ಮಂಗಳೂರು: ಬಜಪೆಯ ಕಿನ್ನಿಪದವು ಹಳೆ ವಿಮಾನ ನಿಲ್ದಾಣ ರಸ್ತೆಯಲ್ಲಿ ಗುರುವಾರ ರಾತ್ರಿ ರೌಡಿ ಶೀಟರ್ ಒಬ್ಬರ ಕೊಲೆ ನಡೆದಿರುವ ಬಗ್ಗೆ ವರದಿಯಾಗಿದೆ.
ಕೊಲೆಯಾದವರನ್ನು ರೌಡಿ ಶೀಟರ್ ಸುಹಾಸ್ ಶೆಟ್ಟಿ ಎಂದು ಗುರುತಿಸಲಾಗಿದೆ. ಈತ ಸುರತ್ಕಲ್ನ ಮುಹಮ್ಮದ್ ಫಾಝಿಲ್ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿದ್ದ ಎಂದು ಸ್ಥಳೀಯರು ತಿಳಿಸಿದ್ದಾರೆ.
ತಂಡವೊಂದು ಸಾರ್ವಜನಿಕರ ಎದುರಲ್ಲೇ ತಲವಾರಿನಿಂದ ದಾಳಿ ನಡೆಸುತ್ತಿರುವ ವೀಡಿಯೊ ವೈರಲ್ ಆಗಿದೆ.
ಸುಹಾಸ್ ಶೆಟ್ಟಿ ವಿರುದ್ಧ ಮುಹಮ್ಮದ್ ಫಾಝಿಲ್ ಕೊಲೆ ಪ್ರಕರಣ ಸೇರಿದಂತೆ ಹಲವು ಪ್ರಕರಣಗಳು ದಾಖಲಾಗಿದ್ದು, ಬಜಪೆ ಪೊಲೀಸ್ ಠಾಣೆಯಲ್ಲಿ ರೌಡಿ ಶೀಟರ್ ತೆರೆಯಲಾಗಿದೆ ಪೊಲೀಸರು ತಿಳಿಸಿದ್ದಾರೆ.
ಕಿನ್ನಿಪದವು ಪೇಟೆಯಲ್ಲಿ ಮೀನಿನ ಪಿಕ್ ಅಪ್ ಮತ್ತು ಸುಹಾಸ್ ಶೆಟ್ಟಿ ಸಂಚರಿಸುತ್ತಿದ್ದ ಕಾರು ಅಪಘಾತ ಸಂಭವಿಸಿ ಪಕ್ಕದಲ್ಲಿದ್ದ ಅಂಗಡಿಗೆ ನುಗ್ಗಿತ್ತು. ಆ ಬಳಿಕ ಮಾತಿನ ಚಕಮಕಿ ನಡೆದು ಹೊಡೆದಾಟ ಆರಂಭಗೊಂಡಿದ್ದು, ಆರೋಪಿಗಳು ಮಾರಕಾಸ್ತ್ರದಿಂದ ಕೊಚ್ಚಿ ಪರಾರಿಯಾಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
2022ರ ಜುಲೈ 28ರಂದು ಸುರತ್ಕಲ್ ಪೇಟೆಯಲ್ಲಿ ಫಾಜಿಲ್ ಹತ್ಯೆಯಾಗಿತ್ತು. ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆಗೆ ಪ್ರತೀಕಾರವಾಗಿ ಫಾಜಿಲ್ ಹತ್ಯೆ ನಡೆದಿತ್ತು ಎನ್ನಲಾಗಿತ್ತು. ಫಾಜಿಲ್ ಹತ್ಯೆ ಕೇಸ್ ನಲ್ಲಿ ಪ್ರಮುಖ ಆರೋಪಿಯಾಗಿದ್ದ ಸುಹಾಸ್ ಶೆಟ್ಟಿಯನ್ನು ಪ್ರತೀಕಾರ ರೂಪದಲ್ಲಿ ಈಗ ಕೊಲೆ ಮಾಡಲಾಗಿದೆ.
ಸುಹಾಸ್ ಶೆಟ್ಟಿ ಈ ಹಿಂದೆ ಬಜರಂಗದಳದಲ್ಲಿದ್ದು ಗೋರಕ್ಷಣೆ ವಿಷಯದಲ್ಲಿ ಸಕ್ರಿಯನಾಗಿದ್ದ. ಕೊಲೆ, ಕೊಲೆಯತ್ನ ಪ್ರಕರಣದಲ್ಲಿ ಆರೋಪಿಯಾಗಿದ್ದ. ಇಂದು ರಾತ್ರಿ 8.30ರ ಸುಮಾರಿಗೆ ಆತನ ಮೇಲೆ ತಲವಾರು ದಾಳಿ ಮಾಡಿ ಬರ್ಬರವಾಗಿ ಕೊಂದು ಹಾಕಿದ್ದಾರೆ. ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.