ಇಂದೋರ್: ಚಲಿಸುತ್ತಿದ್ದ ಲಾರಿಗೆ ಕಾರೊಂದು ರಭಸವಾಗಿ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಐವರು ಸ್ಥಳದಲ್ಲಿಯೇ ಮೃತಪಟ್ಟು, ಓರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಧ್ಯಪ್ರದೇಶದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಮಧ್ಯಪ್ರದೇಶದ ಮೈಹಾರ್ ಜಿಲ್ಲೆಯ ದೇಹತ್ ಎಂಬಲ್ಲಿ ರಸ್ತೆಯಲ್ಲಿ ನಡೆದ ಅಪಘಾತದಲ್ಲಿ ಅಂಕುರ್ ಪಟೇಲ್, ಮೃದಲ್ ಪಟೇಲ್, ಹರಿಶಂಕರ್ ಪಟೇಲ್, ಶಿವ ಪಟೇಲ್ ಹಾಗೂ ಯುವಕ ಸಾವನ್ನಪ್ಪಿದ್ದರೆ, ಇನ್ನೋರ್ವ ಗಾಯಗೊಂಡಿದ್ದಾನೆ.
ಮೃತ ಯುವಕರೆಲ್ಲರೂ ಸ್ಥಳೀಯ ಕಾಂಗ್ರೆಸ್ ಮುಖಂಡರೊಬ್ಬರ ಸಂಬಂಧಿಕರು ಎಂದು ಹೇಳಲಾಗುತ್ತಿದ್ದು, ಈ ಎಲ್ಲ ಯುವಕರು
ಬರ್ತಡೇ ಪಾರ್ಟಿ ಮುಗಿಸಿಕೊಂಡು ವಾಪಸ್ಸಾಗುತ್ತಿದ್ದರು ಎನ್ನಲಾಗಿದೆ.
ಈ ವೇಳೆ ವೇಗವಾಗಿ ಚಾಲನೆ ಮಾಡುತ್ತಿದ್ದರಿಂದ ಹಿಂಬದಿಯಿಂದ ಚಲಿಸುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಎಸ್ಯುವಿ ಕಾರು ಸಂಪೂರ್ಣವಾಗಿ ನುಜ್ಜುಗುಜ್ಜಾಗಿದೆ. ಕಾರಿನಲ್ಲಿದ್ದ ಐವರು ಯುವಕರು ಸ್ಥಳದಲ್ಲಿಯೇ ಪ್ರಾಣ ಕಳೆದುಕೊಂಡಿದ್ದಾರೆ. ಮತ್ತೊಬ್ಬನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

