ಬೆಂಗಳೂರು: ಹೆಣ್ಣೂರಿನ ಬಾಬುಸಾಬ್ ಪಾಳ್ಯದಲ್ಲಿ ಮಂಗಳವಾರ ನಿರ್ಮಾಣ ಹಂತದ ಕಟ್ಟಡ ಕುಸಿದು ಬಿದ್ದು, ಐದು ಮಂದಿ ಮೃತಪಟ್ಟಿದ್ದಾರೆ.
ಅರ್ಮಾನ್, ತ್ರಿಪಾಲಿ, ಮೊದಮ್ಮದ್ ಸಾಹಿಲ್ ಮೃತಪಟ್ಟಿದ್ದು, ಇನ್ನಿಬ್ಬರ ಗುರುತು ಪತ್ತೆಯಾಗಿಲ್ಲ ರಾತ್ರಿಇಡೀ ಅವಶೇಷಗಳಡಿ ಸಿಲುಕಿದವರ ಪತ್ತೆಕಾರ್ಯ ನಡೆದಿದೆ. ಕಾಮಗಾರಿಯ ವೇಳೆಗೆ 16 ಕಾರ್ಮಿಕರು ಕೆಲಸ ಮಾಡುತ್ತಿದ್ದರು ಎನ್ನಲಾಗಿದ್ದು, 6 ಮಂದಿ ಕಾರ್ಮಿಕರಿಗೆ ತೀವ್ರ ಗಾಯಗಳಾಗಿದ್ದು, ಓರ್ವ ಕಾರ್ಮಿಕನ ಪರಿಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ.
ಹೆಣ್ಣೂರು ಸಮೀಪದ ಬಾಬಾ ಸಾಬ್ ಪಾಳ್ಯದಲ್ಲಿ. 60-40 ಸೈಟ್ ಅಳತೆಯಲ್ಲಿ 6 ಅಂತಸ್ತಿನ ಅಪಾರ್ಟ್ಮೆಂಟ್ ನಿರ್ಮಿಸಲಾಗ್ತಿತ್ತು. ನಿರ್ಮಾಣ ಹಂತದ ಕಟ್ಟಡದಲ್ಲಿ ಬಿಹಾರ ಮತ್ತು ಉತ್ತರ ಕರ್ನಾಟಕ ಮೂಲದ 21ಮಂದಿ ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಆದರೆ ಮಳೆ ಹೊಡೆತಕ್ಕೆ, ಕಳಪೆ ಕಾಮಗಾರಿಯಿಂದ ಕೂಡಿದ್ದ ಕಟ್ಟಡ ಮಂಗಳವಾರ ಸಂಜೆ ಕುಸಿದುಬಿದ್ದಿದೆ.
ಅಗ್ನಿಶಾಮಕ, ಎನ್ಡಿಆರ್ಎಫ್, ಪೊಲೀಸರು ಕಾರ್ಯಾಚರಣೆ ನಡೆಸಿ ಹಲವರನ್ನು ರಕ್ಷಣೆ ಮಾಡಿದ್ದು, ಗಾಯಗೊಂಡವರನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಇನ್ನು ಹಲವು ಅವೇಶಷಗಳಡಿಯಲ್ಲಿ ಸಿಲುಕಿರುವ ಶಂಕೆ ಇದ್ದು, ಒಂದು ಹ್ಯಾಮರ್, ಮೂರು ಜೆಸಿಬಿಗಳಿಂದ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.
ತಳಪಾಯದಲ್ಲಿ ಕಬ್ಬಿಣದ ರಾಡುಗಳನ್ನು ಸರಿಯಾಗಿ ಅಳವಡಿಕೆ ಮಾಡಿರಲಿಲ್ಲ. ಹಾಗೇ ಕಾಂಪೌಡ್ ನಿರ್ಮಾಣಕ್ಕೆ ಅಗೆಯಲಾಗಿದ್ದ ಗುಂಡಿಯಲ್ಲಿ ಅಪಾರ ಪ್ರಮಾಣದ ಮಳೆ ನೀರು ಶೇಖರಣೆಗೊಂಡು ಭೂಮಿ ಸಡಿಲವಾಗಿ ಕಟ್ಟಡ ಕುಸಿದಿದೆ ಎನ್ನಲಾಗಿದೆ.
ಮಲ್ಲೇಶ್ವರಂನಲ್ಲಿ ವಾಸವಿದ್ದ ಆಂಧ್ರ ಮೂಲದ ಮುನಿರಾಜು ರೆಡ್ಡಿ ಎಂಬುವರಿಗೆ ಸೇರಿದ ಕಟ್ಟಡ ಇದಾಗಿದ್ದು, 6 ಅಂತಸ್ತಿನ ಅಪಾರ್ಟ್ಮೆಂಟ್ ನಿರ್ಮಾಣ ಕಾರ್ಯ 8 ತಿಂಗಳಿಂದ ನಡೆಯುತ್ತಿದೆ. ಆದ್ರೆ, ಇದೀಗ ಏಕಾಏಕಿ ಕುಸಿದುಬಿದ್ದಿದೆ. ಈ ಘಟನೆ ಸಂಭವಿಸುತ್ತಿದ್ದಂತೆಯೇ ಕಟ್ಟಡ ಮಾಲೀಕ ಮುನಿರಾಜು ರೆಡ್ಡಿ ಸಂಪರ್ಕಕ್ಕೆ ಸಿಗದೇ ನಾಪತ್ತೆಯಾಗಿದ್ದಾರೆ.
ನಾಲ್ಕು ಅಂತಸ್ತಿನ ಕಟ್ಟಡ ನಿರ್ಮಾಣಕ್ಕೆ ಮಾತ್ರ ಅನುಮತಿ ಪಡೆದಿರುವ ಬಗ್ಗೆ ಮಾಹಿತಿ ಇದೆ. ನೆಲಮಹಡಿ ಪಾರ್ಕಿಂಗ್ ಬಿಟ್ಟು 7 ಅಂತಸ್ತಿನ ಕಟ್ಟಡ ನಿರ್ಮಾಣ ಆರೋಪ ಕೇಳಿಬಂದಿದೆ. ಸದ್ಯ ಮುನಿರಾಜು ರೆಡ್ಡಿ ವಿರುದ್ಧ ಹೆಣ್ಣೂರು ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

