ಸುದ್ದಿ

ಇತಿಹಾಸಕಾರ ಡಾ. ರಾಮಚಂದ್ರ ಗುಹಾ ಅವರಿಗೆ ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ

Share It

ಬೆಂಗಳೂರು: ಇತಿಹಾಸಕಾರ, ಅಂಕಣಕಾರ ಮತ್ತು ಚಿಂತಕ ಡಾ. ರಾಮಚಂದ್ರ ಗುಹಾ ಅವರನ್ನು ೨೦೨೫ನೇ ಸಾಲಿನ ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿಗೆ ರಾಜ್ಯ ಸರ್ಕಾರ ಆಯ್ಕೆ ಮಾಡಿದೆ.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಪ್ರತಿ ವರ್ಷ ನೀಡಲಾಗುವ ಈ ಪ್ರಶಸ್ತಿಯನ್ನು, ಗಾಂಧೀಜಿಯವರ ಜೀವನ ಮೌಲ್ಯಗಳನ್ನು ಸಮಾಜದಲ್ಲಿ ಹರಡಲು ಮಹತ್ತರ ಕೊಡುಗೆ ನೀಡಿದ ವ್ಯಕ್ತಿ ಹಾಗೂ ಸಂಸ್ಥೆಗಳಿಗೆ ಪ್ರದಾನ ಮಾಡಲಾಗುತ್ತದೆ.

ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಜಯಂತಿಯನ್ನು ರಾಜ್ಯಾದ್ಯಂತ ಅರ್ಥಪೂರ್ಣವಾಗಿ, ಜನಸಾಮಾನ್ಯರು, ಶಾಲಾ ಮತ್ತು ಕಾಲೇಜು ವಿದ್ಯಾರ್ಥಿಗಳ ಪಾಲ್ಗೊಳ್ಳುವಿಕೆಯಿಂದ ಆಚರಿಸಲು ರಾಜ್ಯ ಸರ್ಕಾರವು ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಈ ಆಚರಣೆಯ ಅಂಗವಾಗಿ ಗಾಂಧೀಜಿಯವರ ತತ್ವ, ಮೌಲ್ಯ ಹಾಗೂ ಸಮಾಜಮುಖಿ ಚಿಂತನೆಗಳನ್ನು ಜನಮನಗಳಲ್ಲಿ ಬಿತ್ತುವಲ್ಲಿ ಮಹತ್ವದ ಪಾತ್ರ ವಹಿಸಿರುವ ಡಾ. ರಾಮಚಂದ್ರ ಗುಹಾ ಅವರನ್ನು ಈ ವರ್ಷದ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಡಾ. ಗುಹಾ ಅವರು ಭಾರತದ ಸಮಕಾಲೀನ ಇತಿಹಾಸ, ರಾಜಕೀಯ ಚಳವಳಿಗಳು, ಪರಿಸರ ಹೋರಾಟಗಳು ಹಾಗೂ ಕ್ರಿಕೆಟ್ ಕುರಿತ ತಮ್ಮ ಅಧ್ಯಯನ ಮತ್ತು ಗ್ರಂಥ ರಚನೆಗಳ ಮೂಲಕ ಅಂತಾರಾಷ್ಟ್ರೀಯ ಮಟ್ಟದಲ್ಲಿ ವಿಶಿಷ್ಟ ಸ್ಥಾನ ಪಡೆದಿದ್ದಾರೆ.

ರಾಜ್ಯ ಸರ್ಕಾರ ಈ ಪ್ರಶಸ್ತಿ ಮೂಲಕ ಯುವ ಪೀಳಿಗೆಗೆ ಗಾಂಧೀಜಿಯವರ ಆದರ್ಶಗಳನ್ನು ಪರಿಚಯಿಸಿ, ಸತ್ಯ, ಅಹಿಂಸೆ, ಶಾಂತಿ ಮತ್ತು ಸೇವಾ ಮನೋಭಾವನೆಗಳನ್ನು ಬಲಪಡಿಸಲು ಬದ್ಧವಾಗಿದೆ. ಡಾ. ರಾಮಚಂದ್ರ ಗುಹಾ ಅವರಿಗೆ ಈ ಪ್ರಶಸ್ತಿ ಪ್ರದಾನವಾಗುವುದು, ಸಮಾಜದಲ್ಲಿ ಗಾಂಧೀಜಿಯವರ ಆದರ್ಶಗಳ ಪ್ರಚುರತೆ, ಸಂವಾದ ಮತ್ತು ಅಧ್ಯಯನಕ್ಕೆ ಪ್ರೇರಣೆಯಾದಂತಾಗಿದೆ ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತ ಹೇಮಂತ್ ಎಂ. ನಿಂಬಾಳ್ಕರ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Share It

You cannot copy content of this page