ಟಿಟಿ ಗಾಡಿ ಮತ್ತು ಕಾರು ಡಿಕ್ಕಿ: ಕಾರಿನಲ್ಲಿದ್ದ ಮೂವರು ಸಾವು
ಚಿಕ್ಕಬಳ್ಳಾಪುರ: ಟಿಟಿ ಗಾಡಿ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಮೂವರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ದಂಡುಪಾಳ್ಯ ಗೇಟ್ ಬಳಿ ನಡೆದಿದೆ.
ಅಪಘಾತದಲ್ಲಿ ಕಾರಿನಲ್ಲಿದ್ದ ಮೂವರು ಮೃತಪಟ್ಟಿದ್ದಾರೆ. ಮೃತರನ್ನು ಆಂಧ್ರಪ್ರದೇಶ ಮೂಲದ ಶ್ರೀಕಾಂತ್, ಶ್ರೀನಿವಾಸುಲು, ಪುಷ್ಪಾ ಎಂದು ಗುರುತಿಸಲಾಗಿದೆ. ಕೆಂಚಾರ್ಲಹಳ್ಳಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಪೊಲೀಸರು ಸ್ಥಳಕ್ಕಾಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಟಿಟಿ ಗಾಡಿಯಲ್ಲಿದ್ದ 12 ಜನ ಗಾಯಗೊಂಡಿದ್ದು, ಗಾಯಾಳುಗಳನ್ನು ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.


