ಅಪರಾಧ ರಾಜಕೀಯ ಸುದ್ದಿ

ರೇಣುಕಸ್ವಾಮಿ ಕೊಲೆ: ತಪ್ಪಿತಸ್ಥರಿಗೆ ಶಿಕ್ಷೆಯಾಗುವವರೆಗೂ ಪ್ರಾಮಾಣಿಕ ತನಿಖೆ ನಡೆಸಬೇಕು

Share It

ನಾವೆಲ್ಲ ಸಮಗ್ರ ಕರ್ನಾಟಕದ ಅಭಿವೃದ್ಧಿಗೆ ಕೆಲಸ ಮಾಡಬೇಕು: ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ: ರೇಣುಕಸ್ವಾಮಿ ಕೊಲೆ ಗಂಭೀರ ಪ್ರಕರಣವಾಗಿದ್ದು ಈ ಪ್ರಕರಣದಲ್ಲಿ ಆರೋಪಿಗಳಿಗೆ ಶಿಕ್ಷೆ ಸಿಗುವವರೆಗೂ ಅಧಿಕಾರಿಗಳು ಚುರುಕುತನ, ನಿಯತ್ತಿನ ತನಿಖೆ ನಡೀಬೇಕು ಎಂದು ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅಮಾನವೀಯವಾಗಿ ವರ್ತಿಸುವ ಅಧಿಕಾರ ಯಾರಿಗೂ ಇಲ್ಲ. ಅಧಿಕಾರದಲ್ಲಿ ಇರುವವರು ಇರಬಹುದು, ಸೆಲೆಬ್ರಿಟಿ ಆಗಬಹುದು. ಯಾರಿಗೂ ವಿಶೇಷ ಅಧಿಕಾರ ಇಲ್ಲ. ಕಾನೂನಿನ ಮುಂದೆ ನಾವೆಲ್ಲರೂ ಸಮಾನರು. ಕಾನೂನನ್ನು ಕೈಗೆ ತೆಗೆದುಕೊಳ್ಳುವುದೇ ಅಪರಾಧ.

ಅದು ಮರ್ಡರ್ ಆಗುವ ಮಟ್ಟಕ್ಕೆ ಹೋದರೆ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಳ್ಳಬೇಕು ಎಂದು ಹೇಳಿದರು.

ಕೊಲೆಯಲ್ಲಿ ಹಲವಾರು ರೀತಿ ಇವೆ. ಇದು ಕಾನ್ಫರೆಸಿ ಮಾಡಿ ಮರ್ಡರ್ ಮಾಡಿರುವ ಪ್ರಕರಣ. ಇದೊಂದು ಗಂಭೀರ ಪ್ರಕರಣ, ದರ್ಶನ್ ಪ್ರಕರಣದಲ್ಲಿ ಆರಂಭದಲ್ಲಿ ತನಿಖೆ ಚುರುಕಾಗಿ ನಡೀತಿದೆ. ಕೊನೆಯವರೆಗೂ ಇದೇ ಚುರುಕುತನ, ನಿಯತ್ತು ತನಿಖೆಯಲ್ಲಿರಬೇಕು. ಹಾಗಾದಾಗ ಮಾತ್ರ ತಪ್ಪಿತಸ್ಥರಿಗೆ ಶಿಕ್ಷೆಯಾಗುತ್ತದೆ ಎಂದು ಹೇಳಿದರು.

ಶಿಗ್ಗಾಂವಿಗೆ ಉಪಚುನಾವಣೆ ಪ್ರಕ್ರಿಯೆ ಪ್ರಾರಂಭವಾಗಿಲ್ಲ: ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಪ್ರಕ್ರಿಯೆ ಪ್ರಾರಂಭವಾಗಿಲ್ಲ. ನಾನಿನ್ನು ರಾಜೀನಾಮೆ ಕೊಟ್ಟಿಲ್ಲ. ಇಂದಿಗೂ ನಾನು ಶಿಗ್ಗಾಂವಿ ಕ್ಷೇತ್ರದ ಶಾಸಕ. ನಾನು ರಾಜಿನಾಮೆ ಕೊಟ್ಟ ನಂತರ ಉಪಚುನಾವಣೆ ಪ್ರಕ್ರಿಯೆ ಪ್ರಾರಂಭವಾಗುತ್ತದೆ ಎಂದರು.

ತಮ್ಮ ಪುತ್ರನಿಗೆ ಉಪ ಚುನಾವಣೆಯಲ್ಲಿ ಟಿಕೆಟ್ ನೀಡುವ ವಿಚಾರದ ಕುರಿತು ಕೇಳಿದ ಪ್ರಶ್ನೆಗೆ ಟಿಕೆಟ್ ವಿಚಾರದಲ್ಲಿ ಪಕ್ಷ ತೀರ್ಮಾನ ಮಾಡುತ್ತದೆ. ಪಕ್ಷ ಮಾಡುವ ತೀರ್ಮಾನಕ್ಕೆ ನಾವು ಬದ್ಧವಾಗಿರಬೇಕು. ಪಕ್ಷ ಯಾರಿಗೇ ಟಿಕೆಟ್ ಕೊಟ್ಟರು ಅವರ ಪರವಾಗಿ ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ ಎಂದರು.

ಉ.ಕ. ಅನ್ಯಾಯದ ಪ್ರಶ್ನೆ ಇಲ್ಲ: ಕೇಂದ್ರ ಸಂಪುಟದಲ್ಲಿ ಉತ್ತರ ಕರ್ನಾಟಕಕ್ಕೆ ಅನ್ಯಾಯದ ಪ್ರಶ್ನೆಯೇ ಇಲ್ಲ. ಕರ್ನಾಟಕಕ್ಕೆ ಹೆಚ್ಚು ಸಚಿವ ಸ್ಥಾನಗಳು ಸಿಕ್ಕಿವೆ. ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಿದ್ದಾರೆ. ಎನ್.ಡಿ.ಎ ಅಭ್ಯರ್ಥಿಯಾಗಿ ಮೋದಿ ಅವರನ್ನು ಆಯ್ಕೆ ಮಾಡುವ ಪ್ರಕ್ರಿಯೆಯಲ್ಲಿ ಭಾಗಿಯಾದ ಸೌಭಾಗ್ಯ ನನ್ನದು.

ಕರ್ನಾಟಕಕ್ಕೆ ಎಷ್ಟು ಮಂತ್ರಿ ಸ್ಥಾನ ಕೊಡಬೇಕೊ ಅಷ್ಟು ಸಚಿವ ಸ್ಥಾನ ಕೊಟ್ಟಿದ್ದಾರೆ. ಇನ್ನೇನು ನಿರೀಕ್ಷೆ ಮಾಡಲು ಸಾಧ್ಯವಿಲ್ಲ. ಮೂವರಿಗೆ ಸಂಪುಟ ದರ್ಜೆ ಮತ್ತು ಇಬ್ಬರಿಗೆ ರಾಜ್ಯ ಖಾತೆ ಕೊಡಲಾಗಿದೆ. ಪ್ರದೇಶವಾರು ಸಚಿವ ಸ್ಥಾನ ಹಂಚಿಕೆ ಬಗ್ಗೆ ವಿಚಾರ ಮಾಡಬಾರದು. ಸಮಗ್ರ ಕರ್ನಾಟಕ ಅಭಿವೃದ್ಧಿಗೆ ನಾವೆಲ್ಲ ಕೆಲಸ ಮಾಡಬೇಕು ಎಂದು ಹೇಳಿದರು.


Share It

You cannot copy content of this page