ರಾಜಕೀಯ ಸುದ್ದಿ

ಸ್ಮಾರ್ಟ್ ಮೀಟರ್ ನಲ್ಲಿ 7,500 ಕೋಟಿ ರೂ. ಹಗರಣ: ನಿಖಿಲ್ ಕುಮಾರಸ್ವಾಮಿ ಆರೋಪ

Share It

ಬೆಂಗಳೂರು: ರಾಜ್ಯದಲ್ಲಿ ಹೊಸ ವಿದ್ಯುತ್‌ ಸಂಪರ್ಕಕ್ಕೆ ಸ್ಮಾರ್ಟ್‌ ಮೀಟರ್‌ ಕಡ್ಡಾಯ ಮಾಡುವ ಜತೆಗೆ ಸ್ಮಾರ್ಟ್‌ ಮೀಟರ್‌ಗಳಿಗೆ ದುಬಾರಿ ದರ ನಿಗದಿ ಮಾಡಿ ರಾಜ್ಯ ಕಾಂಗ್ರೆಸ್ ಸರ್ಕಾರ ಹಗಲು ದರೋಡೆ ಮಾಡುತ್ತಿದೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಆರೋಪಿಸಿದ್ದಾರೆ.

ಈ ಬಗ್ಗೆ ನಗರದಲ್ಲಿಂದು ಮಾಧ್ಯಮಗಳಿಗೆ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

39 ಲಕ್ಷ ಸ್ಮಾರ್ಟ್ ಮೀಟರ್‌ಗಳನ್ನು ದುಬಾರಿ ಬೆಲೆಗೆ ಖರೀದಿಸಲಾಗುತ್ತಿದ್ದು, ಇದರಿಂದಾಗಿ ರಾಜ್ಯಸರ್ಕಾರದ ಖಜಾನೆಯ ಮೇಲೆ ಆರ್ಥಿಕ ಹೊರೆ ಬೀಳುತ್ತಿದೆ. ಇದೊಂದು ಹಗರಣ ಎಂದು ನಿಖಿಲ್ ಅವರು ಆರೋಪಿಸಿದರು.

1,500 ರೂ. ಮಾರುಕಟ್ಟೆಯಲ್ಲಿ ಲಭ್ಯವಿರುವ ಸರಳ ಸ್ಮಾರ್ಟ್ ಮೀಟರ್ ಅನ್ನು 4,998 ರೂ ಬೆಲೆಗೆ ಹೇಗೆ ಖರೀದಿಸಲಾಗುತ್ತಿದೆ ಎಂದು ಪ್ರಶ್ನಿಸಿರುವ ನಿಖಿಲ್ ಕುಮಾರಸ್ವಾಮಿ, ಹೆಚ್ಚುವರಿ ಹಣ ಎಲ್ಲಿಗೆ ಹೋಗುತ್ತಿದೆ? ಈ ಹಗಲು ದರೋಡೆಯಿಂದ ಯಾರು ಲಾಭ ಪಡೆಯುತ್ತಿದ್ದಾರೆ? ಎಂದು ಪ್ರಶ್ನಿಸಿದ್ದಾರೆ.

ಕೆಟಿಟಿಪಿ ನಿಯಮ ಉಲ್ಲಂಘಿಸಿ ಅನರ್ಹರಿಗೆ ಟೆಂಡರ್‌ ನೀಡಿ 7,500 ಕೋಟಿ ರೂ. ಬೃಹತ್‌ ಹಗರಣ ನಡೆದಿದ್ದು, ಈ ಬಗ್ಗೆ ತನಿಖೆ ನಡೆಸಬೇಕು ಎಂದು ನಿಖಿಲ್ ಕುಮಾರಸ್ವಾಮಿ ರಾಜ್ಯದ ಕಾಂಗ್ರೆಸ್ ಸರ್ಕಾರವನ್ನು ಆಗ್ರಹಿಸಿದರು.


Share It

You cannot copy content of this page