ಉಪಯುಕ್ತ ಸುದ್ದಿ

ವಾರ್ಡ್ ರಸ್ತೆ ಅಭಿವೃದ್ಧಿಗಾಗಿ 2000 ಕೋಟಿ ರೂ. ವಿಶೇಷ ಅನುದಾನ ಬಿಡುಗಡೆ : ಕೃಷ್ಣ ಬೈರೇಗೌಡ

Share It

ಬೆಂಗಳೂರು: ಜಿಬಿಎ ವ್ಯಾಪ್ತಿಯ 5 ನಗರ ಪಾಲಿಕೆಗಳಲ್ಲಿ ವಾರ್ಡ್ ರಸ್ತೆಗಳನ್ನು ಸುಧಾರಿಸಿ ಅಭಿವೃದ್ಧಿಪಡಿಸಲು 2000 ಕೋಟಿ ರೂ. ವಿಶೇಷ ಅನುದಾನ ಬಿಡುಗಡೆ ಮಾಡಲಾಗಿದೆ. ಹಾಳಾಗಿರುವ ವಾರ್ಡ್ ರಸ್ತೆಗಳನ್ನು ಗುರುತಿಸಿ ಅಲ್ಪಾವಧಿಯ ಟೆಂಡರ್ ಕರೆದು ಕಾಮಗಾರಿ ಪ್ರಾರಂಭಿಸಲು ಸೂಚನೆ ನೀಡಲಾಗಿದೆ ಎಂದು *ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವರಾದ ಕೃಷ್ಣ ಬೈರೇಗೌಡ* ಅವರು ತಿಳಿಸಿದರು.

ಜಿಬಿಎ ವ್ಯಾಪ್ತಿಯಲ್ಲಿ ಘನತ್ಯಾಜ್ಯ ನಿರ್ವಹಣೆ ಕುರಿತು ನಡೆದ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೊಸ ಸರ್ಕಾರ ಅಧಿಕಾರ ಸ್ವೀಕರಿಸಿದ ನಂತರ ಜನರ ನಿರೀಕ್ಷೆಗಳು ಸಾಕಷ್ಟಿದ್ದು, ಅವರ ನಿರೀಕ್ಷೆಗಳಿಗೆ ತಕ್ಕಂತೆ ಕೆಲಸ ಮಾಡಲು ಸರ್ಕಾರ ಹಲವು ಯೋಜನೆಗಳನ್ನು ರೂಪಿಸಿಕೊಂಡಿದೆ. ಅದರಂತೆ, ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ಪ್ರಮುಖ ತೀರ್ಮಾನವನ್ನು ಕೈಗೊಳ್ಳಲಾಗಿದ್ದು, ಅದನ್ನು ತ್ವರಿತವಾಗಿ ಹಾಗೂ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಸೂಚನೆ ನೀಡಲಾಗಿದೆ ಎಂದರು.

ಬೆಂಗಳೂರಿನಲ್ಲಿ ರಸ್ತೆಗಳ ಪರಿಸ್ಥಿತಿಯನ್ನು ಸುಧಾರಿಸಬೇಕೆಂಬುದು ಜನರ ಪ್ರಮುಖ ನಿರೀಕ್ಷೆಯಾಗಿದೆ. ಈ ನಿಟ್ಟಿನಲ್ಲಿ ಪ್ರಮುಖ ರಸ್ತೆಗಳಾದ ಆರ್ಟಿರಿಯಲ್ ಹಾಗೂ ಸಬ್ ಆರ್ಟಿರಿಯಲ್ ರಸ್ತೆಗಳನ್ನು ಹೊರತುಪಡಿಸಿ, ಹದಗೆಟ್ಟಿರುವ ವಾರ್ಡ್ ರಸ್ತೆಗಳನ್ನು ಅಭಿವೃದ್ಧಿಪಡಿಸಲು 2000 ಕೋಟಿ ರೂ. ವಿಶೇಷ ಅನುದಾನ ಬಿಡುಗಡೆ ಮಾಡಲಾಗಿದೆ. 5 ನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಹಾಳಾಗಿರುವ ವಾರ್ಡ್ ರಸ್ತೆಗಳನ್ನು ಗುರುತಿಸಿ, ಅವುಗಳಿಗೆ ಹೊಸದಾಗಿ ಡಾಂಬರೀಕರಣ ಮಾಡಲು ಅಂದಾಜು ಪಟ್ಟಿ ತಯಾರಿಸಿ, ಅಲ್ಪಾವಧಿಯ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಿ ಕೂಡಲೇ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲು ಸರ್ಕಾರದಿಂದ ಇಂದು ಆದೇಶ ಹೊರಡಿಸಲಾಗಿದೆ ಎಂದು ಹೇಳಿದರು.

ಜಿಬಿಎ ಮುಖ್ಯ ಆಯುಕ್ತರು ಹಾಗೂ 5 ನಗರ ಪಾಲಿಕೆಗಳ ಆಯುಕ್ತರು ತಮ್ಮ ವ್ಯಾಪ್ತಿಯ ಹದಗೆಟ್ಟಿರುವ ರಸ್ತೆಗಳನ್ನು ಪಟ್ಟಿ ಮಾಡಬೇಕು. ಅಗತ್ಯವಿರುವ ಎಲ್ಲಾ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿ ಆದಷ್ಟು ಶೀಘ್ರದಲ್ಲಿ ಕಾಮಗಾರಿಗಳನ್ನು ಆರಂಭಿಸಬೇಕು. ಎಲ್ಲಾ ಅಧಿಕಾರಿಗಳು ಆದ್ಯತೆ ಮೇರೆಗೆ ಕೆಲಸ ಪ್ರಾರಂಭಿಸಲು ಸೂಚನೆ ನೀಡಿದ್ದೇನೆ ಎಂದು ಹೇಳಿದರು.

ವಾರ್ಡ್ ರಸ್ತೆಗಳ ಅಂದಾಜು ಹಾಗೂ ಟೆಂಡರ್ ಪ್ರಕ್ರಿಯೆಯನ್ನು ಮುಂದಿನ ಎರಡು ತಿಂಗಳೊಳಗೆ ಪೂರ್ಣಗೊಳಿಸಿ, ನಾಲ್ಕರಿಂದ ಆರು ತಿಂಗಳ ಅವಧಿಯಲ್ಲಿ ಕಾಮಗಾರಿಗಳನ್ನು ಮುಗಿಸುವ ಗುರಿ ಹೊಂದಿದ್ದೇವೆ. ಮಳೆಗಾಲ ಗಮನದಲ್ಲಿಟ್ಟುಕೊಂಡು, ಗುಣಮಟ್ಟಕ್ಕೆ ಯಾವುದೇ ಧಕ್ಕೆಯಾಗದಂತೆ ಮಳೆ ಇಲ್ಲದ ಅವಧಿಯಲ್ಲಿ ಅಗತ್ಯ ಕಾಮಗಾರಿಗಳನ್ನು ಕೈಗೊಳ್ಳಲಾಗುವುದು.

ಪ್ರಮಾಣಿತ ಕಾರ್ಯವಿಧಾನ (SOP) ಅನುಸಾರ ಸಂಬಂಧಿತ ಎಲ್ಲಾ ಅಂಗಸಂಸ್ಥೆಗಳೊಂದಿಗೆ ಸಮನ್ವಯ ಸಾಧಿಸಿ ಡಾಂಬರೀಕರಣ ಕಾಮಗಾರಿ ಕೈಗೊಳ್ಳಲಾಗುವುದು. ಪೂರ್ವಾನುಮತಿ ಇಲ್ಲದೆ ರಸ್ತೆಗಳನ್ನು ಅಗೆಯದಂತೆ ಕಟ್ಟುನಿಟ್ಟಿನ ಕ್ರಮ ವಹಿಸಲಾಗುವುದು.

ರಸ್ತೆ ಡಾಂಬರೀಕರಣ ಕಾಮಗಾರಿ ನಡೆಯುವ ಸಂದರ್ಭದಲ್ಲಿ ನಾನು ಸ್ವತಃ ಸ್ಥಳ ಪರಿಶೀಲನೆ ನಡೆಸುತ್ತೇನೆ. ಅಧಿಕಾರಿಗಳಿಗೂ ನಿಯಮಿತ ಪರಿಶೀಲನೆ ನಡೆಸುವಂತೆ ಸೂಚಿಸಲಾಗಿದೆ. ರಸ್ತೆ ಗುಣಮಟ್ಟವನ್ನು ಹೆಚ್ಚಿಸುವುದು ನಮ್ಮ ಆದ್ಯತೆಯಾಗಿದ್ದು, ಗುಣಮಟ್ಟದಲ್ಲಿ ಯಾವುದೇ ರಾಜಿ ಇರುವುದಿಲ್ಲ.


Share It

You cannot copy content of this page