ಕೆಪಿಸಿಸಿ ಅಧ್ಯಕ್ಷ ಸ್ಥಾನ ತೊರೆಯುತ್ತೇನೆ ಎಂದ ಡಿಸಿಎಂ

Share It

ಬೆಂಗಳೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರ ಮುನ್ನಲೆಗೆ ಬಂದಾಗಲೆಲ್ಲಾ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಯ ವಿಚಾರವೂ ಇತ್ತೀಚಿಗೆ ಜೋರಾಗಿ ಚರ್ಚೆಗೆ ಬರುತ್ತಿತ್ತು. ಸಿಎಂ ಸಿದ್ದರಾಮಯ್ಯನವರ ಆಪ್ತ ಬಣದಲ್ಲಿ ಗುರುತಿಸಿಕೊಂಡಿದ್ದ ಕೆಲವು ನಾಯಕರು ನೇರವಾಗಿ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಯ ವಿಚಾರದ ಬಗ್ಗೆ ಹೇಳಿಕೆಯನ್ನು ನೀಡಿದ್ದರು.

ಸಹಕಾರ ಸಚಿವ ಕೆ.ಎನ್.ರಾಜಣ್ಣ, ಲೋಕೋಪಯೋಗಿ ಇಲಾಖೆಯ ಸಚಿವ ಸತೀಶ್ ಜಾರಕಿಹೊಳಿ ಹೈಕಮಾಂಡ್ ಭೇಟಿಯಾಗಿ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಯ ವಿಚಾರವನ್ನು ಪ್ರಸ್ತಾವಿಸಿದ್ದರು. ಆದರೆ, ಕಾಂಗ್ರೆಸ್ ಹೈಕಮಾಂಡ್ ಕಡೆಯಿಂದ ಈ ಬಗ್ಗೆ ಯಾವುದೇ ಗ್ಯಾರಂಟಿ ಸಿಕ್ಕಿರಲಿಲ್ಲ.

ಈಗ, ಖುದ್ದು ಕೆಪಿಸಿಸಿ ಅಧ್ಯಕ್ಷರಾದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರೇ ಈ ವಿಚಾರಕ್ಕೆ ಸಂಬಂಧಿಸಿದಂತೆ ಸ್ಪಷ್ಟನೆಯನ್ನು ನೀಡಿದ್ದಾರೆ. ತಾವೇ ಆ ಸ್ಥಾನದಿಂದ ಕೆಳಗಿಳಿಯುವುದಾಗಿ ಹೇಳಿದ್ದಾರೆ. ಆ ಮೂಲಕ, ಕೆಪಿಸಿಸಿ ಅಧ್ಯಕ್ಷ ಸ್ಥಾನವನ್ನು ಬಯಸುತ್ತಿರುವವರಿಗೆ ಡಿಸಿಎಂ ಡಿ.ಕೆ.ಶಿ ಶುಭ ಸುದ್ದಿಯನ್ನು ನೀಡಿದ್ದಾರೆ.

“ನಾನು ದೊಡ್ಡ ಜವಾಬ್ದಾರಿಯಿಂದ ಮುಕ್ತನಾಗುತ್ತಿದ್ದೇನೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಆ ಮೂಲಕ, ಕೆಪಿಸಿಸಿ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯುವ ಬಗ್ಗೆ ಸ್ಪಷ್ಟ ವಾಕ್ಯದಲ್ಲಿ ಡಿಸಿಎಂ ಸ್ಪಷ್ಟನೆಯನ್ನು ನೀಡಿದ್ದಾರೆ. ಜೊತೆಗೆ, ಎಲ್ಲದಕ್ಕೂ ತಾಳ್ಮೆ ಮುಖ್ಯ ಎನ್ನುವುದನ್ನೂ ಸಾರಿ ಹೇಳಿದ್ದಾರೆ.

ಕೆಲವು ದಿನಗಳ ಹಿಂದೆ ಕಲಬುರಗಿಯಲ್ಲಿ ಮಾತನಾಡುತ್ತಿದ್ದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆಯ ಬಗ್ಗೆ ಹೇಳಿಕೆಯನ್ನು ನೀಡಿದ್ದರು. ಹಲವು ರಾಜ್ಯಗಳ ಅಧ್ಯಕ್ಷರನ್ನು ಬದಲಾವಣೆ ಮಾಡಲಾಗಿದೆ. ಕರ್ನಾಟಕದಲ್ಲೂ ಮಾಡಲಾಗುತ್ತದೆ ಎಂದು ಖರ್ಗೆ ಹೇಳಿದ್ದರು.

ಆದರೆ, ತಮ್ಮ ಹೇಳಿಕೆಯು ಮತ್ತೆ ಪರ-ವಿರೋಧ ಚರ್ಚೆಗೆ ನಾಂದಿ ಹಾಡುತ್ತಿದ್ದಂತೆಯೇ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆಯ ಬಗ್ಗೆ ನಾನು ಮಾತನಾಡಿಲ್ಲ ಎಂದು ಹೇಳಿದ್ದರು. ಈಗ, ಡಿಸಿಎಂ ಡಿ.ಕೆ.ಶಿವಕುಮಾರ್ ಅವರೇ ಬದಲಾವಣೆಯ ಬಗ್ಗೆ ಹೇಳಿಕೆಯನ್ನು ನೀಡಿರುವುದರಿಂದ, ಮತ್ತೆ ಈಗ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರ ಮುನ್ನಲೆಗೆ ಬಂದಿದೆ.

ನೂರು ಕಾಂಗ್ರೆಸ್ ಕಚೇರಿಗಳ ಶಂಕುಸ್ಥಾಪನೆಯ ನಂತರ ನಾನು ಮುಕ್ತನಾಗುತ್ತೇನೆ, ಆ ಬಳಿಕ ಯಾರು ಬೇಕಾದರೂ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಜವಾಬ್ದಾರಿಯನ್ನು ತೆಗೆದುಕೊಳ್ಳಬಹುದು. ಸಮಯ ಮತ್ತು ಸಂದರ್ಭಕ್ಕೆ ಅನುಗುಣವಾಗಿ ನಮ್ಮ ಪಕ್ಷದಲ್ಲಿ ಯೋಜನೆಗಳು ನಡೆಯುತ್ತವೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ರಾಜ್ಯಸಭೆಯಲ್ಲೂ ವಿಪಕ್ಷದ ನಾಯಕರಾಗಿದ್ದಾರೆ. ನಾನು ಕೂಡಾ, ಉಪಮುಖ್ಯಮಂತ್ರಿ ಜೊತೆಗೆ ಕೆಪಿಸಿಸಿ ಅಧ್ಯಕ್ಷನಾಗಿದ್ದೇನೆ. ಕೆಪಿಸಿಸಿ ಅಧ್ಯಕ್ಷ ಸ್ಥಾನದಿಂದ ಮುಕ್ತನಾಗುತ್ತೇನೆ, ಸ್ವಲ್ಪ ತಾಳ್ಮೆಯಿಂದ ಕಾಯಿರಿ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷರು ಮತ್ತು ಪದಾಧಿಕಾರಿಗಳನ್ನು ಉದ್ದೇಶಿಸಿ ಮಾತನಾಡುತ್ತಿದ್ದ ಡಿಸಿಎಂ ಡಿ.ಕೆ.ಶಿವಕುಮಾರ್, ಜಿಲ್ಲಾ ಪಂಚಾಯತಿ ಸೇರಿದಂತೆ ಸ್ಥಳೀಯ ಸಂಸ್ಥೆಗಳ ಚುನಾವಣೆಯೂ ನಡೆಯಲಿದೆ, ಜೊತೆಗೆ, ಪಕ್ಷದ 100 ಕಚೇರಿಗೆ ಶಂಕುಸ್ಥಾಪನೆ ನೆರವೇರಿಸುವ ಗುರಿಯನ್ನು ಹೊಂದಿದ್ದೇನೆ. ಇದಾದ ಮೇಲೆ ಕೆಳಗಿಳಿಯಲಿದ್ದೇನೆ ಎಂದು ಹೇಳಿದ್ದಾರೆ.
ಆ ಮೂಲಕ, ಮುಂದಿನ ಕೆಪಿಸಿಸಿ ಅಧ್ಯಕ್ಷರು ಯಾರು? ಎನ್ನುವ ಚರ್ಚೆಗೂ ಡಿಸಿಎಂ ನಾಂದಿ ಹಾಡಿದಂತಾಗಿದೆ.


Share It

You May Have Missed

You cannot copy content of this page