ಬೆಂಗಳೂರು: ದೆಹಲಿಯ ದಂಡಯಾತ್ರೆ ಮುಗಿಸಿಕೊಂಡು ಡಿಸಿಎಂ ಡಿ.ಕೆ.ಶಿವಕುಮಾರ್ ಇಂದು ಸಂಜೆ ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆ.
ದೆಹಲಿಯಲ್ಲಿ ಪ್ರಿಯಾಂಕಾ ಗಾಂಧಿ, ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿದ ಡಿಸಿಎಂ ರಾಜಕೀಯ ವಿದ್ಯಮಾನಗಳನ್ನು ಚರ್ಚೆ ಮಾಡಿದ್ದಾರೆ ಎನ್ನಲಾಗಿದೆ. ಈ ನಡುವೆ ಹೈಕಮಾಂಡ್ ಡಿಕೆಶಿಗೆ ಏನು ಭರವಸೆ ನೀಡಿದೆ ಎಂಬುದು ನಿಗೂಢವಾಗಿಯೇ ಇದೆ.
ಮಧ್ಯಾಹ್ನ 2.15ಕ್ಕೆ ದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಇಂಡಿಗೋ ವಿಮಾನದಲ್ಲಿ ಹೊರಡುವ ಡಿಕೆಶಿ ಸಂಜೆ 5.10 ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬರಲಿದ್ದಾರೆ.
ಸಂಜೆ 6.30ಕ್ಕೆ ಸಚಿವ ಸಂಪುಟ ಸಭೆ ನಡೆಯಲಿದ್ದು, ಸಭೆಯಲ್ಲಿ ಡಿಕೆಶಿ ಭಾಗವಹಿಸಲಿದ್ದಾರೆ. ಇದೀಗ ಅವರು ದೆಹಲಿಯಲ್ಲಿ ಚರ್ಚೆ ನಡೆಸಿದ ವಿಷಯಗಳೇನು ಎಂಬುದು ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ.

