ಬೆಂಗಳೂರು: ಹಿಂದೂಗಳ ಪವಿತ್ರ ಧಾರ್ಮಿಕ ಕೇಂದ್ರವಾದ ಶ್ರೀ ಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ರಾಜ್ಯದ ವಿವಿಧ ಭಾಗಗಳಿಂದ ಆಗಮಿಸುವ ಭಕ್ತರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಧಾರ್ಮಿಕ ಇಲಾಖೆ ವಿವಿಧ ಮೂಲಭೂತಸೌಕರ್ಯಗಳನ್ನು ಒದಗಿಸಲು ರೂ. 604.65 ಕೋಟಿ ವೆಚ್ಚದ ಮಾಸ್ಟರ್ ಪ್ಲಾನ್ ರೂಪಿಸಿದೆ.
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಪ್ರತಿದಿನ ಕರ್ನಾಟಕ ಸೇರಿದಂತೆ ದೇಶದ ವಿವಿಧ ಭಾಗಗಳಿಂದ ಸುಮಾರು 25 ಸಾವಿರಕ್ಕೂ ಹೆಚ್ಚು ಭಕ್ತರು ಆಗಮಿಸಿ ದರ್ಶನ ಪಡೆಯುತ್ತಾರೆ. ಹೀಗೆ ವಿವಿಧ ಭಾಗಗಳಿಂದ ಬರುವ ಭಕ್ತರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಹಾಗೂ ಪರಿಸರದ ಸಮಗ್ರ ಅಭಿವೃದ್ಧಿಗಾಗಿ ಮಾಸ್ಟರ್ ಪ್ಲಾನ್ ರೂಪಿಸಿ ಮೂರು ಹಂತಗಳಲ್ಲಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ತೀರ್ಮಾನಿಸಲಾಗಿದೆ.
ಕಳೆದ ಮೇ 7 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಕುಕ್ಕೆ ಶ್ರೀ ಸುಬ್ರಮಣ್ಯ ದೇವಸ್ಥಾನ ಸಮಗ್ರ ಅಭಿವೃದ್ಧಿಗೆ ಅನುಮೋದನೆ ನೀಡಲಾಗಿದೆ.
ಮುಜರಾಯಿ ಸಚಿವ ರಾಮಲಿಂಗ ರೆಡ್ಡಿ ಅವರ ವಿಶೇಷ ಕಾಳಜಿ ಹಾಗೂ ಭಕ್ತರಿಗೆ ಅನುಕೂಲ ಕಲ್ಪಿಸಿ ಕೊಡಬೇಕೆಂಬ ಕಾಳಜಿಯಿಂದ ಶ್ರೀ ಕ್ಷೇತ್ರದಲ್ಲಿ ರೂ. 604.65 ಕೋಟಿ ವೆಚ್ಚದಲ್ಲಿ ಒಟ್ಟು ಒಟ್ಟು 19 ಕಾಮಗಾರಿಗಳ ನಡೆಸಲು ತೀರ್ಮಾನಿಸಲಾಗಿದೆ.
ದೇವಳದ ಸುತ್ತುಪೌಳಿ ಮರುನಿರ್ಮಾಣ. ಯಾಗಶಾಲೆಗಳು, ವಸತಿಗೃಹ ಕಟ್ಟಡಗಳು, ಡಾರ್ಮಿಟರಿ ಕಟ್ಟಡಗಳು, ಸಿಬ್ಬಂದಿಗಳ ವಾಸ್ತವ್ಯಕ್ಕಾಗಿ ವಸತಿಗೃಹ ಕಟ್ಟಡಗಳು, ಅನ್ನದಾಸೋಹ ಭವನ. ಪಾರಂಪರಿಕ ರಥಬೀದಿ ಅಭಿವೃದ್ಧಿ ವಾಣಿಜ್ಯ ಸಂಕೀರ್ಣ ಕಟ್ಟಡ ಹಾಗೂ ಆಶ್ಲೇಷಬಲಿ ಮಂಟಪ ಸೇರಿದಂತೆ ಒಟ್ಟು 19 ಕಾಮಗಾರಿಗಳ ಅಂದಾಜು ಪಟ್ಟಿ ಮತ್ತು ನಕ್ಷೆಗೆ ಕಾರ್ಯಪಾಲಕ ಅಭಿಯಂತರರು, ಲೋಕೋಪಯೋಗಿ ಇಲಾಖೆ, ಮಂಗಳೂರು ವಿಭಾಗ, ಇವರು ತಯಾರಿಸಿರುವ ರೂ. 604.65 ಕೋಟಿ ವೆಚ್ಚದಲ್ಲಿ ಕೈಗೊಳ್ಳಲು ಉದ್ದೇಶಿಸಲಾಗಿದೆ.
ಮುಜರಾಯಿ ಸಚಿವರಾದ ಶ್ರೀ ರಾಮಲಿಂಗ ರೆಡ್ಡಿ ಅವರ ಅಧ್ಯಕ್ಷತೆಯಲ್ಲಿ ದಿನಾಂಕ 17.09.2025 ರಂದು ನಡೆದ 29, 30 ಹಾಗೂ 31ನೇ ಮಾಸ್ಟರ್ ಪ್ಲಾನ್ ಮೇಲ್ವಿಚಾರಣಾ ಸಮಿತಿ ಸಭೆಯಲ್ಲಿ ಚರ್ಚಿಸಿ ತೆಗೆದುಕೊಂಡ ತೀರ್ಮಾನಗಳಂತೆ ಲೋಕೋಪಯೋಗಿ ಇಲಾಖೆಯು ಪ್ರಚಲಿತ ದರಪಟ್ಟಿಯಂತೆ ಒಟ್ಟು ರೂ. 604.65 ಕೋಟಿ ಮೊತ್ತದ ಅಂದಾಜುಪಟ್ಟಿಗಳನ್ನು ತಯಾರಿಸಿ ಸಲ್ಲಿಸಲಾಗಿತ್ತು.
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನವು ಧಾರ್ಮಿಕ ದತ್ತಿ ಇಲಾಖೆಯ ಅಡಿಯಲ್ಲಿ ಬರುವ ಪ್ರವರ್ಗ- ಎ ವ್ಯಾಪ್ತಿಯಲ್ಲಿ ಬರುತ್ತದೆ. . ಇಲ್ಲಿಗೆ ದಿನಂಪ್ರತಿ ಸರಾಸರಿ 25,000ಕ್ಕೂ ಅಧಿಕ ಭಕ್ತರು ವಿವಿಧ ರಾಜ್ಯಗಳಿಂದ ಹಾಗೂ ವಿದೇಶಗಳಿಂದ ಆಗಮಿಸಿ ದೇವರ ದರ್ಶನ ಮತ್ತು ವಿವಿಧ ಸೇವೆಗಳನ್ನು ಕೈಗೊಳ್ಳುತ್ತಿದ್ದಾರೆ. ಭಕ್ತಾದಿಗಳ ಅನುಕೂಲಕ್ಕಾಗಿ ಪ್ರಸ್ತುತ ಇರುವ ಮೂಲಸೌಕರ್ಯಗಳನ್ನು ಅಭಿವೃದ್ಧಿಗೊಳಿಸುವ ಅನಿವಾರ್ಯತೆ ಇರುತ್ತದೆ ಇದೆ ಎನ್ನುತ್ತಾರೆ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರು.
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಹಾಗೂ ಪರಿಸರದ ಸಮಗ್ರ ಅಭಿವೃದ್ಧಿಗಾಗಿ ಮಾಸ್ಟರ್ ಪ್ಲಾನ್ ಯೋಜನೆಯನ್ನು ರೂಪಿಸಿ, ಮೂರು ಹಂತಗಳಲ್ಲಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳುವ ಬಗ್ಗೆ ತೀರ್ಮಾನಿಸಲಾಗಿರುತ್ತದೆ. ಸದರಿ ಕಾಮಗಾರಿಗಳ ಅನುಷ್ಠಾನಕ್ಕಾಗಿ ಮಾಸ್ಟರ್ ಪ್ಲಾನ್ ಮೇಲ್ವಿಚಾರಣಾ ಸಮಿತಿಯನ್ನು ರೂಪಿಸಲಾಗಿದ್ದು, ಲೋಕೋಪಯೋಗಿ ವಿಶೇಷ ಉಪವಿಭಾಗ ಕಛೇರಿಯನ್ನು ತೆರೆಯಲಾಗಿದೆ.
ಮಾಸ್ಟರ್ ಪ್ಲಾನ್ ಯೋಜನೆಯ ಮೊದಲನೇ ಹಂತದಲ್ಲಿ 9 ವಿವಿಧ ಕಟ್ಟಡ ಕಾಮಗಾರಿಗಳನ್ನು, ಜಿಲ್ಲಾಧಿಕಾರಿ, ದಕ್ಷಿಣ ಕನ್ನಡ ಜಿಲೆ ಇವರು ಪ್ರಸ್ತಾವನೆಯಲ್ಲಿ ತಿಳಿಸಿರುವಂತೆ ಕಾರ್ಯನಿರ್ವಹಣಾಧಿಕಾರಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಸುಬ್ರಹ್ಮಣ್ಯ, ಕಡಬ ತಾಲ್ಲೂಕು, ದಕ್ಷಿಣ ಕನ್ನಡ ಜಿಲ್ಲೆ ಇವರ ಪ್ರಸ್ತಾವನೆಯಲ್ಲಿ ದೇವಳದ ಸಮಗ್ರ ಅಭಿವೃದ್ಧಿ ಮಾಸ್ಟರ್ ಪ್ಲಾನ್ ಯೋಜನೆಯ ಮೂರನ ಹಂತದಲ್ಲಿ ಕೈಗೊಳ್ಳಲು ಉದ್ದೇಶಿಸಿದೆ.
ವಿರೋಧ ಪಕ್ಷಗಳು ಮತಕ್ಕಾಗಿ ಹೇಳುವ ಸುಳ್ಳುಗಳನ್ನು ಜನ ನಂಬಬಾರದು ಎಲ್ಲ ಧರ್ಮದವರ ಪರವಾಗಿ ಕೆಲಸ ಮಾಡುವುದೇ ಕಾಂಗ್ರೆಸ್ ಸರ್ಕಾರದ ಧ್ಯೇಯ.
ರಾಮಲಿಂಗಾರೆಡ್ಡಿ

