ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ವಿರುದ್ಧ ತಮ್ಮ ಅಪ್ರಾಪ್ತ ಮಗಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ದೂರು ನೀಡಿದ್ದ ಮಹಿಳೆ ಸಾವನ್ನಪ್ಪಿದ್ದಾರೆ.
ಅಪ್ರಾಪ್ತ ಬಾಲಕಿ ಮೇಲೆ ಯಡಿಯೂರಪ್ಪ ಲೈಂಗಿಕ ದಔರ್ಜನ್ಯ ನಡೆಸಿದದಾರೆ ಎಂದು ಆರೋಪಿಸಿ, ಮಾರ್ಚ್ 14 ರಂದು ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಮಹಿಳೆ ದೂರು ನೀಡಿದದು, ಇದಕ್ಕೆ ಸಂಬಂಧಿಸಿ ಪೊಲೀಸರು ಪೋಕ್ಸೋ ಕಾಯಿದೆಯಡಿ ದೂರು ದಾಖಲು ಮಾಡಿಕೊಂಡಿ, ಬಿಎಸ್ವೈ ಅವರನ್ನು ವಿಚಾರಣೆಗೆ ಒಳಪಡಿಸಿದ್ದರು.
ನಗರದ ಹುಳಿಮಾವು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವಾಸವಿದ್ದ 53 ವರ್ಷದ ಮಹಿಳೆ ಆರೋಗ್ಯದಲ್ಲಿ ನಿನ್ನೆ ಸಂಜೆ ಏರುಪೇರು ಕಂಡುಬಂದಿತ್ತು. ಕೂಡಲೇ ಮಕ್ಕಳು ಹಾಗೂ ಸಂಬಂಧಿಕರು, ಮಹಿಳೆಯನ್ನು ಮನೆ ಬಳಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ರಾತ್ರಿ 9.30 ಗಂಟೆ ಸುಮಾರಿಗೆ ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಉಸಿರಾಟದ ತೊಂದರೆ ಕಾಣಿಸಿಕೊಂಡು ಮಹಿಳೆಯ ಆರೋಗ್ಯ ತೀವ್ರ ಹದಗೆಟ್ಟಿತ್ತು. ಚಿಕಿತ್ಸೆಗೆಂದು ಆಸ್ಪತ್ರೆಗೆ ಕರೆದೊಯ್ದಾಗ ಕೆಲ ಗಂಟೆಯಲ್ಲೇ ಮೃತಪಟ್ಟಿದ್ದಾರೆ. ಮಕ್ಕಳಾಗಲಿ ಹಾಗೂ ಸಂಬಂಧಿಕರಾಗಲಿ, ಸಾವಿನಲ್ಲಿ ಅನುಮಾನ ವ್ಯಕ್ತಪಡಿಸಿ ಯಾವುದೇ ದೂರು ನೀಡಿಲ್ಲ ಎಂದು ಮೂಲಗಳು ತಿಳಿಸಿವೆ.
ಪ್ರಕರಣದ ನಂತರ ತಮಗೆ ಜೀವ ಬೆದರಿಕೆ ಇರುವುದಾಗಿ ದೂರುದಾರ ಮಹಿಳೆ ಆರೋಪಿಸಿದ್ದರು. ಹೀಗಾಗಿ, ಅವರ ಮನೆಗೆ ಪೊಲೀಸ್ ಭದ್ರತೆ ನೀಡಲಾಗಿತ್ತು. ದಿನದ 24 ಗಂಟೆಯೂ ಮಹಿಳೆಯ ಮನೆ ಬಳಿ ಪಾಳಿ ಪ್ರಕಾರ ಇಬ್ಬರು ಸಿಬ್ಬಂದಿ ಭದ್ರತೆಗೆ ನಿಯೋಜಿಸಲಾಗಿತ್ತು. ಈ ಮಧ್ಯೆ ಮಹಿಳೆ ಕಳೆದ ಒಂದೂವರೆ ವರ್ಷದಿಂದ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದು, ಅದಕ್ಕಾಗಿ ಚಿಕಿತ್ಸೆ ಕೂಡ ಪಡೆಯುತ್ತಿದ್ದರು.
