್ಟು ನೀರು ನೀಡಬೇಕು. ಮನೆಯನ್ನು ತಂಪಾಗಿ ಇರಿಸಿ, ಪರದೆಗಳು, ಶಟರ್ಗಳು ಅಥವಾ ಸನ್ಶೇಡ್ಗಳನ್ನು ಬಳಸಬೇಕು. ರಾತ್ರಿ ಕಿಟಕಿಗಳನ್ನು ತೆರೆಯಬೇಕು. ಫ್ಯಾನ್, ಒದ್ದೆ ಬಟ್ಟೆಗಳನ್ನು ಬಳಸಿ ಮತ್ತು ಆಗಾಗ ತಣ್ಣೀರಿನಲ್ಲಿ ಸ್ನಾನ ಮಾಡಬೇಕು.
ರೈತರು, ಪ್ರಯಾಣಿಕರು ಹೊರಗೆ ಹೋಗುವಾಗ, ತಮ್ಮೊಂದಿಗೆ ನೀರನ್ನು ತೆಗೆದುಕೊಂಡು ಹೋಗಬೇಕು. ಸಾಧಾರಣ ತಾಪಮಾನ ಮತ್ತು ಶಾಖವು ಸಾಮಾನ್ಯ ಜನರಿಗೆ ಸಹಿಸಿಕೊಳ್ಳಬಲ್ಲದು. ಆದರೆ ಶಿಶುಗಳು, ವೃದ್ಧರು, ದೀರ್ಘಕಾಲದ ಕಾಯಿಲೆ ಇರುವ ಜನರನ್ನು ಶಾಖಕ್ಕೆ ಒಡ್ಡಿಕೊಳ್ಳುವುದನ್ನು ತಪ್ಪಿಸಿ. ಈ ಬಿರು ಬೇಸಿಗೆಯಲ್ಲಿ ಹಗುರವಾದ, ತಿಳಿ ಬಣ್ಣದ, ಸಡಿಲವಾದ, ಹತ್ತಿ ಬಟ್ಟೆಗಳನ್ನು ಧರಿಸಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಲಹೆ ನೀಡಿದೆ.
ಸನ್ಸ್ಟೋಕ್ ಪೀಡಿತ ವ್ಯಕ್ತಿಯ ಚಿಕಿತ್ಸೆ ಕುರಿತು ಜಿಲ್ಲಾಡಳಿತ ಸಲಹೆ ನೀಡಿದೆ. ಇಂತಹ ವ್ಯಕ್ತಿಯನ್ನು ತಂಪಾದ ಸ್ಥಳದಲ್ಲಿ, ನೆರಳಿನ ಕೆಳಗೆ ಇರಿಸಿ. ಅವರನ್ನು ಒದ್ದೆ ಬಟ್ಟೆಯಿಂದ ಒರೆಸಿ, ಆಗಾಗ ದೇಹವನ್ನು ತೊಳೆಯಿರಿ. ತಲೆಯ ಮೇಲೆ ಸಾಮಾನ್ಯ ತಾಪಮಾನದ ನೀರನ್ನು ಸುರಿಯಿರಿ. ದೇಹದ ಉಷ್ಣತೆಯನ್ನು ಕಡಿಮೆ ಮಾಡುವುದು ಮುಖ್ಯ.
ಬಿಸಿಲಿನಲ್ಲಿ ಬಳಲುವ ವ್ಯಕ್ತಿಗೆ ಕುಡಿಯಲು ನೀರು ಅಥವಾ ನಿಂಬೆ ಶರಬತ್, ತೋರಣೆ ಅಥವಾ ದೇಹವನ್ನು ಪುನರ್ಜಲೀಕರಣಗೊಳಿಸಲು ಉಪಯುಕ್ತವಾದ ಯಾವುದನ್ನಾದರೂ ನೀಡಬೇಕು. ತಕ್ಷಣ ಬಿಸಿಲಿನ ತಾಪದಿಂದ ಬಳಲುತ್ತಿರುವ ವ್ಯಕ್ತಿಯನ್ನು ಹತ್ತಿರದ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಹೋಗಬೇಕು. ರೋಗಿಗೆ ತಕ್ಷಣದ ಆಸ್ಪತ್ರೆಯ ಅಗತ್ಯವಿರುತ್ತದೆ, ಏಕೆಂದರೆ ಶಾಖದ ಹೊಡೆತಗಳು ಮಾರಣಾಂತಿಕವಾಗಬಹುದು. ಅಪಾಯದಲ್ಲಿರುವ ಜನರು ತಂಪಾದ ವಾತಾವರಣದಿಂದ ಬಿಸಿ ವಾತಾವರಣಕ್ಕೆ ಹೋಗಬೇಕು.
ಶಾಖದ ಅಲೆಯ ಸಮಯದಲ್ಲಿ ನಿಮ್ಮ ಕುಟುಂಬಕ್ಕೆ ಅಂತಹ ವ್ಯಕ್ತಿ ಭೇಟಿ ನೀಡುತ್ತಿರಬಹುದು. ದೇಹವು ಶಾಖಕ್ಕೆ ಒಗ್ಗಿಕೊಳ್ಳುವವರೆಗೆ ಅವರು ಒಂದು ವಾರದವರೆಗೆ ತೆರೆದ ಮೈದಾನದಲ್ಲಿ ಚಲಿಸಬಾರದು ಮತ್ತು ಸಾಕಷ್ಟು ನೀರು ಕುಡಿಯಬೇಕು. ಶಾಖ ತರಂಗದ ಸಮಯದಲ್ಲಿ ಬಿಸಿ ವಾತಾವರಣಕ್ಕೆ ಕ್ರಮೇಣ ಒಡ್ಡಿಕೊಳ್ಳುವುದರಿಂದ ಒಗ್ಗಿಕೊಳ್ಳುವಿಕೆಯನ್ನು ಸಾಧಿಸಲಾಗುತ್ತದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸೂಚನೆ ನೀಡಿದ್ದಾರೆ.