ಬೆಂಗಳೂರು: ಸಚಿವ ಸ್ಥಾನದ ಮೇಲೆ ಕಣ್ಣಿಟ್ಟಿದ್ದ ಗುಬ್ಬಿ ಶ್ರೀನಿವಾಸ್ ಅವರಿಗೆ ಸಚಿವ ಸ್ಥಾನ ಮಿಸ್ ಆದ ಹಿನ್ನೆಲೆಯಲ್ಲಿ ಅವರು, ತಮ್ಮ ಕೆಎಸ್ಆರ್ಟಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಡಿ.ಕೆ.ಶಿವಕುಮಾರ್ ಅವರ ಸಂಪುಟದಲ್ಲಿ ಗುಬ್ಬಿ ಶ್ರೀನಿವಾಸ್ ಸ್ಥಾನ ಪಡೆಯುತ್ತಾರೆ ಎಂದು ಹೇಳಲಾಗಿತ್ತು. ಆದರೆ, ಅವರನ್ನು ಕೈಬಿಡಲಾಗಿದೆ. ಈ ಹಿನ್ನೆಲೆಯಲ್ಲಿ ಅಸಮಾಧಾನಗೊಂಡಿರುವ ಶ್ರೀನಿವಾಸ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ.
ಸರಕಾರ ಅಸ್ತಿತ್ವಕ್ಕೆ ಬಂದಾಗಲೇ ಶ್ರೀನಿವಾಸ್ ಸಿದ್ದರಾಮಯ್ಯ ಅವರ ಸಂಪುಟ ಸೇರಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ, ಡಿ.ಕೆ.ಶಿವಕುಮಾರ್ ಬೆಂಬಲಿಗರಾಗಿದ್ದ ಕಾರಣಕ್ಕೆ ಅವರನ್ನು ಕಡೆಗಣಿಸಲಾಯಿತು ಎಂದು ಹೇಳಲಾಗಿತ್ತು. ಆದರೆ, ಡಿ.ಕೆ.ಶಿವಕುಮಾರ್ ಸಿಎಂ ಆಗುತ್ತಿದ್ದಂತೆ ಅವರು ಸ್ಥಾನ ನೀಡಲಿದ್ದಾರೆ ಎಂಬುದು ಸುಳ್ಳಾಗಿದೆ.
ಎರಡನೇ ಹಂತದ ಸಂಪುಟ ರಚನೆ ವೇಳೆಯಲ್ಲಿ ಶ್ರೀನಿವಾಸ್ ಅವರಿಗೆ ಸ್ಥಾನ ಸಿಗುವುದು ಖಚಿತ ಎಂದು ಹೇಳಲಾಗಿತ್ತಾದರೂ, ನೆನ್ನೆ ಬಿಡುಗಡೆಯಾದ ಪಟ್ಟಿಯಲ್ಲಿ ಅವರ ಹೆಸರು ಕಾಣಿಸಲಿಲ್ಲ. ಇದರಿಂದ ಬೇಸರಗೊಂಡಿದ್ದ ಅವರು ತಮ್ಮ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ, ಈವರೆಗೆ ಅಧಿಕೃತವಾಗಿ ಪ್ರಕಟ ಮಾಡಲಾಗಿಲ್ಲ.

