ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತರಾತುರಿಯಲ್ಲಿ ಪ್ರಾಸಿಕ್ಯೂಷನ್ಗೆ ರಾಜ್ಯಪಾಲರು ಅನುಮತಿ ನೀಡಿರುವುದರ ಹಿಂದೆ ಕೇಂದ್ರ ಹಾಗೂ ಬಿಜೆಪಿ ನಾಯಕರ ಒತ್ತಡ ಇದ್ದು, ಅವರು ಕುಣಿಸಿದಂತೆ ರಾಜ್ಯಪಾಲರು ಕುಣಿಯುತ್ತಿದ್ದಾರೆ ಎಂದು ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾ ರೆಡ್ಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ರಾಜ್ಯಪಾಲರ ಸ್ಥಾನಕ್ಕೆ ಇದು ಶೋಭೆ ತರುವುದಿಲ್ಲ. ಎಚ್.ಡಿ ಕುಮಾರಸ್ವಾಮಿಯವರ ಗಣಿ ಹಗರಣದ ತನಿಖೆಗೆ ಲೋಕಾಯುಕ್ತ ಸಂಸ್ಥೆಯೇ ಅನುಮತಿ ಕೇಳಿದ್ದರೂ ರಾಜ್ಯಪಾಲರು ಕಳೆದ 10 ತಿಂಗಳಿಂದ ಕಡತವನ್ನು ಮೂಲೆಗೆ ತಳ್ಳಿ ಕೂತಿದ್ದಾರೆ. ಶಶಿಕಲಾ ಜೊಲ್ಲೆಯ ಮೊಟ್ಟೆ ಹಗರಣದ ವಿರುದ್ಧದ ತನಿಖೆಗೆ ಅನುಮತಿ ಕೋರಿದ ಕಡತವನ್ನು ಸಹ ಸುಮಾರು 2 ವರ್ಷಗಳಿಂದ ರಾಜ್ಯಪಾಲರು ಬಾಕಿ ಉಳಿಸಿಕೊಂಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಮುರುಗೇಶ್ ನಿರಾಣಿ ಮಂತ್ರಿಯಾಗಿದ್ದಾಗ ಬೃಹತ್ ಕೈಗಾರಿಕೆ ಇಲಾಖೆ ವ್ಯಾಪ್ತಿಯಡಿ ಬರುವ ಮಾರ್ಕೆಟಿಂಗ್, ಜಾಹೀರಾತು ಮತ್ತು ಪ್ರಚಾರ ಸಂಸ್ಥೆಯಲ್ಲಿ 2011-15ರ ನಡುವೆ ನಡೆದ ಅಕ್ರಮ ನೇಮಕಾತಿಯ ತನಿಖೆಗೆ ಅನುಮತಿ ಕೋರಿರುವ ಕಡತ ನಿದ್ರಾವಸ್ಥೆಯಲ್ಲಿದೆ. ಜನಾರ್ಧನ್ ರೆಡ್ಡಿಯ ಗಣಿ ಹಗರಣದ ಕಡತ ರಾಜಭವನದಲ್ಲಿ ಧೂಳು ಹಿಡಿದಿದೆ ಎಂದರು.
ಬಿಜೆಪಿ ಮತ್ತು ಮಿತ್ರಪಕ್ಷದ ಬಗೆದಷ್ಟು ಲೆಕ್ಕ ಹಾಕದಷ್ಟು ಹಗರಣಗಳ ತನಿಖೆಗೆ ಅನುಮತಿ ಕೋರಿರುವ ಕಡತಗಳು ರಾಜಭವನದಲ್ಲಿ ವರ್ಷಗಳಿಂದ ಇದ್ದು, ಇದ್ಯಾವುದಕ್ಕೂ ತಲೆ ಕೆಡಿಸಿಕೊಳ್ಳದ ರಾಜ್ಯಪಾಲರು ಸಿದ್ದರಾಮಯ್ಯ ನವರ ವಿಚಾರದಲ್ಲಿ ಮಾತ್ರ ತಮ್ಮ ಮಂತ್ರದಂಡವನ್ನು ಉಪಯೋಗಿಸಿ ಹೇಗಾದರೂ ಮಾಡಿ ಈ ಜನಪರ ಸರ್ಕಾರವನ್ನು ಇಕ್ಕಟಿಗೆ ಸಿಲುಕಿಸಬೇಕೆಂದು ಹೊರಟಿರುವುದು ಕಾನೂನು ಬಾಹಿರವಾಗಿದ್ದು, ಇದು ನಮ್ಮ ಸಂವಿಧಾನ ಹಾಗೂ ಪ್ರಜಾಪ್ರಭುತ್ವವನ್ನು ನಾಶ ಮಾಡುವ ಪ್ರಯತ್ನವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
updating…

