ರಾಜಕೀಯ ಸುದ್ದಿ

ರಾಜ್ಯಪಾಲರ ನಿಂದನೆ: ಕೈ ನಾಯಕರ ವಿರುದ್ಧ ಬಿಜೆಪಿ ದೂರು

Share It

ಬೆಂಗಳೂರು : ಸಿಎಂ ಸಿದ್ದರಾಮಯ್ಯ ಅವರಿಗೆ ಮುಡಾ ಹಗರಣದ ವಿಚಾರಣೆಗಾಗಿ ಪ್ರಾಸಿಕ್ಯೂಷನ್​ ವಿಚಾರವಾಗಿ ರಾಜ್ಯಪಾಲರ ವಿರುದ್ಧ ಟೀಕೆ ಹಿನ್ನೆಲೆ ಸಚಿವರಾದ ಜಮೀರ್ ಅಹ್ಮದ್ ಖಾನ್, ಕೃಷ್ಣ ಭೈರೇಗೌಡ, ದಿನೇಶ್ ಗುಂಡೂರಾವ್, ಎಂಎಲ್ಸಿ ಐವನ್ ಡಿಸೋಜಾ ಹಾಗೂ ಶಾಸಕ ನಂಜೇಗೌಡ ವಿರುದ್ಧ ಡಿಜಿ-ಐಜಿಪಿ ಅಲೋಕ್ ಮೋಹನ್​ಗೆ ಬಿಜೆಪಿ ನಿಯೋಗ ದೂರು ನೀಡಿದೆ.

ಆಗಸ್ಟ್19 ಪ್ರತಿಭಟನೆ ವೇಳೆ ರಾಜ್ಯಪಾಲರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ದೂರು ಸಲ್ಲಿಸಲಾಗಿದ್ದು, ಜಾತಿ ನಿಂದನೆ, ಗೂಂಡಾ ಕಾಯ್ದೆಯಡಿ ಕೇಸ್ ದಾಖಲಿಸಿ ಬಂಧಿಸಬೇಕು ಎಂದು ಬಿಜೆಪಿ ನಾಯಕರು ಮನವಿ ಮಾಡಿದ್ದಾರೆ.

ಈ ಕುರಿತು ಟ್ವೀಟ್​ ಮಾಡಿರುವ ಬಿಜೆಪಿ, ‘ಗೌರವಾನ್ವಿತ ರಾಜ್ಯಪಾಲರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡುತ್ತಿರುವ ವ್ಯಕ್ತಿಗಳ ವಿರುದ್ಧ ಹಾಗೂ ಪೂರ್ವ ನಿಯೋಜಿತ ಪ್ರತಿಭಟನೆ ನಡೆಸುತ್ತಿರುವ ಕಾಂಗ್ರೆಸ್ ನಾಯಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ, ಇಂದು ಪೊಲೀಸ್ ಮಹಾ ನಿರ್ದೇಶಕರಿಗೆ ಮನವಿ ಸಲ್ಲಿಸಲಾಯಿತು ಎಂದಿದ್ದಾರೆ.

ಇತ್ತ ಬಿಜೆಪಿ ವಿಧಾನಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ಕಾನೂನು ಪ್ರಕೋಷ್ಠದ ಸಂಚಾಲಕ ವಸಂತ್ ಕುಮಾರ್, ಎಸ್.ಸಿ.ಮೋರ್ಚಾ ರಾಜ್ಯಾಧ್ಯಕ್ಷ ಸಿಮೆಂಟ್ ಮಂಜು, ಎಸ್.ಟಿ ಮೋರ್ಚಾ ರಾಜ್ಯಾಧ್ಯಕ್ಷರ ಬಂಗಾರು ಹನುಮಂತು, ಮುಖಂಡ ಅನಿಲ್ ಕುಮಾರ್ ಸೇರಿ ಕಾನೂನು ಪ್ರಕೋಷ್ಠಕದ ಪ್ರಮುಖರು ಪೊಲೀಸ್ ನಿರೀಕ್ಷಕ ಅಧಿಕಾರಿಗಳಿಗೆ ದೂರು ಸಲ್ಲಿಸಿದ್ದು, ‘ಸಚಿವ ಜಮೀರ್ ಅಹಮದ್, ವಿಧಾನ ಪರಿಷತ್ ಸದಸ್ಯ ಐವಾನ್ ಡಿಸೋಜಾ, ಬೆಳ್ತಂಗಡಿ ಮುಖಂಡ ರಕ್ಷಿತ್ ಶಿವರಾಂ ಅವರು ರಾಜ್ಯಪಾಲರ ವಿರುದ್ಧ ಬಾಂಗ್ಲಾ ದೇಶದಲ್ಲಿ ಆದ ಹಿಂಸಾಚಾರದ ಸ್ವರೂಪದಲ್ಲಿ ದಾಳಿ ಮಾಡುವುದಾಗಿ ಹೇಳಿಕೆ ಮತ್ತು ದುರುದ್ದೇಶಪೂರ್ವಕ ಪ್ರಚೋದನಾತ್ಮಕ ಹೇಳಿಕೆ ನೀಡಿರುವುದರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

ಬೆಂಗಳೂರಿನ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿಯೂ ದೂರು ದಾಖಲು
ಇನ್ನು ರಾಜ್ಯಪಾಲರ ವಿರುದ್ದ ಟೀಕೆ ಹಿನ್ನೆಲೆ ಸಚಿವ ಜಮೀರ್ ಅಹಮದ್, ವಿಧಾನಪರಿಷತ್ ಸದಸ್ಯ ಐವಾನ್ ಡಿಸೋಜ ಮತ್ತು ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪರಾಜಿತ ಅಭ್ಯರ್ಥಿ ರಕ್ಷಿತ್ ಶಿವರಾಂ ವಿರುದ್ಧ ಬೆಂಗಳೂರಿನ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಬಿಜೆಪಿಯ ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್, ಶಾಸಕ ಸಿಮೆಂಟ್ ಮಂಜು ದೂರು ದಾಖಲು ಮಾಡಿದ್ದಾರೆ.


Share It

You cannot copy content of this page