ಮೈಸೂರು: ಚಾಮುಂಡಿ ಬೆಟ್ಟದ ನ್ಯೂನತೆಗಳನ್ನು ಸರಿಪಡಿಸಲು ಚಾಮುಂಡೇಶ್ವರಿ ಕ್ಷೇತ್ರ ಪ್ರಾಧಿಕಾರದ ಅವಶ್ಯಕತೆ ಇದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಒಳ್ಳೆಯ ಕೆಲಸ ಮಾಡಿದ್ದಾರೆ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಹೇಳಿದರು.
ಸಿಎಂ ಸಿದ್ದರಾಮಯ್ಯರನ್ನು ಸೈದ್ಧಾಂತಿಕ ವಿಚಾರದಲ್ಲಿ ಮಾತ್ರ ವಿರೋಧಿಸುತ್ತೇನೆ. ಆದರೆ ಚಾಮುಂಡೇಶ್ವರಿ ಕ್ಷೇತ್ರ ಪ್ರಾಧಿಕಾರವನ್ನು ವಿರೋಧ ಮಾಡುವುದಿಲ್ಲ ಎಂದರು.
ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಪೊಲೀಸ್ ಠಾಣೆ ಹಾಗೂ ಆಸ್ಪತ್ರೆ ಬೇಕು. ಇದೆಲ್ಲಾ ಆಗಬೇಕಿದ್ದರೆ ಒಂದು ಪ್ರಾಧಿಕಾರ ಬೇಕೇ ಬೇಕು. ಹಿಂದೆ ಬಿಜೆಪಿ ಸರ್ಕಾರದಲ್ಲೂ ಪ್ರಾಧಿಕಾರಬೇಕೆಂದು ಧ್ವನಿ ಎತ್ತಿದ್ದೆವು. ಸಿದ್ದರಾಮಯ್ಯ ಪ್ರಾಧಿಕಾರ ರಚನೆ ಮಾಡಿದ್ದಾರೆ, ಇದು ಒಳ್ಳೆಯ ಕೆಲಸ ಎಂದರು.
ಅಮೃತ್ ಯೋಜನೆಯ ಕುಡಿಯುವ ನೀರು ತಲುಪದಿರಲು ಕಾರಣ ಯಾರು? ನಾನು ಹೇಳಿದರೆ ವಿವಾದ ಆಗುತ್ತದೆ. ಪೈಪ್ಲೈನ್ ಬಗ್ಗೆ ನೀವೇ ನೋಡಿ ಎಂದು ಯದುವೀರ್ ವಿರುದ್ಧ ಮಾಜಿ ಸಂಸದ ಪ್ರತಾಪ್ ಸಿಂಹ ಆಕ್ರೋಶ ವ್ಯಕ್ತಪಡಿಸಿದರು.
ಚಾಮುಂಡಿ ಬೆಟ್ಟದಲ್ಲಿ ಮುಸ್ಲಿಮರ 12 ಅಂಗಡಿಗಳಿದ್ದವು. ಅಲ್ಲಿರುವುದು ಹಿಂದೂಗಳ ದೇವಸ್ಥಾನ. ಅಲ್ಲಿ ಯಾಕೆ ಮುಸ್ಲಿಂ ಅಂಗಡಿ ಇಡಬೇಕು? ಮುಜರಾಯಿ ಕಾನೂನಿನಲ್ಲಿ ಕೂಡ ಇದಕ್ಕೆ ಅವಕಾಶ ಇಲ್ಲ ಎಂದು ಮುಸ್ಲಿಂ ಅಂಗಡಿಗಳನ್ನು ತೆಗೆಸಿದ್ದೆ ಎಂದು ಪ್ರತಾಪ್ ಸಿಂಹ ಹೇಳಿದರು.

