SC/ST ಕಲಾವಿದರಿಗೆ ಸರಕಾರದ ಗುಡ್ ನ್ಯೂಸ್: ಜಿಲ್ಲಾವಾರು ಕಾರ್ಯಕ್ರಮಗಳ ಆಯೋಜನೆಗೆ ಅಸ್ತು
ಬೆಳಗಾವಿ: ರಾಜ್ಯದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜಾನಪದ ಕಲಾವಿದರನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಹೇಳಿದರು.
ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನಸಭೆಯಲ್ಲಿ ಶಾಸಕ ಡಾ. ಅಶ್ವತ್ಥ ನಾರಾಯಣ ಹಾಗೂ ಆರ್ ಅಶೋಕ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಅವರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಪ್ರಸ್ತುತ ಕಷ್ಟದ ಪರಿಸ್ಥಿತಿಯಲ್ಲಿರುವ 11,154 ಕಲಾವಿದರು, ಸಾಹಿತಿಗಳಿಗೆ ತಿಂಗಳಿಗೆ ರೂ. 2500 ದಂತೆ ಮಾಸಾಶನ ನೀಡಲಾಗುತ್ತಿದೆ. ಅಲ್ಲದೆ 410 ಜನ ಮೃತ ಕಲಾವಿದರ ಪತ್ನಿಯರಿಗೂ ಮಾಸಿಕ 500 ರೂ. ಮಾಸಾಶನ ಪಾವತಿಸಲಾಗುತ್ತಿದೆ. ಪ್ರಸಕ್ತ ವರ್ಷದ ನವೆಂಬರ್ ತಿಂಗಳಿನವರೆಗೂ ಮಾಸಾಶನ ಪಾವತಿಸಲಾಗಿದೆ. ಮಾಸಾಶನ ಮಂಜೂರಾತಿಗಾಗಿ ಅರ್ಜಿ ಸಲ್ಲಿಸಿದ 1896 ಕಲಾವಿದರು, ಸಾಹಿತಿಗಳಿಗೂ ಕೂಡ ಮಾಸಾಶನ ಮಂಜೂರು ಮಾಡಲಾಗಿದೆ ಎಂದರು.
ಜಾನಪದ ಜಾತ್ರೆ ಕಾರ್ಯಕ್ರಮವನ್ನು ಸ್ಥಗಿತಗೊಳಿಸಿಲ್ಲ. ಈ ವರ್ಷ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಕಲಾವಿದರಿಗೆ ಪ್ರೋತ್ಸಾಹ ನೀಡಬೇಕು, ಸ್ಥಳೀಯ ಕಲೆಗಳನ್ನು ಉಳಿಸಿ ಬೆಳೆಸುವ ಉದ್ದೇಶದಿಂದ ಚಿತ್ರದುರ್ಗ, ವಿಜಯಪುರ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ದೊಡ್ಡ ಮಟ್ಟದಲ್ಲಿ ವಿಶೇಷ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲು ನಿರ್ಧರಿಸಲಾಗಿದ್ದು, ದಿನಾಂಕಗಳನ್ನು ಶೀಘ್ರ ನಿಗದಿಪಡಿಸಲಾಗುವುದು ಎಂದರು.


