ಉಪಯುಕ್ತ ಸುದ್ದಿ

ಮೊದಲ ಬಾರಿಗೆ 5 ದಿನಗಳ ವರೆಗೆ ನಡೆಯಲಿದೆ ಕಡಲೇಕಾಯಿ ಪರಿಷೆ: ಸಚಿವ ರಾಮಲಿಂಗಾ ರೆಡ್ಡಿ ನೇತೃತ್ವದ ಸಭೆಯಲ್ಲಿ ತೀರ್ಮಾನ

Share It

ಬೆಂಗಳೂರು: ಕಡಲೆ‌ಕಾಯಿ ಪರಿಷೆಯ 2025 ರ ಪೂರ್ವಾಭಾವಿ ಸಿದ್ದತಾ ಸಭೆ ರಾಮಲಿಂಗಾ ರೆಡ್ಡಿ ನೇತೃತ್ವದಲ್ಲಿ ನಡೆದಿದ್ದು, ಮೊದಲ ಬಾರಿಗೆ 2 ದಿನಗಳ ಪರಿಷೆ 5 ದಿನಗಳಿಗೆ ವಿಸ್ತರಣೆ ನಡೆಸಲು ತೀರ್ಮಾನಿಸಲಾಗಿದೆ.

2024 ರಲ್ಲಿ ಕಡಲೆ ಕಾಯಿ ಪರಿಷೆಯಲ್ಲಿ ಸುಮಾರು 5 ಲಕ್ಷ ಭಕ್ತಾದಿಗಳು ಭಾಗವಹಿಸಿದ್ದು, ಯಶಸ್ವಿಯಾಗಿ ನಡೆದಿದೆ. ಪ್ಲಾಸ್ಟಿಕ್ ಮುಕ್ತ ಕಡಲೆ‌ಕಾಯಿ ಪರಿಷೆ ಎಂಬ ಹೆಗ್ಗಳಿಕೆಗೂ‌ ಪಾತ್ರವಾಗಿತ್ತು. ಪ್ರಸಕ್ತ ವರ್ಷ ನವೆಂಬರ್17 ರಿಂದ ಪ್ರಾರಂಭವಾಗುವ ಐತಿಹಾಸಿಕ ಪ್ರಸಿದ್ಧ ಕಡಲೆ‌ಕಾಯಿ ಪರಿಷೆಯನ್ನು 5 ದಿನಗಳಿಗೆ ವಿಸ್ತರಿಸಿ,  ವಿಜೃಂಭಣೆಯಿಂದ ನಡೆಸಲು ಸಭೆಯಲ್ಲಿ‌‌ ತೀರ್ಮಾನಿಸಲಾಗಿದೆ.

ಪ್ರತಿ ವರ್ಷದಂತೆ ಕಡೇ ಕಾರ್ತಿಕ ಮಾಸದಲ್ಲಿ ಬಸವನಗುಡಿಯ ಶ್ರೀ ಬಸವಣ್ಣ ದೇವಾಲಯದಲ್ಲಿ ದಿನಾಂಕ:17.11.2025 ರಂದು ಸೋಮವಾರ ಬೆಳಗ್ಗೆ 10 ಗಂಟೆಗೆ ಕಡಲೆಕಾಯಿ ಪರಿಷೆ ಉದ್ಘಾಟನೆ ಸಮಾರಂಭಕ್ಕೆ ಸನ್ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯ ಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಆಹ್ವಾನ ನೀಡಲಾಗುತ್ತದೆ. ಉದ್ಘಾಟನೆಯನ್ನು 21 ಬಸವಣ್ಣಗಳನ್ನು ದೇವಸ್ಥಾನಕ್ಕೆ ಆಹ್ವಾನಿಸಿ‌ ವಿಶೇಷ ಪೂಜೆ ಸಲ್ಲಿಸುವ ಮೂಲಕ ಚಾಲನೆ ನೀಡುವುದು ಎಂದು ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ.

ವಿಜೃಂಭಣೆಯ ದೀಪಾಲಂಕಾರ ವ್ಯವಸ್ಥೆ ಮತ್ತು ಈ ವರ್ಷ 5 ದಿನಗಳಿಗೆ  ಹಾಗೂ ಬುಲ್ ಟೆಂಪಲ್ ರಸ್ತೆ, ಗಾಂಧಿ ಬಜಾರ್ ಮತ್ತು ಎನ್. ಆರ್ ರಸ್ತೆಗಳಿಗೂ ಸೇರಿ ದೀಪಾಂಲಕಾರ ವಿಸ್ತರಿಸಲು ತೀರ್ಮಾನ ಮಾಡಲಾಗಿದೆ. ಎನ್ ಜಿ ಓ ಗಳ ಸಹಕಾರದೊಂದಿಗೆ ಪ್ಲಾಸ್ಟಿಕ್ ಕವರ್ ಬಳಸದಂತೆ ಬಟ್ಟೆ ಬ್ಯಾಗ್ ಗಳನ್ನು ಬಳಸಲು ಅಂಗಡಿಯವರಿಗೆ ಮತ್ತು ಸಾರ್ವಜನಿಕರಿಗೆ ಅರಿವು ಮೂಡಿಸಲು ಪರಿಷೆಗೆ ಬನ್ನಿ ಕೈ ಚೀಲ ತನ್ನಿ ಎಂದು ಘೋಷಣೆ ಹಾಗೂ ಪ್ಲಾಸ್ಟಿಕ್ ಸಂಪೂರ್ಣ ನಿಷೇದಿಸಲು ಕ್ರಮ ವಹಿಸಲಾಗಿದೆ ಎಂದರು.

ಸುಂಕ ವಸೂಲಾತಿ ರದ್ದು ಈ‌ ವರ್ಷವೂ ಮುಂದುವರಿಕೆ : ಬುಲ್ ಟೆಂಪಲ್ ರಸ್ತೆಯಲ್ಲಿ ಬೀದಿ ಬದಿ ವ್ಯಾಪಾರಿಗಳಿಂದ ಸುಂಕ ವಸೂಲಾತಿಗೆ ಪ್ರತಿ ವರ್ಷ ಟೆಂಡರ್ ಮಾಡಲಾಗುತ್ತಿದ್ದು, ಟೆಂಡರ್ ದಾರರು ಅಂಗಡಿಯವರಿಂದ ಬಲವಂತವಾಗಿ ಹೆಚ್ಚು ಸುಂಕವನ್ನು ವಸೂಲಿ ಮಾಡುತ್ತಿರುವುದಾಗಿ ಕಳೆದ ವರ್ಷ ದೂರುಗಳು ಬಂದ ಹಿನ್ನೆಲೆಯಲ್ಲಿ ಸುಂಕ ವಸೂಲಾತಿ ಟೆಂಡರ್ ಅನ್ನು ಕೈಬಿಡಲು ಹಾಗೂ ವ್ಯಾಪಾರಸ್ಥರಿಂದ ಸುಂಕವನ್ನು ಕಳೆದ ವರ್ಷದಂತೆ ಈ ವರ್ಷವೂ ವಸೂಲಿ ಮಾಡದಂತೆ  ತೀರ್ಮಾನ ಕೈಗೊಳ್ಳಲಾಗಿದೆ.

ಕಡಲೆಕಾಯಿ ಪರಿಷೆ ದಿನಗಳಂದು ಆರೋಗ್ಯ ಸ್ವಚ್ಛತೆ ನೈರ್ಮಲ್ಯಕ್ಕೆ‌ ಒತ್ತು ಮತ್ತು ನೂಕು ನುಗ್ಗಲು ಉಂಟಾಗದಂತೆ ತಡೆಯಲು ಪೊಲೀಸ್ ಇಲಾಖೆಯ ಸಹಕಾರದೊಂದಿಗೆ ಅಗತ್ಯ ವ್ಯವಸ್ಥೆ, ನಿರಂತರ ವಿದ್ಯುತ್,
ಕುಡಿಯುವ ನೀರಿನ ವ್ಯವಸ್ಥೆ, ಸಾರ್ವಜನಿಕ ಶೌಚಾಲಯದ ವ್ಯವಸ್ಥೆ ಮಾಡಲಾಗುತ್ತದೆ. ಬೀದಿ ದೀಪಗಳ ಅಳವಡಿಕೆ ಮತ್ತು ದುರಸ್ಥಿ, ಸುರಕ್ಷತೆಯ ದೃಷ್ಟಿಯಿಂದ ಹೆಚ್ಚಿನ ಸಿ.ಸಿ.ಟಿ.ವಿಗಳನ್ನು ಪ್ರಮುಖ ಸ್ಥಳಗಳಲ್ಲಿ ಅಳವಡಿಕೆ,‌ ಅಗ್ನಿ ಶಾಮಕ ವಾಹನ ನಿಯೋಜನೆ. ತುರ್ತು ಚಿಕಿತ್ಸೆ ವಾಹನದ ವ್ಯವಸ್ಥೆ, ಮಾರ್ಷಲ್ ಗಳ ನಿಯೋಜನೆ ಮಾಡಲಾಗುತ್ತದೆ ಎಂದರು.

ಸಭೆಯಲ್ಲಿ ಬಸವನಗುಡಿ ಶಾಸಕ ರವಿ ಸುಬ್ರಹ್ಮಣ್ಯ, ಶಾಸಕರು, ಚಿಕ್ಕಪೇಟೆ ಶಾಸಕ ಉದಯ ಗರುಡಾಚಾರ್, ರಾಜ್ಯ ಧಾರ್ಮಿಕ ಪರಿಷತ್  ಸದಸ್ಯರುಗಳಾದ ಕೆ.ಎಂ .ನಾಗರಾಜ್, ದ್ವಾರಕಾನಾಥ್, ಬಿಬಿಎಂಪಿ ಸಹಾಯಕ ಆಯುಕ್ತ ದಿಗ್ವಿಜಯ ಬೋಡ್ಸೆ, ಅಡಿಷನಲ್ ಕಮಿಷನರ್ ಪಾರ್ವತಿ, ಅಧ್ಯಕ್ಷರು , ದೊಡ್ಡ ಗಣಪತಿ ದೇವಸ್ಥಾನ ವ್ಯವಸ್ಥಾಪನಾ ಸಮಿತಿ, ಸ್ವಯಂ ಸೇವಾ ಸಂಸ್ಥೆಯ ಹಾಗೂ‌ ಮುಜರಾಯಿ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.


Share It

You cannot copy content of this page