ಬಿಪಿಎಲ್ ಕಾರ್ಡ್ದಾರರಿಗೆ ಸರಕಾರದ ಸಿಹಿಸುದ್ದಿ: ಆದಾಯ ಮಿತಿ ಪರಿಷ್ಕರಣೆಗೆ ಚಿಂತನೆ, ಕಾರ್ಡ್ ರದ್ದು ಮಾಡದಂತೆ ಸೂಚನೆ

Share It

ಬೆಳಗಾವಿ: ಬಿಪಿಎಲ್ ಕಾರ್ಡ್ ದಾರರಿಗೆ ಸರಕಾರ ಸಿಹಿಸುದ್ದಿಯೊಂದನ್ನು ನೀಡಿದ್ದು, ಕಾರ್ಡ್ ಹೊಂದಲು ನಿಗದಿಪಡಿಸಿದ್ದ ಆದಾಯಮಿತಿಯ ಪರಿಷ್ಕರಣೆಗೆ ಸರಕಾರ ಮುಂದಾಗಿದೆ ಎಂದು ಆಹಾರ ನಾಗರಿಕ ಸರಬರಾಜು ಸಚಿವ ಕೆ.ಹೆಚ್.ಮುನಿಯಪ್ಪ ಹೇಳಿದರು.

ವಿಧಾನಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯಕ್ ಹಾಗೂ ಶ್ರವಣಬೆಳಗೊಳ ಶಾಸಕ ಬಾಲಕೃಷ್ಣ ಸಿ.ಎನ್. ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಅವರು, ಕೇಂದ್ರ ಸರ್ಕಾರ ಬಿಪಿಎಲ್ ಕಾರ್ಡ್ದಾರರ ಆದಾಯ ಮಿತಿಯನ್ನು 1.20 ಲಕ್ಷ ರೂ.ಗಳಿಗೆ ಮಿತಿಗೊಳಿಸಿದೆ. ಆದರೆ, ಕೂಲಿ ಕೆಲಸಗಾರರಿಗೂ ನಿತ್ಯ 500 ರೂ. ಕೂಲಿ ದೊರೆಯುತ್ತದೆ. ಇದರ ಆಧಾರದಲ್ಲಿ ಕೂಲಿ ಮಾಡುವವರ ಆದಾಯವೂ ವರ್ಷಕ್ಕೆ 1.80 ಲಕ್ಷ ರೂ.ಗಳಿಗೂ ಅಧಿಕವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪರಿಷ್ಕರಿಸಲು ಚಿಂತನೆ ನಡೆದಿದೆ ಎಂದರು.

ಕೇಂದ್ರ ಸರ್ಕಾರ ರಾಜ್ಯದಲ್ಲಿ 7,75,206 ಶಂಕಾಸ್ಪದ ಪಡಿತರ ಫಲಾನುಭವಿಗಳನ್ನು ಗುರುತಿಸಿದೆ. ರಾಜ್ಯದಲ್ಲಿ 4.53 ಲಕ್ಷ ಬಿಪಿಎಲ್ ಹಾಗೂ 1.25 ಲಕ್ಷ ಎಪಿಎಲ್ ಕಾರ್ಡ್ ಹೊಂದಿರುವ ಕುಟುಂಬಗಳಿವೆ. ರಾಜ್ಯದ ಜನಸಂಖ್ಯೆಗೆ ಹೊಲಿಸಿದರೆ ಶೇ.೭೩ರಷ್ಟು ಕುಟುಂಬಗಳು ಬಿಪಿಎಲ್ ಕಾರ್ಡ್ ಪಡೆದಿವೆ. ರಾಜ್ಯವು ಜಿಎಸ್‌ಟಿ ಪಾವತಿ, ಆದಾಯ ತೆರಿಗೆ ಪಾವತಿಯಲ್ಲಿ ದೇಶದಲ್ಲಿ ಮುಂಚೂಣಿಯಲ್ಲಿದೆ. ಈ ಅಂಶ ಪರಿಗಣಿಸಿದರೆ ಬಿಪಿಎಲ್ ಕುಟುಂಬಗಳ ಪ್ರಮಾಣ ಶೇ.50ರಷ್ಟು ಇರಬೇಕಿತ್ತು. ಆದರೆ, ಇದಕ್ಕೂ ಹೆಚ್ಚಿನ ಕುಟುಂಬ ಬಿಪಿಎಲ್ ಕಾರ್ಡ್ ಪಡೆದಿವೆ ಎಂದು ವಿವರಿಸಿದರು.

ಕಾರ್ಡ್ ರದ್ದು ಮಾಡದಂತೆ ಸೂಚನೆ: ರಾಜ್ಯದಲ್ಲಿ ಆದ್ಯತಾ ಪಡಿತರ ಚೀಟಿಗಳನ್ನು ಪಡೆಯುವ ಹಾಗೂ ಹೊರಗಿಡುವ ಬಗ್ಗೆ 2017ರಲ್ಲಿ ಮಾನದಂಡಗಳನ್ನು ರೂಪಿಸಿದೆ. ಇದರ ಅನ್ವಯ ಸರ್ಕಾರಿ, ಅನುದಾನಿತ ಸಂಸ್ಥೆಗಳು, ಮಂಡಳಿ, ನಿಗಮ, ಸ್ವಾಯತ್ತ ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿರುವ ನೌಕರರು, ಆದಾಯ, ಸೇವಾ ಹಾಗೂ ಜಿಎಸ್‌ಟಿ ತೆರಿಗೆ ಪಾವತಿ ಮಾಡುವ ಕುಟುಂಬಗಳಿಗೆ ಬಿಪಿಎಲ್ ಕಾರ್ಡ್ ನೀಡುವುದಿಲ್ಲ. ಆದಾಯ ಮಿತಿ ಪರಿಷ್ಕರಣೆಗೆ ಚಿಂತನೆ ನಡೆಸಿರುವುದರಿಂದ, ತಾತ್ಕಾಲಿಕವಾಗಿ ಯಾವುದೇ ಬಿಪಿಎಲ್ ಕಾರ್ಡ್ಗಳನ್ನು ರದ್ದು ಮಾಡದಂತೆ ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ಎಂದು ಸಚಿವ ಕೆ.ಹೆಚ್.ಮುನಿಯಪ್ಪ ಹೇಳಿದರು.

ಸದ್ಯ ವೈದ್ಯಕೀಯ ಆಧಾರದಲ್ಲಿ ಮಾತ್ರ ಬಿಪಿಎಲ್ ಕಾರ್ಡ್ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಒಂದು ವೇಳೆ ಕುಟುಂಬದ ಸದಸ್ಯರು ನೌಕರಿಗೆ ಸೇರಿದ್ದಾರೆ ಎನ್ನುವ ಕಾರಣದಿಂದ ಬಿಪಿಎಲ್ ಕಾರ್ಡ್ ರದ್ದಾಗಿದ್ದರೆ, ಬಾದಿತ ಕುಟುಂಬದವರು ನೌಕರಿಗೆ ಸೇರಿದವರು ತಮ್ಮೊಂದಿಗೆ ವಾಸವಾಗಿಲ್ಲ ಎನ್ನುವ ಕಾರಣ ನೀಡಿ, ಸಂಬಂಧಪಟ್ಟ ತಹಶೀಲ್ದಾರರಿಗೆ ಅರ್ಜಿ ಸಲ್ಲಿಸಿದರೆ, 15 ದಿನದ ಒಳಗಾಗಿ ಬಿಪಿಎಲ್ ಕಾರ್ಡ್ ನೀಡಲಾಗುವುದು ಎಂದರು.


Share It

You May Have Missed

You cannot copy content of this page