ರಾಜಕೀಯ ಸುದ್ದಿ

ಜೈಲಿಗೆ ಹೋದ ಜನಾರ್ದನ ರೆಡ್ಡಿ ಶಾಸಕ ಸ್ಥಾನದಿಂದಲೂ ಅನರ್ಹ!

Share It

ಬೆಂಗಳೂರು: ಓಬಳಾಪುರಂ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ದೋಷಿ ಎಂದು ಸಿಬಿಐ ಕೋರ್ಟ್ ತೀರ್ಪು ನೀಡಿ 7 ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿದೆ. ಈ ಹಿನ್ನೆಲೆಯಲ್ಲಿ ಇದೀಗ ಜನಾರ್ದನ ರೆಡ್ಡಿ ಶಾಸಕ ಸ್ಥಾನವನ್ನು ಕಳೆದುಕೊಂಡಿದ್ದಾರೆ. ಗಣಿಗಾರಿಕೆ ಪ್ರಕರಣ ಸುದೀರ್ಘ ವಿಚಾರಣೆ ನಡೆಸಿದ್ದ ಹೈದರಾಬಾದ್ ಸಿಬಿಐ ಕೋರ್ಟ್, 7 ವರ್ಷಗಳ ಶಿಕ್ಷೆ ನೀಡಿ ತೀರ್ಪು ನೀಡಿತ್ತು. ಇದರಿಂದ ಹೇಗಾದರೂ ಮಾಡಿ ಶಾಸಕ ಸ್ಥಾನ ಉಳಿಸಿಕೊಳ್ಳಲು ಶಿಕ್ಷೆ ಕಡಿಮೆ ಮಾಡಿ ಎಂದು ರೆಡ್ಡಿ ಕೋರ್ಟ್​ ಮುಂದೆ ಅಂಗಲಾಚಿ ಬೇಡಿಕೊಂಡಿದ್ದರು. ಆದ್ರೆ, ಕೋರ್ಟ್​ ರೆಡ್ಡಿ ಮನವಿಯನ್ನು ತಿರಸ್ಕರಿಸಿತ್ತು. ಇದರ ಬೆನ್ನಲ್ಲೇ ಜನಾರ್ದನ ರೆಡ್ಡಿ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಲಾಗಿದೆ. ಕರ್ನಾಟಕ ವಿಧಾನಸಭೆ ಕಾರ್ಯದರ್ಶಿ ವಿಶಾಲಾಕ್ಷಿ ಈ ಕುರಿತು ಆದೇಶ ಹೊರಡಿಸಿದ್ದಾರೆ.

ಸಿಬಿಐ ಕೋರ್ಟ್ ತೀರ್ಪು ಪ್ರಕಟವಾದ ತಕ್ಷಣದಿಂದಲೇ ಜಾರಿಗೆ ಬರುವಂತೆ ಜನಾರ್ದನ ರೆಡ್ಡಿ ಅವರನ್ನು ಶಾಸಕ ಸ್ಥಾನದಿಂದ ಮುಂದಿನ 6 ವರ್ಷಗಳ ಕಾಲ ಅನರ್ಹಗೊಳಿಸಿ ಕರ್ನಾಟಕ ವಿಧಾನಸಭೆ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ. ಈ ಅನರ್ಹತೆ ಜನಾರ್ದನ ರೆಡ್ಡಿ ಶಿಕ್ಷೆ ಮುಗಿಸಿ ಬಿಡುಗಡೆಯಾಗುವವರೆಗೆ ಅಥವಾ ಈ ಶಿಕ್ಷೆಗೆ ಕೋರ್ಟ್ ತಡೆ ನೀಡುವವರೆಗೆ ಇರಲಿದೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ. ನಿಮಯದ ಪ್ರಕಾರ ಯಾವುದೇ ಶಾಸಕ ಅಥವಾ ಸಂಸದ 2 ವರ್ಷ ಅಥವಾ ಅದಕ್ಕಿಂತ ಮೇಲ್ಪಟ್ಟು ಶಿಕ್ಷೆಗೆ ಗುರಿಯಾದರೆ ಶಾಸಕ ಸ್ಥಾನ ರದ್ದಾಗಲಿದೆ. ಅದರಂತೆ ಈಗ ರೆಡ್ಡಿ ಶಾಸಕ ಸ್ಥಾನದಿಂದ ಅನರ್ಹಗೊಂಡಿದ್ದಾರೆ.

ಬಳ್ಳಾರಿ ಜಿಲ್ಲೆ ಪ್ರವೇಶಕ್ಕೆ ಕೋರ್ಟ್​, ಜನಾರ್ದನ ರೆಡ್ಡಿ ಅನುಮತಿ ಕೊಟ್ಟಿರಲಿಲ್ಲ. ಹೀಗಾಗಿ ಜನಾರ್ದನ ರೆಡ್ಡಿ ತಮ್ಮದೇ ಆದ ಕೆಆರ್​ಎಸ್​ ಪಕ್ಷವನ್ನು ಕಟ್ಟಿ ಅದರಿಂದಲೇ ​ಕೊಪ್ಪಳ ಜಿಲ್ಲೆಯ ಗಂಗಾವತಿ ಕ್ಷೇತ್ರದಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ತಮ್ಮ ಸಮೀಪ ಸ್ಪರ್ಧಿ ಕಾಂಗ್ರೆಸ್​ನ ಇಕ್ಬಾಲ್​ ಅನ್ಸಾರಿ ಅವರನ್ನು ಸೋಲಿಸಿ ಮತ್ತೆ ರಾಜಕೀಯ ಪುನರ್ಜನ್ಮ ಪಡೆದುಕೊಂಡಿದ್ದರು. ಆದರೆ, ಇದೀಗ ರೆಡ್ಡಿ ತಮ್ಮ ಶಾಸಕ ಸ್ಥಾನ ಕಳೆದುಕೊಂಡಿದ್ದರಿಂದ ಗಂಗಾವತಿ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ಎದುರಾಗಿದೆ.


Share It

You cannot copy content of this page