ನವದೆಹಲಿ: ಸುಪ್ರೀಂ ಕೋರ್ಟ್ ಆಕ್ರೋಶಕ್ಕೆ ಗುರಿಯಾಗಿದ್ದ ವಿವಾದಿತ 8ನೇ ತರಗತಿ ಸಮಾಜ ವಿಜ್ಞಾನ ಪಠ್ಯಪುಸ್ತಕದ “ನ್ಯಾಯಾಂಗದಲ್ಲಿ ಭ್ರಷ್ಟಾಚಾರ” ಅಧ್ಯಯನ ವಿಚಾರ ಕುರಿತಾಗಿ ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (NCERT) ಸಾರ್ವಜನಿಕವಾಗಿ ಕ್ಷಮೆ ಕೋರಿ ಇಡೀ ಪಠ್ಯಪುಸ್ತಕವನ್ನು ಹಿಂಪಡೆದಿದೆ.
ಎನ್ಸಿಇಆರ್ಟಿ 8ನೇ ತರಗತಿ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ನ್ಯಾಯಾಂಗದಲ್ಲಿ ಭ್ರಷ್ಟಾಚಾರ ಅಧ್ಯಯನದಲ್ಲಿ ಭ್ರಷ್ಟಾಚಾರ, ಬೃಹತ್ ಪ್ರಮಾಣದ ಪ್ರಕರಣಗಳು ಬಾಕಿ ಸೇರಿ ನ್ಯಾಯಾಧೀಶರ ಕೊರತೆ, ನ್ಯಾಯಾಂಗ ವ್ಯವಸ್ಥೆ ಎದುರಿಸುತ್ತಿರುವ ಸವಾಲುಗಳ ವಿಚಾರಗಳನ್ನು ಸೇರಿಸಲಾಗಿತ್ತು. ಈ ವಿಚಾರ ಕುರಿತು ವಿವಾದ ಉಂಟಾಗಿ, ಸಾಕಷ್ಟು ಆಕ್ರೋಶ ವ್ಯಕ್ತವಾಗಿತ್ತು. ಪ್ರಧಾನಿ ಮೋದಿ ಅವರು ಕೂಡ ಈ ಬಗ್ಗೆ ವಿಷಾದ ವ್ಯಕ್ತಪಡಿಸಿದ್ದರು.
ಎನ್ಸಿಇಆರ್ಟಿಯಲ್ಲಿ ಪ್ರಕಟಿಸಲಾಗಿದ್ದ ಈ ವಿಷಯದ ಕುರಿತು ಎನ್ಸಿಇಆರ್ಟಿ ನಿರ್ದೇಶಕರು ಮತ್ತು ಸದಸ್ಯರು ಕ್ಷಮೆಯಾಚಿಸುತ್ತಾರೆ. ಈ ಅಧ್ಯಯನ ಇದೀಗ ಪಠ್ಯದಲ್ಲಿ ಲಭ್ಯವಿಲ್ಲ ಎಂದು ಎನ್ಸಿಇಆರ್ಟಿ ಸಾರ್ವಜನಿಕವಾಗಿ ಕ್ಷಮೆ ಕೋರಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದೆ.
ಹಿರಿಯ ವಕೀಲ ಕಪಿಲ್ ಸಿಬಲ್, ಅಭಿಷೇಕ್ ಸಿಂಘ್ವಿ ಅವರು ತುರ್ತು ಪರಿಗಣನೆಗೆ ವಿಷಯವನ್ನು ಪ್ರಸ್ತಾಪಿಸಿದ ನಂತರ ಸುಪ್ರೀಂ ಕೋರ್ಟ್ ಸಿಜೆಐ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿಗಳಾದ ಜೋಯ್ಮಲ್ಯ ಬಾಗ್ಚಿ ಮತ್ತು ವಿಪುಲ್ ಎಂ. ಪಂಚೋಲಿ ಅವರನ್ನು ಒಳಗೊಂಡ ತ್ರಿಸದಸ್ಯ ಪೀಠವು ಎನ್ಸಿಇಆರ್ಟಿ ಪಠ್ಯಪುಸ್ತಕಗಳಲ್ಲಿ ನ್ಯಾಯಾಂಗದ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ವಿರುದ್ಧ ಸ್ವಯಂ ಪ್ರೇರಿತವಾಗಿ ವಿಚಾರಣೆಗೆ ಕೈಗೆತ್ತಿಕೊಂಡಿತು.
ಈ ವಿಚಾರವಾಗಿ ಕೇಂದ್ರ ಸರ್ಕಾರದ ವಿರುದ್ಧ ಸುಪ್ರೀಂ ಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಇದು ಆಳವಾಗಿ ಬೇರೂರಿರುವ ಪಿತೂರಿ ಮತ್ತು ಉತ್ತಮವಾಗಿ ಯೋಜಿಸಿರುವ ಕೃತ್ಯ ಎಂದು ಕರೆದಿತ್ತು. ಆನ್ಲೈನ್ನಲ್ಲಿ ಲಭ್ಯವಿರುವ ಸಂಬಂಧಿತ ವಿಭಾಗದ ಪಿಡಿಎಫ್ ಆವೃತ್ತಿ ರದ್ದು ಮಾಡುವಂತೆ ಸರ್ಕಾರಕ್ಕೆ ಸೂಚನೆ ನೀಡಿತ್ತು. ನ್ಯಾಯಾಲಯವು ಈ ವಿಷಯದ ಬಗ್ಗೆ ಆಳವಾದ ತನಿಖೆಗೆ ಆದೇಶಿಸಬಹುದಾಗಿದೆ ಎಂದು ಸಿಜೆಐ ತಿಳಿಸಿದ್ದರು.
ಈ ಕುರಿತು ಸರ್ಕಾರ ತೀವ್ರ ಅಸಮಾಧಾನ ಮತ್ತು ಕಳವಳ ವ್ಯಕ್ತಪಡಿಸಿತ್ತು. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮಾತನಾಡಿ, ಈ ವಿಚಾರದ ಹೊಣೆಗಾರಿಕೆ ಸರಿಪಡಿಸುವುದಾಗಿ ಮತ್ತು ಪಠ್ಯ ರಚಿಸುವಲ್ಲಿ ಭಾಗಿಯಾಗಿರುವವರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದರು.

