- *ವಿಧಾನಸಭೆ ಪ್ರಶ್ನೋತ್ತರ ಕಲಾಪದಲ್ಲಿ ಶಾಸಕ ಯು ಬಿ ಬನಕಾರ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು*
2025-26ನೇ ಸಾಲಿನಲ್ಲಿ ರಾಜ್ಯ ವಲಯ ಯೋಜನೆಯಡಿ ರಾಜ್ಯದ 1,250 ಸರ್ಕಾರಿ ಶಾಲೆಗಳಲ್ಲಿ 1,582 ಶೌಚಾಲಯಗಳನ್ನು ನಿರ್ಮಾಣ ಮಾಡಲು ತೀರ್ಮಾನಿಸಲಾಗಿದೆ ಎಂದು ಮಾನ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಚಿವ ಶ್ರೀ ಮಧು ಬಂಗಾರಪ್ಪ ಅವರು ತಿಳಿಸಿದ್ದಾರೆ.
ವಿಧಾನಸಭೆ ಅಧಿವೇಶನದ ಪ್ರಶ್ನೋತ್ತರ ವೇಳೆಯಲ್ಲಿ ಹಿರೇಕೆರೂರು ಶಾಸಕರಾದ ಶ್ರೀ ಯು ಬಿ ಬಣಕಾರ್ ಅವರು ಕೇಳಿದ್ದ ಪ್ರಶ್ನೆಗೆ ಉತ್ತರಿಸಿದ ಸಚಿವರು, “2025-26ನೇ ಸಾಲಿನಲ್ಲಿ ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯಡಿ 136 ಶೌಚಾಲಯಗಳು ಮಂಜೂರಾಗಿವೆ” ಎಂದು ಮಾಹಿತಿ ನೀಡಿದರು.
ಅನುದಾನ ಹಂಚಿಕೆ ಬಗ್ಗೆ ವಿವರಿಸಿದರು ಸಚಿವರು, “ರಾಜ್ಯ ವಲಯ ಯೋಜನೆಯಡಿ ಶೌಚಾಲಯ ನಿರ್ಮಾಣಕ್ಕೆ ಸಂಬಂಧಿಸಿದಂತೆ 504.23 ಲಕ್ಷ ರೂ. ಅನುದಾನ ಮತ್ತು ಶಾಲಾ ಕೊಠಡಿಗಳ ನಿರ್ಮಾಣಕ್ಕೆ 2317.00 ಲಕ್ಷ ರೂ. ಅನುದಾನ ಉಳಿಕೆಯಾಗಿರುತ್ತದೆ. ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯಡಿ 2025-26ನೇ ಸಾಲಿನಲ್ಲಿ ಶೌಚಾಲಯ ನಿರ್ಮಾಣಕ್ಕೆ 544.00 ಲಕ್ಷ ರೂ. ಅನುದಾನ ಬಿಡುಗಡೆ ಮಾಡಲಾಗಿದೆ. 2025-26ನೇ ಸಾಲಿನಲ್ಲಿ ಪಿ.ಎಂ ಶ್ರೀ ಯೋಜನೆಯಡಿ 216 ಶಾಲಾ ಕೊಠಡಿಗಳ ನಿರ್ಮಾಣಕ್ಕೆ 4854.60 ಲಕ್ಷ ರೂ. ಮಂಜೂರಾಗಿರುತ್ತದೆ” ಎಂದು ಹೇಳಿದರು.
ಮೊದಲ ಹಂತದಲ್ಲಿ ಅತಿ ಹೆಚ್ಚು ವಿದ್ಯಾರ್ಥಿಗಳಿರುವ ಶಾಲೆಗೆಳಿಗೆ ಆದ್ಯತೆ ನೀಡಿ ಪರಿಗಣಿಸಿರುವ ಕಾರಣ ಹಿರೇಕೆರೂರು ವಿಧಾನಸಭಾ ಕ್ಷೇತ್ರದ ಸರ್ಕಾರಿ ಶಾಲೆಗಳಲ್ಲಿ ಶೌಚಾಲಯ ನಿರ್ಮಾಣಕ್ಕಾಗಿ ಅನುದಾನ ಮಂಜೂರಾಗಿರುವುದಿಲ್ಲ. ಉಳಿಕೆ ಇರುವ ಅನುದಾನದಲ್ಲಿ ಹಿರೇಕೆರೂರು ವಿಧಾನಸಭಾ ಕ್ಷೇತ್ರದ 2 ಶಾಲೆಗಳಲ್ಲಿ 2 ಬಾಲಕರ ಶೌಚಾಲಯ ಹಾಗೂ 7 ಶಾಲೆಗಳಲ್ಲಿ 13 ಬಾಲಕಿಯರ ಶೌಚಾಲಯ ನಿರ್ಮಾಣ ಕಾಮಗಾರಿಗಳಿಗೆ ಪ್ರತಿ ಘಟಕಕ್ಕೆ 2 ಲಕ್ಷ ರೂ. ವೆಚ್ಚದಲ್ಲಿ ಒಟ್ಟು 30 ಲಕ್ಷ ರೂ. ಮೊತ್ತದಲ್ಲಿ ಕಾಮಗಾರಿ ಕೈಗೊಳ್ಳುವ ಪ್ರಸ್ತಾವನೆ ಪರಿಶೀಲನೆಯಲ್ಲಿದೆ. ನಿಯಮಾನುಸಾರ ಪರಿಶೀಲಿಸಿ ಸೂಕ್ತ ಕ್ರಮಕೈಗೊಳ್ಳಲಾಗುವುದು ಎಂದು ಸಚಿವ ಮಧು ಬಂಗಾರಪ್ಪ ಅವರು ಸದನದಲ್ಲಿ ಉತ್ತರಿಸದರು.

