ಸುದ್ದಿ

ವಾಲ್ಮೀಕಿ ನಿಗಮದ ಹಗರಣ: ಜು.22 ರವರೆಗೆ ಬಿ.ನಾಗೇಂದ್ರ ಇ.ಡಿ ಕಸ್ಟಡಿಗೆ

Share It

ಬೆಂಗಳೂರು: ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಬ್ಯಾಂಕ್‌ ಖಾತೆಯಿಂದ 95 ಕೋಟಿ ರೂ. ಹಣವನ್ನು ಅಕ್ರಮವಾಗಿ ವರ್ಗಾವಣೆ ಮಾಡಿದ ಹಗರಣ ಪ್ರಕರಣದ ಆರೋಪಿ ಮಾಜಿ ಸಚಿವ ಬಿ. ನಾಗೇಂದ್ರ ಅವರನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಸತ್ರ ನ್ಯಾಯಾಲಯವು ಮತ್ತೆ 5 ದಿನ ಅಂದರೆ ಜುಲೈ 22ರವರೆಗೆ ಜಾರಿ ನಿರ್ದೇಶನಾಲಯದ ಕಸ್ಟಡಿಗೆ ನೀಡಿ ಗುರುವಾರ ಆದೇಶಿಸಿದೆ.

ಇ.ಡಿ ಅಧಿಕಾರಿಗಳು ಬಳ್ಳಾರಿ ಗ್ರಾಮೀಣ ಶಾಸಕ ನಾಗೇಂದ್ರ ಅವರನ್ನು ಬೆಂಗಳೂರಿನ ಜನಪ್ರತಿನಿಧಿಗಳ ಸತ್ರ ನ್ಯಾಯಾಲಯದ ನ್ಯಾಯಾಧೀಶ ಸಂತೋಷ್‌ ಗಜಾನನ ಭಟ್‌ ಅವರ ಮುಂದೆ ಹಾಜರುಪಡಿಸಿದರು.

ಇ.ಡಿ ಪರವಾಗಿ ಹಾಜರಾಗಿದ್ದ ವಿಶೇಷ ಸರ್ಕಾರಿ ಅಭಿಯೋಜಕ ಪಿ. ಪ್ರಸನ್ನಕುಮಾರ್‌ ಅವರು ಪ್ರಕರಣದ ತನಿಖೆ ನಡೆಯುತ್ತಿದ್ದು, ಇನ್ನೂ ಸಾಕಷ್ಟು ಮಾಹಿತಿಯನ್ನು ನಾಗೇಂದ್ರ ಅವರಿಂದ ಸಂಗ್ರಹಿಸಬೇಕಿದೆ. ಹೀಗಾಗಿ, ಅವರ ಕಸ್ಟಡಿ ಅವಧಿ ವಿಸ್ತರಿಸಬೇಕು ಎಂದು ಕೋರಿದರು.

ಇ.ಡಿ ಪರವಾಗಿ ಸಲ್ಲಿಸಲಾಗಿದ್ದ ರಿಮ್ಯಾಂಡ್‌ ಅರ್ಜಿಯನ್ನು ಪರಿಶೀಲಿಸಿದ ನ್ಯಾಯಾಧೀಶರು ನಾಗೇಂದ್ರ ಅವರನ್ನು ಮತ್ತೆ 5 ದಿನಗಳ ಕಾಲ ಇ.ಡಿ ಕಸ್ಟಡಿಗೆ ನೀಡಿ ಆದೇಶಿಸಿದರು.
ಕೇಂದ್ರ ಜಾರಿ ನಿರ್ದೇಶನಾಲಯವು ನಾಗೇಂದ್ರ ಸೇರಿ ಹಲವರ ವಿರುದ್ಧ ಅಕ್ರಮ ಹಣ ವರ್ಗಾವಣೆ ಕಾಯಿದೆ ಸೆಕ್ಷನ್‌ 3 ಮತ್ತು 4ರ ಅಡಿ ಪ್ರಕರಣ ದಾಖಲಿಸಿ, ವಿಚಾರಣೆ ನಡೆಸುತ್ತಿದೆ.

ನಿಗಮದ ಹಣವನ್ನು ಅಕ್ರಮವಾಗಿ ವರ್ಗಾವಣೆ ಮಾಡಿದ ಹಗರಣದ ಕುರಿತು ರಾಜ್ಯಸರ್ಕಾರ ರಚಿಸಿರುವ ವಿಶೇಷ ತನಿಖಾ ದಳ ಮತ್ತು ಸಿಬಿಐ ಪ್ರತ್ಯೇಕವಾಗಿ ತನಿಖೆ ನಡೆಸುತ್ತಿವೆ. ಅಕ್ರಮ ಹಣ ವರ್ಗಾವಣೆ ತಡೆ ಕಾಯಿದೆ ಅಡಿಯಲ್ಲಿ ಪ್ರಕರಣ ದಾಖಲಿಸಿರುವ ಜಾರಿ ನಿರ್ದೇಶನಾಲಯವು ಪ್ರತ್ಯೇಕವಾಗಿ ತನಿಖೆ ನಡೆಸುತ್ತಿದೆ.

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಿಂದಿನ ವ್ಯವಸ್ಥಾಪಕ ನಿರ್ದೇಶಕ ಜೆ.ಬಿ ಪದ್ಮನಾಭ ಮತ್ತು ಹಿಂದಿನ ಲೆಕ್ಕಾಧಿಕಾರಿ ಪರಶರಾಮ ದುರ್ಗಣ್ಣವರ ಅವರು ಎಸ್‌ಐಟಿ ಕಸ್ಟಡಿಯಲ್ಲಿದ್ದಾರೆ. ಬೆಂಗಳೂರಿನ ಹೈಗ್ರೌಂಡ್ಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದ್ದು, ಈ ತನಿಖೆಯನ್ನು ಎಸ್‌ಐಟಿ ನಡೆಸುತ್ತಿದೆ.


Share It

You cannot copy content of this page