ಬೆಂಗಳೂರು: ರಾಜ್ಯದಲ್ಲಿ ದಿನೇದಿನೆ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿದ್ದು, ಕೋವಿಡ್ ಕಾರಣದಿಂದ ಸಾವನ್ನಪ್ಪಿದ ಮೊದಲ ಪ್ರಕರಣ ರಾಜ್ಯದಲ್ಲಿ ವರದಿಯಾಗುವ ಮೂಲಕ ಆತಂಕ ಮೂಡಿಸಿದೆ.
ಕೆಲವು ವಾರಗಳಿಂದ ಅಂಗಾಗ ವೈಫಲ್ಯದಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ವೈಟ್ಫೀಲ್ಡ್ನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅವರುಮೇ 17 ರಂದು ಮೃತಪಟ್ಟಿದ್ದು, ಅವರಿಗೆ ಕರೋನಾ ಪರೀಕ್ಷೆ ನಡೆಸಲಾಗಿತ್ತು. ಇದೀಗ ಅವರಿಗೆ ಕರೋನಾ ಇರುವುದು ದೃಢಪಟ್ಟಿದ್ದು, ಕರೋನಾದಿಂದಲೇ ಅವರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.
ರಾಜ್ಯದಲ್ಲಿ ಈವರೆಗೆ 36 ಕರೋನಾ ಪಾಸಿಟೀವ್ ಪ್ರಕರಣಗಳು ಕಂಡುಬಂದಿದ್ದು, ರಾಜಧಾನಿ ಬೆಂಗಳೂರಿನಲ್ಲಿಯೇ 32 ಪ್ರಕರಣಗಳು ಕಂಡುಬಂದಿವೆ. ಉಸಿರಾಟದ ಮಸ್ಯೆಇರುವ ವ್ಯಕ್ತಿಗಳು ಹಾಗೂ ಎಸ್ಎಆರ್ಐ ಇರುವ ರೋಗಿಗಳಿಗೆ ಕೋವಿಡ್ ಪರೀಕ್ಷೆ ನಡೆಸುವುದನ್ನು ರಾಜ್ಯ ಸರಕಾರ ಕಡ್ಡಾಯಗೊಳಿಸಿದೆ. ಈ ಹಿನ್ನೆಲೆಯಲ್ಲಿ ಕರೋನಾ ಪಾಸಿಟೀವ್ ಸಂಖ್ಯೆ ಹೆಚ್ಚಾಗುತ್ತಿದೆ.
ಕರೋನಾ ನಿಯಂತ್ರಣಕ್ಕೆ ರಾಜ್ಯ ಸರಕಾರ ಈಗಾಗಲೇ ಅನೇಕ ಕ್ರಮಗಳನ್ನು ಕೈಗೊಂಡಿದ್ದು, ಜನರು ಮುಂಜಾಗ್ರತೆಯಿಂದ ಇರುವಂತೆ ಸರಕಾರ ಎಚ್ಚರಿಕೆ ನೀಡಿದೆ. ಹೆಚ್ಚುವರಿ ಬೆಡ್ಗಳ ವ್ಯವಸ್ಥೆ, ಆಕ್ಸಿಜನ್ ವ್ಯವಸ್ಥೆ ಮಾಡಿಕೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ನೇತೃತ್ವದಲ್ಲಿ ಸರಕಾರ ಸಕಲ ಸಿದ್ಧತೆ ನಡೆಸುತ್ತಿದೆ ಎಂದು ಹೇಳಲಾಗುತ್ತಿದೆ.