ಹಾವೇರಿ: ಎರಡು ಕಾರುಗಳ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ನಾಲ್ವರು ಮೃತಪಟ್ಟ ಘಟನೆ ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕು ತಡಸ-ನೀರಲಗಿ ಗ್ರಾಮದ ಬಳಿ ನಡೆದಿದೆ.
ಬೆಂಗಳೂರಿನ ಚಾಮರಾಜಪೇಟೆಯ ಚಂದ್ರಮ್ಮ (59 ವರ್ಷ), ಇವರ ಪುತ್ರಿಯೂ ಆದ ದಾವಣಗೆರೆ ಜಿಲ್ಲೆ ಹರಿಹರ ಮೂಲದ ಮೀನಾ (38 ವರ್ಷ), ಮಹೇಶ್ ಕುಮಾರ್ ಸಿ (41 ವರ್ಷ) ಮತ್ತು ಧನವೀರ್ (11 ವರ್ಷ) ಮೃತ ದುರ್ದೈವಿಗಳು.
ಇವರೆಲ್ಲರೂ ಹಾವೇರಿ ಮಾರ್ಗವಾಗಿ ಹುಬ್ಬಳ್ಳಿ ಕಡೆ ಆಲ್ಟ್ರೋಜ್ ಕಾರಿನಲ್ಲಿ ಹೊರಟಿದ್ದ ವೇಳೆ ಈ ಭೀಕರ ಅಪಘಾತ ಸಂಭವಿಸಿ ನಾಲ್ವರು ಉಸಿರು ಚೆಲ್ಲಿದ್ದಾರೆ. ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಹಾವೇರಿ ಮಾರ್ಗವಾಗಿ ಹುಬ್ಬಳ್ಳಿಯತ್ತ ಹೊರಟಿದ್ದ ಕಾರು, ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ದಾಟಿ ಎದುರಿಗೆ ಬರುತ್ತಿದ್ದ ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ.
ಸ್ಥಳಕ್ಕೆ ಹಾವೇರಿ ಎಸ್. ಪಿ ಅಂಶುಕುಮಾರ್ ಭೇಟಿ ನೀಡಿ ಪರಶೀಲನೆ ನಡೆಸಿದರು. ಮೃತರ ಶವಗಳನ್ನು ಮರಣೋತ್ತರ ಪರೀಕ್ಷೆಗಾಗಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ತಡಸ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದೆ