ಬೆಂಗಳೂರು: ಕಂದಾಯ ಇಲಾಖೆಯ ನ್ಯಾಯಾಲಯಗಳಲ್ಲಿ 10 ವರ್ಷ, 5 ವರ್ಷ ಕ್ಕೂ ಅಧಿಕ ಅವಧಿಯಿಂದ ಬಾಕಿ ಇದ್ದ ಮುಕ್ಕಾಲು ಪ್ರಕರಣಗಳಿಗೆ ಒಂದೂವರೆ ವರ್ಷದಲ್ಲಿ ಮುಕ್ತಿ ಸಿಕ್ಕಿರುವ ಕುರಿತು ಸಿಎಂ ಸಿದ್ದರಾಮಯ್ಯ ಹರ್ಷ ವ್ಯಕ್ತಪಡಿಸಿದರು.
ನಮ್ಮ ಸರ್ಕಾರ ಬಂದಾಗ 10 ಸಾವಿರಕ್ಕೂ ಮಿಕ್ಕಿ ಅವಧಿ ಮೀರಿದ ಪ್ರಕರಣಗಳು ಇದ್ದವು. ಈಗ ಕೇವಲ 369 ಪ್ರಕರಣಗಳು ಮಾತ್ರ ತಹಶೀಲ್ದಾರ್ ನ್ಯಾಯಾಲಯಗಳಲ್ಲಿವೆ ಎಂದು ಸಿಎಂ ಸಿದ್ದರಾಮಯ್ಯ ಅವರಿಗೆ ಕಂದಾಯ ಸಚಿವ ಕೃಷ್ಣಬೈರೇಗೌಡ ದಾಖಲೆ ಸಮೇತ ವಿವರಿಸಿದರು.
ಬರೀ quantity ವಿಲೇವಾರಿ ಸಾಲದು: quality ವಿಲೇವಾರಿ ಆದರೆ ಮಾತ್ರ ಮೇಲ್ಮನವಿಗಳಿಗೆ ಬ್ರೇಕ್ ಬೀಳುತ್ತದೆ. ಈ ದಿಕ್ಕಲ್ಲಿ ಹೆಚ್ಚಿನ ಗಮನ ಹರಿಸಿ ಎಂದು ಸಚಿವ ಕೃಷ್ಣಬೈರೇಗೌಡರಿಗೆ ಸಿಎಂ ಸೂಚನೆ ನೀಡಿದರು.
ಖಾತೆ ಬದಲಾವಣೆ ಪ್ರಕ್ರಿಯೆಯನ್ನು ಶೇ.65 ಪ್ರಕರಣಗಳಲ್ಲಿ ಒಂದು ದಿನದ ಒಳಗಾಗಿ ಮಾಡಲಾಗುತ್ತಿರುವುದು ಒಳ್ಳೆಯ ಸಂಗತಿ.
ಅಟೋ ಮ್ಯುಟೇಶನ್ ಮೂಲಕ ಇದು ಸಾಧ್ಯವಾಗಿದೆ. ಭೂ ಪರಿವರ್ತನೆ ಸಂಪೂರ್ಣ ಪ್ರಕ್ರಿಯೆಯನ್ನು ಒಂದು ತಿಂಗಳ ಒಳಗಾಗಿ ಪೂರ್ಣಗೊಳಿಸಬೇಕು. ಮಾಸ್ಟರ್ ಪ್ಲಾನ್ ಆದ ಕಡೆ ಮತ್ತೆ ಭೂ ಪರಿವರ್ತನೆ ಅಗತ್ಯವಿಲ್ಲ ಎಂದು ಕಾಯ್ದೆಗೆ ತಿದ್ದುಪಡಿ ಮಾಡಲಾಗಿದೆ. ಈ ಕುರಿತು ಆದೇಶವನ್ನು ಆದಷ್ಟು ಬೇಗನೆ ಹೊರಡಿಸಲು ಸಿಎಂ ಸೂಚನೆ ನೀಡಿದರು.
ನಗರ ಪ್ರದೇಶಗಳಲ್ಲಿ ಮಾಸ್ಟರ್ ಪ್ಲಾನ್ ಕಾಲದಿಂದ ಕಾಲಕ್ಕೆ ನವೀಕರಿಸಬೇಕು. ಮ್ಯುಟೇಶನ್, ಭೂ ಪರಿವರ್ತನೆ ಪ್ರಕರಣಗಳಲ್ಲಿ ಜನಸಾಮಾನ್ಯರಿಗೆ ಯಾವುದೇ ಕಿರುಕುಳ, ಅನಗತ್ಯ ವಿಳಂಬವಾಗದಂತೆ ಎಚ್ಚರಿಕೆ ವಹಿಸಿ ಎಂದುಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ ನೀಡಿದರು.
ಆದಷ್ಟು ಬೇಗನೆ ಮಾಸ್ಟರ್ ಪ್ಲಾನ್ ಸಿದ್ದಪಡಿಸಬೇಕು. ಕಂದಾಯ ನ್ಯಾಯಾಲಯಗಳಲ್ಲಿ ಪ್ರಕರಣಗಳನ್ನು ಆದ್ಯತೆ ಮೇರೆಗೆ ವಿಲೇವಾರಿ ಮಾಡಬೇಕು. ವಿಳಂಬಕ್ಕೆ ಅವಕಾಶ ಇರಬಾರದು. ತಹಶೀಲ್ದಾರ್ ನ್ಯಾಯಾಲಯಗಳಲ್ಲಿ 3 ತಿಂಗಳ ಒಳಗಾಗಿ ಪ್ರಕರಣಗಳ ವಿಲೇವಾರಿ ಮಾಡಬೇಕು. ನಮ್ಮ ಸರ್ಕಾರ ಬಂದಾಗ 10 ಸಾವಿರಕ್ಕೂ ಮಿಕ್ಕಿ ಅವಧಿ ಮೀರಿದ ಪ್ರಕರಣಗಳು ಇದ್ದವು. ಈಗ ಕೇವಲ 369 ಪ್ರಕರಣಗಳು ಮಾತ್ರ ತಹಶೀಲ್ದಾರ್ ನ್ಯಾಯಾಲಯಗಳಲ್ಲಿವೆ. ಪ್ರಕರಣಗಳ ವಿಲೇವಾರಿ ತ್ವರಿತಗೊಳಿಸುವ ಜತೆಗೆ ನ್ಯಾಯದಾನದ ಗುಣಮಟ್ಟ ಸಹ ಸುಧಾರಿಸಬೇಕು ಎಂದು ಸಲಹೆ ನೀಡಿದರು.