ಬೆಂಗಳೂರು: ದೇಹ ಮತ್ತು ಮನಸ್ಸಿನ ಸಂಯೋಗವೇ ಯೋಗ. ಭಾರತೀಯ ಯೋಗ ಪರಂಪರೆಯಿಂದು ವಿಶ್ವವ್ಯಾಪಿಯಾಗಿದ್ದು ಭಾರತ ಮತ್ತು ಇತರ ದೇಶಗಳ ಸಂಬಂಧವನ್ನು ಆರೋಗ್ಯಪೂರ್ಣವಾಗಿಸುವ ಮಹತ್ವದ ಕಾರ್ಯವಾಗಿ ರೂಪುಗೊಂಡಿದೆ.
ಯೋಗವು ಯಾವುದೇ ಜಾತಿ, ಧರ್ಮ, ಮತ ಪಂಥಕ್ಕೆ ಸೀಮಿತವಾಗದೇ ಎಲ್ಲವನ್ನೂ ಎಲ್ಲರನ್ನೂ ಮೀರಿಸುವ ವಿಶ್ವಕುಟುಂಬಿಯಾಗಿ ಹಾಗೂ ವಿಶ್ವ ಆರೋಗ್ಯಕ್ಕಾಗಿ ಎನ್ನುವ ನಿಟ್ಟಿನಲ್ಲಿ ಸಾಕಾರಾರಗೊಂಡಿದೆ. ಇದೇ ನಿಟ್ಟಿನಲ್ಲಿ ಬೆಂಗಳೂರಿನಲ್ಲಿಂದು ಅಂತಾರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಯಿತು
ಆಯುಷ್ ಹಾಗೂ ಆರೋಗ್ಯ ಇಲಾಖೆ ವತಿಯಿಂದ ವಿಧಾನಸೌಧದ ಎದುರು ಆಯೋಜಿಸಿದ್ದ ʻಯೋಗೋತ್ಸವʼ ಕಾರ್ಯಕ್ರಮದಲ್ಲಿ 10ನೇ ಅಂತಾರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಯಿತು.
ಈ ವೇಳೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಯೊಗವು ಮನಸ್ಸು ಮತ್ತು ದೇಹವನ್ನು ಸಂಪರ್ಕಿಸುವ ಪ್ರಾಚಿನ ಕಲೆಯಾಗಿದ್ದು, ಸಾವಿರಾರು ವರ್ಷಗಳ ಹಿಂದೆಯೇ ಇದನ್ನು ಜಗತ್ತಿಗೆ ಪರಿಚಯಿಸಿದ ಹೆಗ್ಗಳಿಕೆ ಭಾರತ ದೇಶದ್ದು. ನಮಗೆ ಬಾಹ್ಯ ಸೌಂದರ್ಯ ಎಷ್ಟು ಮುಖ್ಯವೋ, ಆಂತರಿಕ ಸೌಂದರ್ಯವು ಅಷ್ಟೇ ಮುಖ್ಯವಾಗಿರುತ್ತದೆ. ಇವೆರಡನ್ನು ಚೆನ್ನಾಗಿ ಇಟ್ಟುಕೊಳ್ಳಲು ಯೋಗವು ಪ್ರಮುಖ ಪಾತ್ರವನ್ನು ವಹಿಸುತ್ತದೆ.
ಪ್ರತಿ ನಿತ್ಯ ನಾವು ಯೋಗ ಮಾಡುವುದರಿಂದ ಉತ್ತಮವಾದ ಆರೋಗ್ಯಕರ ಜೀವನವನ್ನು ನಡೆಸಬಹುದಾಗಿದೆ. ಹಾಗಾಗಿ ಯೋಗವನ್ನು ನಮ್ಮ ಜೀವನದ ಒಂದು ಭಾಗವಾಗಿ ರೂಢಿಸಿಕೊಂಡು, ಪ್ರತಿ ದಿನ ಯೋಗ ಮಾಡೋಣ ಹಾಗೂ ಆರೋಗ್ಯಕರ ಜೀವನ ಶೈಲಿಯನ್ನು ಅಳವಡಿಸಿಕೊಳ್ಳೋಣ ಎಂದು ಯೋಗದಲ್ಲಿ ಭಾಗವಹಿಸಿದ್ದ ಸಾರ್ವಜನಿಕರಿಗೆ ಕರೆ ನೀಡಿದರು.
ಈ ಸಂದರ್ಭದಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್, ಸಚಿವರಾದ ದಿನೇಶ್ ಗುಂಡೂರಾವ್, ಸಭಾಪತಿ ಬಸವರಾಜ ಹೊರಟ್ಟಿ, ನಟಿ ಅನು ಪ್ರಭಾಕರ್, ನಟ ಶರಣ್, ಅಶ್ವಿನಿ ನಾಚಪ್ಪ, ಟೀಂ ಇಂಡಿಯಾ ಕ್ರಿಕೆಟಿಗ ಮನೀಷ್ ಪಾಂಡೆ ಸಹ ಪಾಲ್ಗೊಂಡಿದ್ದರು.
ಇದರೊಂದಿಗೆ ನೂರಾರು ಸಾರ್ವಜನಿಕರು, ವಿವಿಧ ಶಾಲಾ ಕಾಲೇಜು ಮಕ್ಕಳು ಯೋಗ ಪ್ರದರ್ಶಿಸಿ ಆರೋಗ್ಯ ಸುರಕ್ಷತೆಗಳ ಬಗ್ಗೆ ಜಾಗೃತಿ ಮೂಡಿಸಿದರು.
ಮಂಜುನಾಥ್ ಗುಡಿಹಳ್ಳಿ

