ಚಿಕ್ಕಬಳ್ಳಾಪುರ: ಗೌರಿಬಿದನೂರು ತಾಲ್ಲೂಕಿನ ವೇದಲ್ವೇಣಿ ಬಳಿ ಗಾರ್ಮೆಂಟ್ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಮಿನಿ ಬಸ್ ಪಲ್ಟಿಯಾಗಿದೆ. ಘಟನೆಯಲ್ಲಿ ಹತ್ತು ಕ್ಕೂ ಹೆಚ್ಚು ಮಹಿಳಾ ಕಾರ್ಮಿಕರು ಗಾಯಗೊಂಡಿದ್ದು, ಅವರಲ್ಲಿ ಎಂಟು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಪ್ರಾಥಮಿಕ ಮಾಹಿತಿಯ ಪ್ರಕಾರ ದೊಡ್ಡಬಳ್ಳಾಪುರದ ಗಾರ್ಮೆಂಟ್ ಕಾರ್ಖಾನೆಗೆ ಹೋಗುತ್ತಿದ್ದ ಮಿನಿ ಬಸ್ ಚಾಲಕನ ಅಜಾಗರೂಕತೆಯಿಂದ ರಸ್ತೆ ಬದಿಗೆ ಉರುಳಿದೆ. ಗೌರಿಬಿದನೂರು ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಮಿನಿ ಬಸ್ಸಿನ ಕಿಟಕಿಗಳು ಮುರಿದಿದ್ದು, ಸುಮಾರು 20 ಜನರು ಬಸ್ ನಲ್ಲಿ ಪ್ರಯಾಣಿಸುತ್ತಿದ್ದರು ಎಂದು ಹೇಳಲಾಗುತ್ತಿದೆ. ಗಾಯಗೊಂಡ ಕಾರ್ಮಿಕರನ್ನು ತಕ್ಷಣ ಗೌರಿಬಿದನೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ. ಗಂಭೀರವಾಗಿ ಗಾಯಗೊಂಡ ಎಂಟು ಜನರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗಳಿಗೆ ಕಳುಹಿಸಲಾಗಿದೆ. ಗೌರಿಬಿದನೂರು ಗ್ರಾಮೀಣ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಘಟನೆಯ ತನಿಖೆ ನಡೆಸುತ್ತಿದ್ದಾರೆ.

