ರಾಯಚೂರು: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಹಾವಳಿಯಿಂದ ಹೆಚ್ಚಾಗುತ್ತಿರುವ ಆತ್ಮಹತ್ಯೆ ಪ್ರಕರಣಗಳ ವಿರುದ್ಧ ಭಾರಿ ಆಕ್ರೋಶ ವ್ಯಕ್ತವಾಗಿದ್ದು, ರಾಯಚೂರಿನಲ್ಲಿ ಪ್ರತಿಭಟನೆ ನಡೆಯಿತು.
ಮೈಕ್ರೋ ಫೈನಾನ್ಸ್ ಸಿಬ್ಬಂದಿ ಕಿರುಕುಳದಿಂದ ಹಲವಾರು ಜನ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಅನೇಕರು ಗ್ರಾಮಗಳನ್ನು ತೊರೆದು ಹೋಗುತ್ತಿದ್ದಾರೆ. ಸಿಬ್ಬಂದಿ ಅವಾಚ್ಯ ಶಬ್ದಗಳನ್ನು ಬಳಸಿ ಅವಮಾನ ಮಾಡುತ್ತಿದ್ದಾರೆ. ಇದೆಲ್ಲ ನಡೆಯುತ್ತಿದ್ದರೂ ಸರಕಾರ ಅದನ್ನು ತಡೆಯಲು ವಿಫಲವಾಗಿದೆ ಎಂದು ಆರೋಪಿಸಿದ ಪ್ರತಿಭಟನಾಕಾರರು, ಸೂಕ್ತ ಕ್ರಮಕ್ಕೆ ಆಗ್ರಹಿಸಿದರು.
ಇದೆ ಸಂದರ್ಭದಲ್ಲಿ ಪ್ರತಿಭಟನಾ ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್ ಆಗಮಿಸಿದ್ದು, ಅವರಿಗೆ ಮನವಿ ಪತ್ರ ಸಲ್ಲಿಕೆ ಮಾಡಿದ ಹೋರಾಟಗಾರರು, ಮೈಕ್ರೋ ಫೈನಾನ್ಸ್ ಸಂಸ್ಥೆಗಳ ವಿರುದ್ಧ ಸೂಕ್ತ ಕ್ರಮಕ್ಕೆ ಆಗ್ರಹಿಸಿದರು.
ಮನವಿ ಸ್ವೀಕಾರ ಮಾಡಿ ಮಾತನಾಡಿದ ಶರಣ ಪ್ರಕಾಶ್ ಪಾಟೀಲ್, ಈ ಸಂಬಂಧ ಈಗಾಗಲೇ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ. ಅಧಿಕಾರಿಗಳಿಗೆ ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಸೂಚಿಸಿದ್ದಾರೆ. ಈ ಸಂಬಂಧ ಗೃಹಸಚಿವರು ಹಾಗೂ ಅಧಿಕಾರಿಗಳ ಸಭೆಯು ನಡೆದಿದೆ. ಹೀಗಾಗಿ, ನೊಂದವರಿಗೆ ರಕಗಷಣೆ ಒದಗಿಸುವ ಜವಾಬ್ದಾರಿ ನಮ್ಮ ಸರಕಾರಕ್ಕಿದೆ ಎಂದರು.