ರಾಮಲಿಂಗಾ ರೆಡ್ಡಿ ಮುಂದಿನ ಸಿಎಂ ಕೂಗು: ಊಹಪೋಹದ ವರದಿ ಬಗ್ಗೆ ರೆಡ್ಡಿ ಬೇಸರ
ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಕಳೆದ ಕೆಲವು ದಿನಗಳಿಂದ #RamalingaReddyForCM ಎಂಬ ಅಭಿಯಾನ ಶುರುವಾಗಿದ್ದು, ಈ ಕುರಿತು ಸಚಿವ ರಾಮಲಿಂಗಾ ರೆಡ್ಡಿ ಸ್ವತಃ ಸ್ಪಷ್ಟನೆ ನೀಡಿದ್ದಾರೆ.
ಕೆಲವರು ಇಂತಹ ಸುದ್ದಿ ಹಬ್ಬಿಸುತ್ತಿರುವುದು ನನ್ನ ಗಮನಕ್ಕೆ ಬಂದಿದೆ. ರಾಜ್ಯದಲ್ಲಿ ಸರ್ಕಾರ ಸದೃಢವಾಗಿದ್ದು, ಪ್ರಸ್ತುತ ಮುಖ್ಯಮಂತ್ರಿ ಸ್ಥಾನ ಸಹ ಖಾಲಿ ಇರುವುದಿಲ್ಲ ಮತ್ತು ನಾನು ಅದರ ಆಕಾಂಕ್ಷಿಯಲ್ಲ ಎಂದು ಈ ಮೂಲಕ ಸ್ಪಷ್ಟಪಡಿಸುತ್ತೇನೆ ಎಂದು ತಿಳಿಸಿದ್ದಾರೆ.
ನನ್ನ ಮೇಲೆ ಮತ್ತು ಪಕ್ಷದ ಮೇಲೆ ಗೌರವವಿದ್ದರೆ, ದಯವಿಟ್ಟು ಈ ರೀತಿಯ ಆಧಾರರಹಿತ ಪ್ರಚಾರವನ್ನು ತಕ್ಷಣವೇ ನಿಲ್ಲಿಸಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಮ್ಮ ಸರ್ಕಾರ ಉತ್ತಮವಾಗಿ ಜನಪರ ಕಾರ್ಯಗಳನ್ನು ಮಾಡುತ್ತಿದೆ. ಈ ಸಮಯದಲ್ಲಿ ನಾವೆಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಿ, ಜನರಿಗೆ ನೀಡಿದ ಭರವಸೆಗಳನ್ನು ಈಡೇರಿಸುವುದಷ್ಟೇ ನಮ್ಮ ಗುರಿಯಾಗಿರಬೇಕು. ಪಕ್ಷ ಮತ್ತು ನಾಡಿನ ಜನತೆ ವಹಿಸಿರುವ ಜವಾಬ್ದಾರಿಯನ್ನು ನಿಷ್ಠೆಯಿಂದ ನಿರ್ವಹಿಸುವುದರತ್ತ ಮಾತ್ರ ನನ್ನ ಗಮನವಿದೆ ಎಂದಿದ್ದಾರೆ.
ಆದ್ದರಿಂದ, ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ನನ್ನ ಹಿತೈಷಿಗಳು ಯಾರೂ ಇಂತಹ ಗೊಂದಲಕಾರಿ ಪ್ರಚಾರಕ್ಕೆ ಕಿವಿಗೊಡಬಾರದು ಮತ್ತು ಇದರಲ್ಲಿ ಭಾಗಿಯಾಗಬಾರದು ಎಂದು ಕೋರುತ್ತೇನೆ. ನಾವೆಲ್ಲರೂ ಒಟ್ಟಾಗಿ ಪಕ್ಷವನ್ನು ಬಲಪಡಿಸಲು ಮತ್ತು ರಾಜ್ಯದ ಅಭಿವೃದ್ಧಿಗಾಗಿ ಶ್ರಮಿಸೋಣ ಎಂದು ಕರೆ ನೀಡಿದ್ದಾರೆ.
