ರಾಜ್ಯದಲ್ಲಿ ಇನ್ನೂ 3 ದಿನ ಮಳೆ: ಈ ಜಿಲ್ಲೆಗಳಲ್ಲಿ ಆರೆಂಜ್, ಯೆಲ್ಲೋ ಅಲರ್ಟ್

Share It

ಬೆಂಗಳೂರು : ರಾಜ್ಯದ ಹಲವೆಡೆ ಮೇ 19ರಿಂದ 21 ರವರೆಗೆ ಮಳೆಯಾಗಲಿದೆ. ಕೆಲವು ಕಡೆಗಳಲ್ಲಿ ಭಾರಿ ಮಳೆಯಾದರೆ ಇನ್ನು ಕೆಲವಡೆ ಸಾಧಾರಣ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.

ಮಳೆಯಾಗುವ ಕರ್ನಾಟಕದ ಪ್ರದೇಶಗಳಲ್ಲಿ 3 ದಿನಗಳ ಕಾಲ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮಳೆಯಾಗುವ ಪ್ರದೇಶಗಳ ಗರಿಷ್ಠ ತಾಪಮಾನದಲ್ಲಿ 3 ಡಿಗ್ರಿ ಸೆಲ್ಸಿಯಸ್ ಕಡಿಮೆಯಾಗಬಹುದು ಎಂದೂ IMD ತಿಳಿಸಿದೆ.

ಕರ್ನಾಟಕದಲ್ಲಿ 2023 ರ ಡಿಸೆಂಬರ್​ನಿಂದ ಈ ಏಪ್ರಿಲ್ ವರೆಗೆ ಮಳೆಯಾಗಿರಲಿಲ್ಲ. ಆದರೆ, ಮುಂದಿನ 5 ದಿನಗಳಲ್ಲಿ ಕರ್ನಾಟಕದಲ್ಲಿ ಉತ್ತಮ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆಯ ಬೆಂಗಳೂರು ವಿಭಾಗದ ವಿಜ್ಞಾನಿ ಮತ್ತು ನಿರ್ದೇಶಕ ಸಿ.ಎಸ್ ಪಾಟೀಲ್ ಹೇಳಿದ್ದಾರೆ.

ಮುಂದಿನ 5 ದಿನಗಳಲ್ಲಿ ರಾಜ್ಯಾದ್ಯಂತ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ ಎಂದು ಅವರು ತಿಳಿಸಿದ್ದಾರೆ.

ಈ ಜಿಲ್ಲೆಗಳಿಗೆ ಆರೆಂಜ್, ಯೆಲ್ಲೋ ಅಲರ್ಟ್​?: ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಚಾಮರಾಜನಗರ ಮತ್ತು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಆರೆಂಜ್ ಮತ್ತು ಯೆಲ್ಲೋ ಅಲರ್ಟ್ ನೀಡಲಾಗಿದೆ. ಈ ಜಿಲ್ಲೆಗಳಲ್ಲಿ ಮೇ 21 ರವರೆಗೆ ಗಂಟೆಗೆ 40 ರಿಂದ 50 ಕಿಮೀ ವೇಗದಲ್ಲಿ ಗಾಳಿ ಬೀಸುವುದರೊಂದಿಗೆ ಗುಡುಗು, ಮಿಂಚು ಸಹಿತ 7 ಸೆಂ.ಮೀ ಮಳೆಯಾಗುವ ನಿರೀಕ್ಷೆಯಿದೆ.

ದಕ್ಷಿಣ ಮತ್ತು ಕರಾವಳಿ ಕರ್ನಾಟಕದ ಶೇ. 75 ಕ್ಕಿಂತ ಹೆಚ್ಚು ಮತ್ತು ಉತ್ತರ ಒಳನಾಡಿನಲ್ಲಿ ಶೇ. 25ರಿಂದ 50 ರಷ್ಟು ಪ್ರದೇಶಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮುಂಬರುವ ದಿನಗಳಲ್ಲಿ ಗರಿಷ್ಠ ನಿರೀಕ್ಷಿತ ತಾಪಮಾನವು 2 ರಿಂದ 3 ಡಿಗ್ರಿ ಸೆಲ್ಸಿಯಸ್‌ಗೆ ಇಳಿಯಲಿದೆ. ಬೀದರ್, ಕಲಬುರಗಿ, ರಾಯಚೂರು, ಬಾಗಲಕೋಟೆ, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಇರಲಾರದು ಎಂದೂ ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.


Share It

You May Have Missed

You cannot copy content of this page