ನೆಲಮಂಗಲ: “ಚನ್ನಪಟ್ಟಣಕ್ಕೆ ನಾನೇ ಅಭ್ಯರ್ಥಿ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು.
ಚನ್ನಪಟ್ಟಣ ಉಪಚುನಾವಣೆಯಲ್ಲಿ ಅಭ್ಯರ್ಥಿ ಯಾರಗಲಿದ್ದಾರೆ ಎನ್ನುವ ಮಾಧ್ಯಮದವರ ಪ್ರಶ್ನೆಗೆ ನೆಲಮಂಗಲದ ವೀರಭದ್ರೇಶ್ವರ ದೇವಾಲಯದ ಬಳಿ ಡಿಸಿಎಂ ಅವರು ಗುರುವಾರ ಹೀಗೆ ಹೇಳಿದರು.
ಈ ಹಿಂದೆ ಚನ್ನಪಟ್ಟಣದಲ್ಲಿ ಸ್ಥಳೀಯ ಶಾಸಕರು ಧ್ವಜಾರೋಹಣ ನೆರವೇರಿಸಿಲ್ಲ ಎನ್ನುವ ಬಗ್ಗೆ ಕೇಳಿದಾಗ “ನಾನು ಕಳೆದ ಐದು ವರ್ಷಗಳಿಂದ ರಾಮನಗರದಲ್ಲಿ ಧ್ವಜಾರೋಹಣ ಮಾಡಿದ್ದೇನೆ. ಚನ್ನಪಟ್ಟಣದ ಬಗ್ಗೆ ಅಧಿಕಾರಿಗಳ ಬಳಿ ಕೇಳಿದಾಗ ಆರು ವರ್ಷಗಳಿಂದ ಯಾರು ಬಂದು ಧ್ವಜಾರೋಹಣ ನಡೆಸಿಲ್ಲ ಎಂದರು.
ಅವರಿಗೆ ದೇಶದ ಮೇಲೆ ವಿಶ್ವಾಸವಿಲ್ಲ ಎಂದೆನಿಸುತ್ತದೆ. ಅವರು ಏನಾದರು ಮಾಡಿಕೊಳ್ಳಲಿ, ನಾನು ನನ್ನ ಕರ್ತವ್ಯ ಮಾಡಿದ್ದೇನೆ” ಎಂದು ಪರೋಕ್ಷವಾಗಿ ಕುಮಾರಸ್ವಾಮಿ ಅವರಿಗೆ ತಿರುಗೇಟು ನೀಡಿದರು.
ಪಂಚ ಗ್ಯಾರಂಟಿಗಳನ್ನು ನಿಲ್ಲಿಸುವ ಬಗ್ಗೆ ಒಂದಷ್ಟು ಸಚಿವರು ಹೇಳಿಕೆ ನೀಡುತ್ತಿದ್ದಾರೆ ಎಂದು ಕೇಳಿದಾಗ “ನಿಲ್ಲಿಸುವ ಬಗ್ಗೆ ಯಾವ ಸಚಿವರು ಮಾತನಾಡುತ್ತಿಲ್ಲ. ಆದರೆ, ಅನುಕೂಲ ಇರುವವರು ಬೇಡ ಎಂದು ಹೇಳುತ್ತಿದ್ದಾರೆ.
ಅವರಿಗೂ ಸೌಲಭ್ಯ ನೀಡಲಾಗುತ್ತಿದೆ ಎನ್ನುವ ಬಗ್ಗೆ ಅಭಿಪ್ರಾಯ ಬರುತ್ತಿದೆ. ಇದರ ಬಗ್ಗೆ ಆನಂತರ ಯೋಚನೆ ಮಾಡುತ್ತೇವೆ. ಗ್ಯಾರಂಟಿಗಳಲ್ಲಿ ಯಾವುದೇ ಬದಲಾವಣೆಯಿಲ್ಲ” ಎಂದು ಸ್ಪಷ್ಟ ಪಡಿಸಿದರು.
ಪ್ರಯತ್ನಕ್ಕಿಂತ ಪ್ರಾರ್ಥನೆಗೆ ಕಾರ್ಯಗಳು ಬೇಗ ಸಿದ್ದಿಸುತ್ತವೆ. ಈ ವರ್ಷ ದೇಶ, ರಾಜ್ಯಕ್ಕೆ ಉತ್ತಮ, ಮಳೆ ಬೆಳೆಯಾಗಲಿ, ಶಾಂತಿ ನೆಲೆಸಲಿ ಎಂದು ಪ್ರಾರ್ಥನೆ ಮಾಡುತ್ತೇನೆ” ಎಂದರು.

