ಬೆಂಗಳೂರು: ಜಿಗಣಿಯಲ್ಲಿರುವ ಕಾರ್ಖಾನೆಯೊಂದರಲ್ಲಿ ಬೆಂಕಿ ಆಕಸ್ಮಿಕ ಸಂಭವಿಸಿದ್ದು, ಮೂರಂತಸ್ತಿನ ಕಟ್ಟಡವೊಂದು ಸಂಪೂರ್ಣವಾಗಿ ಭಸ್ಮವಾಗಿರುವ ಘಟನೆ ನಡೆದಿದೆ.
ಮದ್ಯದ ಬಾಟಲಿಯ ಸ್ಟಿಕರ್, ಲೇಬಲ್ ತಯಾರಿಕೆ ಘಟಕದಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ. ಕಾರ್ಖಾನೆಯಲ್ಲಿ ಯಾರೂ ಕೆಲಸಗಾರರು ಇಲ್ಲದಿದ್ದ ಕಾರಣದಿಂದ ಯಾವುದೇ ಸಾವು ನೋವು ಸಂಭವಿಸಿಲ್ಲ ಎನ್ನಲಾಗಿದೆ.
ಸ್ಥಳಕ್ಕಾಗಮಿಸಿದ ಎಂಟು ಅಗ್ನಿಶಾಮಕ ಸಿಬ್ಬಂದಿ ಸತತ ೪ ಗಂಟೆಗಳ ಕಾಲ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಜಿಗಣಿ, ಆನೇಕಲ್, ಬೊಮ್ಮಸಂದ್ರ ಅಗ್ನಿಶಾಮಕ ಠಾಣೆಗಳ ವಾಹನಗಳು ಮತ್ತು ಸಿಬ್ಬಂದಿ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.

