ಉತ್ತರ ಕರ್ನಾಟಕಕ್ಕೆ ಬಂಪರ್ ಕೊಡುಗೆ : 3450 ಕೋಟಿ ರು. ಅನುದಾನ, ಯಾವ ಯಾಜನೆಗೆ ಎಷ್ಟು ಹಣ ಗೊತ್ತಾ?
ಬೆಳಗಾವಿ: ಉತ್ತರ ಕರ್ನಾಟಕದ ಸಮಸ್ಯೆಗಳ ಕುರಿತು ಚರ್ಚೆ ನಡೆಯಬೇಕು ಎಂಬ ಹೊತ್ತಿನಲ್ಲೇ ಸರಕಾರ 3,450 ಕೋಟಿ ರೂ.ಗಳ ಬಂಪರ್ ಕೊಡುಗೆ ನೀಡುವ ಮೂಲಕ ಉತ್ತರ ಕರ್ನಾಟಕದಲ್ಲಿ ವಿವಿಧ ಅಭಿವೃದ್ಧಿ ಯೋಜನೆ ಕೈಗೊಳ್ಳಲು ಸಚಿವ ಸಂಪುಟ ಸಭೆಯ ಆಡಳಿತಾತ್ಮಕ ಅನುಮೋದನೆ ನೀಡಿದೆ.
ಬೆಳಗಾವಿಯ ಸುವರ್ಣಸೌಧದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಉತ್ತರ ಕರ್ನಾಟಕ ಭಾಗಕ್ಕೆ ಬಂಪರ್ ಅನುದಾನ ನೀಡಲಾಗಿದೆ. ಅದರಲ್ಲೂ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ಕಲ್ಪಿಸಲು ತೀರ್ಮಾನ ಕೈಗೊಳ್ಳಲಾಗಿದೆ.
ಬೆಳಗಾವಿ ಜಿಲ್ಲೆಯ ರಾಯಬಾಗ ಹಾಗೂ ಚಿಕ್ಕೋಡಿ ತಾಲೂಕುಗಳಲ್ಲಿ ಬಾಧಿತ ಅಚ್ಚುಕಟ್ಟಿಗೆ ಕೃಷ್ಣಾ ನದಿಯಿಂದ ನೀರನ್ನು ಎತ್ತಿ, ರಾಯಬಾಗ ಉನ್ನತಮಟ್ಟದ ವಿತರಣಾ ಕಾಲುವೆ (RHLD) ಮತ್ತು ರಾಯಬಾಗ ವಿತರಣಾ ಕಾಲುವೆಗಳಿಗೆ ನೀರು ಹರಿಸುವ 210 ಕೋಟಿ ರೂ.ಗಳ ಮೊತ್ತದ ಏತ ನೀರಾವರಿ ಯೋಜನೆಗೆ ಆಡಳಿತಾತ್ಮಕ ಅನುಮೋದನೆ ಸಿಕ್ಕಿದೆ.
ಇತ್ತ ಬಾಗಲಕೋಟೆ ಜಿಲ್ಲೆಯ ಬಾದಾಮಿ ಮತ್ತು ಬೀಳಗಿ ಮತಕ್ಷೇತ್ರ ವ್ಯಾಪ್ತಿಯಲ್ಲಿನ ಕೆರೂರು ಏತ ನೀರಾವರಿ ಯೋಜನೆಯ 1,503 ಕೋಟಿ ರೂ.ಗಳ ಮೊತ್ತದ ಪರಿಷ್ಕೃತ ಅಂದಾಜಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.
ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಕೃಷ್ಣಾ ನದಿಯಿಂದ ನೀರನ್ನು ಎತ್ತಿ ಚಿಕ್ಕೋಡಿ ಶಾಖಾ ಕಾಲುವೆಗೆ ನೀರು ಹರಿಸುವ 198.90 ಕೋಟಿ ರೂ.ಗಳ ಅಂದಾಜು ಮೊತ್ತದ ಶ್ರೀ ಕರಸಿದ್ದೇಶ್ವರ ಏತ ನೀರಾವರಿ ಯೋಜನೆಗೆ ಆಡಳಿತಾತ್ಮಕ ಅನುಮೋದನೆ ಕೊಟ್ಟಿದೆ.
ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಪಾಮನಕಲ್ಲೂರು ಮತ್ತು ಇತರೆ ಪ್ರದೇಶಗಳಿಗೆ ನಾರಾಯಣಪುರ ಬಲದಂಡೆ ಕಾಲುವೆಯಿಂದ ನೀರಾವರಿ ಸೌಲಭ್ಯ ಕಲ್ಪಿಸುವ 990 ಕೋಟಿ ರೂ.ಗಳ ಅಂದಾಜು ಮೊತ್ತದ ಯೋಜನೆಗೆ ಆಡಳಿತಾತ್ಮಕ ಅನುಮೋದನೆ ಕೊಡಲಾಗಿದೆ.
ಯಲಬುರ್ಗಾ ಮತ್ತು ಕುಕನೂರು ತಾಲೂಕಿನ ವ್ಯಾಪ್ತಿಯಲ್ಲಿನ 19 ಕೆರೆಗಳಿಗೆ ಕೃಷ್ಣಾ ನದಿಯಿಂದ ನೀರು ತುಂಬಿಸುವ ಯೋಜನೆಯ 272 ಕೋಟಿ ರೂ.ಗಳ ಅಂದಾಜು ಮೊತ್ತದ ಏತ ನೀರಾವರಿ ಯೋಜನೆಗೆ ಸಂಪುಟ ಸಭೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.


