ಮೈಸೂರು: ಹಾಲು ಉತ್ಪಾದಕರ ಸಂಘದಲ್ಲಿ ಅವ್ಯವಹಾರ ನಡೆಸಿದ್ದಾರೆ ಎಂದು ಆರೋಪಿಸಿ ಕಾರ್ಯದರ್ಶಿ ವಿರುದ್ಧ ಮಹಿಳೆಯರು ಪ್ರತಿಭಟನೆ ನಡೆಸುತ್ತಿದ್ದಾರೆ.
ಮೈಸೂರು ಜಿಲ್ಲೆಯ ಕೆ.ಆರ್.ನಗರ ತಾಲೂಕಿನ ಸಾಲಿಗ್ರಾಮ ಹೋಬಳಿ ಚುಂಚನಕಟ್ಟೆ ಗ್ರಾಮದ ಹಾಲು ಉತ್ಪಾದಕರ ಮಹಿಳಾ ಸಂಘದ ಆವರಣದಲ್ಲಿ 20 ಕ್ಕೂ ಹೆಚ್ಚು ಮಹಿಳೆಯರು ಪ್ರತಿಭಟನೆ ನಡೆಸುತ್ತಿದ್ದಾರೆ.
ಸಂಘದ ಕಾರ್ಯದರ್ಶಿ ಪ್ರಭಾವತಿ ವಿರುದ್ಧ ಆರೋಪ ಮಾಡುತ್ತಿರುವ ಮಹಿಳೆಯರು, ಹಾಲು ಉತ್ಪಾದಕರಿಗೆ ಸರಕಾರ ಕೊಡುವ ಸಹಾಯಧನ, ಬೋನಸ್ ನೀಡದೆ ವಂಚನೆ ಮಾಡಿದ್ದಾರೆ. ಈ ಬಗ್ಗೆ ಸಂಘದ ಇತರೆ ಸದಸ್ಯರಿಗೆ ಮಾಹಿತಿಯನ್ನು ನೀಡಿಲ್ಲ ಎಂದು ಆರೋಪಿಸಿದರು.
ಕಚೇರಿಗೆ ಬೀಗಜಡಿದು ಷೇರುದಾರ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದ್ದು, 20 ಕ್ಕೂ ಹೆಚ್ಚು ಮಹಿಳಾ ಸದಸ್ಯರಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಸ್ಥಳಕ್ಕೆ ಹಿರಿಯ ಅಧಿಕಾರಿಗಳು ಆಗಮಿಸಿ ಅವರ ವಿರುದ್ಧ ತನಿಖೆ ನಡೆಸಲು ಆದೇಶ ನೀಡುವವರೆಗೆ ಬೀಗ ತೆಗೆಯಲು ಬಿಡುವುದಿಲ್ಲ ಎಂದು ಪಟ್ಟುಹಿಡಿದಿದ್ದಾರೆ.