ಬೆಂಗಳೂರು: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದಿಂದ ದುಃಖಿತನಾಗಿದ್ದೇನೆ. ಅಪಾರ ಜ್ಞಾನ, ದೂರದೃಷ್ಟಿಯ ಆಲೋಚನೆ ಹಾಗೂ ಸಮರ್ಥ ನಾಯಕತ್ವವು ಭಾರತದ ನೆಲದಲ್ಲಿ ಅವರನ್ನು ಅಮರವಾಗಿಸಲಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಸಾಮಾಜಿಕ ಜಾಲತಾಣದ ಮೂಲಕ ಸಂತಾಪ ವ್ಯಕ್ತಪಡಿಸಿರುವ ಅವರು, ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದಾಗ ನಾನು ಮೊದಲ ಬಾರಿಗೆ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡೆ. ಈ ಸಂದರ್ಭದಲ್ಲಿ ನಮ್ಮ ಸರ್ಕಾರದ ಯೋಜನೆಗಳಿಗೆ ಅವರಿಂದ ದೊರೆತ ಮಾರ್ಗದರ್ಶನ ಹಾಗೂ ಬೆಂಬಲವನ್ನು ಸ್ಮರಿಸಲೇಬೇಕು. ಯುಪಿಎ ಸರ್ಕಾರದ ಆಹಾರ ಹಕ್ಕು ಕಾಯ್ದೆಯು ನಮ್ಮ ನಾಡಿನ ಪ್ರಗತಿಯ ಹಾದಿಗೆ ಹೊಸ ಆಯಾಮ ಕಲ್ಪಿಸಿಕೊಟ್ಟಿದೆ ಎಂದಿದ್ದಾರೆ.
ಮಾತಿಗಿಂತ ಕೃತಿ ಲೇಸೆಂಬ ನುಡಿಗಟ್ಟಿಗೆ ಅನ್ವರ್ಥದಂತೆ ಬದುಕಿದ ಓರ್ವ ಮುತ್ಸದ್ದಿ ನಾಯಕನನ್ನು ಕಳೆದುಕೊಂಡ ಭಾರತವಿಂದು ಬಡವಾಗಿದೆ. ಮೃತರ ಅವರ ಆತ್ಮಕ್ಕೆ ಚಿರಶಾಂತಿ ದೊರಕಲಿ, ಅವರ ಕುಟುಂಬ ವರ್ಗ ಮತ್ತು ಕೋಟ್ಯಂತರ ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿ ಸಿಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ತಿಳಿಸಿದ್ದಾರೆ.