ಬೆಳಗಾವಿ : ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರ ಒಡೆತನಕ್ಕೆ ಸೇರಿರುವ ಶ್ರೀ ಸಿದ್ಧ ಸಿರಿ ಸಕ್ಕರೆ ಕಾರ್ಖಾನೆ ಮತ್ತು ಎಥೆನಾಲ್ ಘಟಕಕ್ಕೆ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ತಕ್ಷಣ ಅನುಮತಿ ನೀಡಬೇಕು ಎಂದು ಬೆಳಗಾವಿ ಜಿಲ್ಲಾ ಲಿಂಗಾಯತ ಪಂಚಮಸಾಲಿ ಸಮಾಜದ ಜಿಲ್ಲಾಧ್ಯಕ್ಷ ಆರ್. ಕೆ.ಪಾಟೀಲ ಒತ್ತಾಯಿಸಿದ್ದಾರೆ.
ಬೆಳಗಾವಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ತಕ್ಷಣ ಅನುಮತಿ ಪತ್ರ ನೀಡಬೇಕು. ಇಲ್ಲದೆ ಹೋದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡುವುದು ಅನಿವಾರ್ಯ. ಸೆಪ್ಟೆಂಬರ್ 25 ರ ಒಳಗೆ ಅನುಮತಿ ಪತ್ರ ನೀಡಲೇಬೇಕು ಎಂದು ಆಗ್ರಹಿಸಿದರು.
ಸಹಕಾರಿ ಸಕ್ಕರೆ ಸಂಸ್ಥೆಗಳ ರೈತ ಘಟಕದ ರಾಜ್ಯಾಧ್ಯಕ್ಷ ರಾಜು ಕುಡಸೋಮಣ್ಣವರ, ಬೆಳಗಾವಿ ಜಿಲ್ಲಾ ಲಿಂಗಾಯತ ಪಂಚಮಸಾಲಿ ಯುವ ಘಟಕದ ಜಿಲ್ಲಾಧ್ಯಕ್ಷ ಗುಂಡು ಪಾಟೀಲ, ಅಖಿಲ ಕರ್ನಾಟಕ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸ್ಮರಣೋತ್ಸವ ಸಮಿತಿ ಅಧ್ಯಕ್ಷ ರಾಜು ಸೊಗಲ, ಬಸವ ಸೌಹಾರ್ದ ಸೊಸೈಟಿಯ ಅಧ್ಯಕ್ಷ ಶಿವಾನಂದ ಬಡ್ಡಿಮನಿ, ಬೆಳಗಾವಿ ಲಿಂಗಾಯತ ಪಂಚಮಸಾಲಿ ನಗರ ಘಟಕ ಅಧ್ಯಕ್ಷ ಶಿವಾನಂದ ತಂಬಾಕೆ, ಬೆಳಗಾವಿ ಜಿಲ್ಲೆಯ ಬಿಜೆಪಿ ಮುಖಂಡ ಮಹಾಂತೇಶ ವಕ್ಕುಂದ ಉಪಸ್ಥಿತರಿದ್ದರು.

